ಕರ್ನಾಟಕದಲ್ಲಿ 5000 ಗೋಮಾಳ, 2 ಲಕ್ಷ ಬರ ಪರಿಹಾರ ಸೇರಿ ಹಲವು ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Aug 26, 2023 05:11 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ (ಸಾಂದರ್ಭಿಕ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಭೆಯಲ್ಲಿ ಬಜೆಟ್ನಲ್ಲಿ ಘೋಷಿಸಲಾದ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸೂಚನೆಯನ್ನು ನೀಡಲಾಗಿದೆ. ಇದರ ವಿವರವನ್ನು ನೀಡಿದ್ದಾರೆ ಮಾರುತಿ ಎಚ್.
ಬೆಂಗಳೂರು: ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶ, 50 ಸಾವಿರ ಎಕರೆ ಹುಲ್ಲುಗಾವಲು ಪ್ರದೇಶ, 2 ಲಕ್ಷ ಬರ ಪರಿಹಾರ ಕಾಮಗಾರಿ, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿ ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನವಾಗಿದೆ. 2023- 24 ನೇ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, 27903 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವುದು, 5000 ಶಾಲಾ ಆರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿಗಳ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಕಾಲಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು ಮತ್ತು ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ ನೀಡಿರುವುದಾಗಿ ತಿಳಿಸಿದರು.
ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ
ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ವಾರಾಂತ್ಯ ಗ್ರಂಥಾಲಯ: ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯ ಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೂಸಿನ ಮನೆ: ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳು ಸೂಚಿಸಿದರು.
ಮುಖ್ಯಮಂತ್ರಿಗಳ ಫೆಲೋಶಿಪ್ ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವ ಖರ್ಗೆ ವಿವರಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.
ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆಯುಕ್ತ ಅಂಜುಮ್ ಪರ್ವೇಜ್ ಸಭೆಯಲ್ಲಿ ಉಪಸ್ಥಿತರಿದ್ದರು.
(Karnataka News, Bengaluru News, Politics and Political News from Hindustan Times Kannada. ಕರ್ನಾಟಕಸುದ್ದಿ, ರಾಜಕೀಯ ಸುದ್ದಿ, ರಾಜಕೀಯ ನಾಯಕರ ಸುದ್ದಿಗಳ ಮತ್ತಷ್ಟುಮಾಹಿತಿಗೆ kannada.hindustantimes.com ಜಾಲತಾಣ ನೋಡಿ)