logo
ಕನ್ನಡ ಸುದ್ದಿ  /  ಕರ್ನಾಟಕ  /  Kempegowda Statue: ಮಾಜಿ ಪ್ರಧಾನಿಗೆ ರಾತ್ರಿ 9 ಗಂಟೆಗೆ ಕರೆ ಮಾಡಿ ನಾಳೆ ಬನ್ನಿ ಅಂದ್ರೆ ಹೇಗೆ? ನಾಟಕ ಸಾಕು ಮಾಡಿ ಎಂದ ಎಚ್‌ಡಿಕೆ

Kempegowda Statue: ಮಾಜಿ ಪ್ರಧಾನಿಗೆ ರಾತ್ರಿ 9 ಗಂಟೆಗೆ ಕರೆ ಮಾಡಿ ನಾಳೆ ಬನ್ನಿ ಅಂದ್ರೆ ಹೇಗೆ? ನಾಟಕ ಸಾಕು ಮಾಡಿ ಎಂದ ಎಚ್‌ಡಿಕೆ

HT Kannada Desk HT Kannada

Nov 12, 2022 10:06 AM IST

ಹೆಚ್‌ ಡಿ ಕುಮಾರಸ್ವಾಮಿ

    • ಕೆಂಪೇಗೌಡರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಕಾರ್ಯಕ್ರಮದ ಹಿಂದಿನ ದಿನ ರಾತ್ರಿ ಕರೆ ಮಾಡಿರುವುದಕ್ಕೆ ಎಚ್‌ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿಯನ್ನು ಆಹ್ವಾನಿಸುವ ಶಿಷ್ಟಾಚಾರ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಹೆಚ್‌ ಡಿ ಕುಮಾರಸ್ವಾಮಿ
ಹೆಚ್‌ ಡಿ ಕುಮಾರಸ್ವಾಮಿ (Twitter)

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಬೃಹತ್‌ ಪ್ರತಿಮೆಗೆ ಉದ್ಘಾಟಿಸಿಲ್ಲ ಎಂಬ ಜೆಡಿಎಸ್‌ ಆರೋಪಕ್ಕೆ ರಾಜ್ಯ ಬಿಜೆಪಿ ಪ್ರತಿಕ್ರಿಯೆ ನೀಡಿದೆ. "ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ ಪತ್ರ ನೀಡಲಾಗಿದೆ ಮತ್ತು ಖುದ್ದಾಗಿ ಬಸವರಾಜ ಬೊಮ್ಮಾಯಿ ಅವರೇ ಕರೆ ಮಾಡಿದ್ದರುʼʼ ಎಂದು ಬಿಜೆಪಿ ತಿಳಿಸಿದೆ. ಮಾಜಿ ಪ್ರಧಾನಿಗೆ ಆಹ್ವಾನ ನೀಡಿದ ದಿನ ಮತ್ತು ಕರೆ ಮಾಡಿದ ಸಮಯದ ಕುರಿತು ತೀವ್ರ ಟೀಕೆಗಳು ವ್ಯಕ್ತವಾಗಿವೆ.

ಟ್ರೆಂಡಿಂಗ್​ ಸುದ್ದಿ

Hassan Scandal: ವಾಟ್ಸ್‌ ಆಪ್‌ ಮೂಲಕವೂ ವಿಡಿಯೋ ಹಂಚಿದರೆ ಕ್ರಮ, ಎಸ್‌ಐಟಿ ಎಚ್ಚರಿಕೆ

ಸೋಮವಾರ ರಾತ್ರಿಯಿಂದ 108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ; ಅವರ ಬೇಡಿಕೆಗಳೇನು?

Hassan Scandal: 4 ದಿನ ಎಸ್‌ಐಟಿ ವಶಕ್ಕೆ ಮಾಜಿ ಸಚಿವ ರೇವಣ್ಣ, ತೀವ್ರ ವಿಚಾರಣೆ ಸಾಧ್ಯತೆ

Bangalore Metro:ಮೆಟ್ರೋದಲ್ಲೇ ಬೆಂಗಳೂರು ಸುತ್ತುವ ಅವಕಾಶ, 5 ವರ್ಷದಲ್ಲಿ ನಮ್ಮ ಮೆಟ್ರೋ ಜಾಲಕ್ಕೆ 16 ಇಂಟರ್‌ಚೇಂಜ್‌ ನಿಲ್ದಾಣಗಳ ಸೇರ್ಪಡೆ

ಜನರ ದಿಕ್ಕು ತಪ್ಪಿಸುವ ಪ್ರಯತ್ನ

ಈ ಕುರಿತು ಇಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿದ್ದಾರೆ. "ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ @H_D_Devegowda ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ @BJP4Karnataka ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆʼʼ ಎಂದು ಎಚ್‌ಡಿಕೆ ಟ್ವೀಟ್‌ ಮಾಡಿದ್ದಾರೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಎಂದು ಅವರು ಪ್ರಶ್ನಿಸಿದ್ದಾರೆ.

ಇದೇನಾ ಸಂಸ್ಕಾರ, ಇದೇನಾ ಶಿಷ್ಟಾಚಾರ?

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ರಾತ್ರಿ ಒಂಬತ್ತು ಗಂಟೆಗೆ ಕರೆ ಮಾಡಿದ್ರೆ ಹೇಗೆ?

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ? ಎಂದು ಎಚ್‌ಡಿಕೆ ಕುಟುಕಿದ್ದಾರೆ.

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಸಬ್‌ ಕಾ ಸರ್ವ ನಾಶ್‌!

'ಸಬ್ ಕಾ ಸಾಥ್, ಸಬ್ ಕಾ ವಿಕಾಸ್'; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ. ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು