Congress Manifesto: ಗ್ಯಾರಂಟಿ ನಂ.3: ಬಡ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆ.ಜಿ ಉಚಿತ ಅಕ್ಕಿ ಘೋಷಿಸಿದ ಕಾಂಗ್ರೆಸ್
Feb 24, 2023 03:26 PM IST
ಕಾಂಗ್ರೆಸ್ ಗ್ಯಾರಂಟಿ ನಂ.3
- ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಎಲ್ಲಾ ಬಡ ಕುಟುಂಬದ ಪ್ರತಿ ಸದಸ್ಯನಿಗೆ, ಪ್ರತಿ ತಿಂಗಳು 10 ಕೆ.ಜಿ ಉಚಿತ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದರು. ಇದು ಮುಂಬರುವ ವಿಧಾನಸಭಾ ಚುನಾವಣೆಗೆ, ರಾಜ್ಯ ಕಾಂಗ್ರೆಸ್ ಘೋಷಿಸಿರುವ ಮೂರನೇ ಭರವಸೆಯಾಗಿದೆ. ಈ ಕುರಿತು ಇಲ್ಲಿದೆ ಮಾಹಿತಿ..
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ಮತದಾರರನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್, ಇಂದು ಮೂರನೇಯ ಮತ್ತು ಮಹತ್ವದ ಗ್ಯಾರಂಟಿ ಯೋಜನೆಯನ್ನು ಘೋಷಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಎಲ್ಲಾ ಬಡ ಕುಟುಂಬದ ಪ್ರತಿ ಸದಸ್ಯನಿಗೆ, ಪ್ರತಿ ತಿಂಗಳು 10 ಕೆ.ಜಿ ಉಚಿತ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದರು. ಇದು ಮುಂಬರುವ ವಿಧಾನಸಭಾ ಚುನಾವಣೆಗೆ, ರಾಜ್ಯ ಕಾಂಗ್ರೆಸ್ ಘೋಷಿಸಿರುವ ಮೂರನೇ ಭರವಸೆಯಾಗಿದೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 10 ಕೆ.ಜಿ ಉಚಿತ ಅಕ್ಕಿಯ ಭರವಸೆ ಘೋಷಿಸಿರುವುದಾಗಿ ಸ್ಪಷ್ಟಪಡಿಸಿದರು.
ನಾವು ಈಗಾಗಲೇ ಉಚಿತ ವಿದ್ಯುತ್ ಮತ್ತು ಮಹಿಳಯರಿಗೆ ತಿಂಗಳಿಗೆ 2,000 ರೂ. ಸಹಾಯಧನದ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದೇವು. ಇದೀಗ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು ಹತ್ತು ಕೆ.ಜಿ ಉಚಿತ ಅಕ್ಕಿ ನೀಡುವ ಘೋಷಣೆ ಮಾಡಿದ್ದೇವೆ. ನಮ್ಮ ಸರ್ಕಾರ ರಚನೆಯಾದ ಮೇಲೆ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಇದೇ ವೇಳೆ ಡಿಕೆ ಶಿವಕುಮಾರ್ ವಾಗ್ದಾನ ಮಾಡಿದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಕುರಿತು, ರಾಜ್ಯದ ಜನರು ಪ್ರಶಂಸೆ ವ್ಯಕ್ತಪಡಿಸಿದ್ದರು. ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ಜಾರಿಗೆ ತರದೇ ಹೋಗಿದ್ದರೆ, ಕೋವಿಡ್ ಸಮಯದಲ್ಲಿ ನಾವು ಬದುಕುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದ್ದರು. ಹೀಗಾಗಿ ಜನರ ಅಶೋತ್ತರಗಳನ್ನು ಪರಿಗಣಿಸಿ ಉಚಿತ ಅಕ್ಕಿ ನೀಡುವ ಭರವಸೆಯನ್ನು ನಾವು ಘೋಷಿಸಿದ್ದೇವೆ ಎಂದು ಡಿಕೆಶಿ ಮಾಹಿತಿ ನೀಡಿದರು.
ಸಿದ್ದರಾಮಯ್ಯ ಸರ್ಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು, ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಶಕ್ತಿ ತುಂಬುವ ಮೂಲಕ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಗುರಿಯೊಂದಿಗೆ ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಡಿಕೆಶಿ ಹೇಳಿದರು.
ಇನ್ನು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಮರುಕ್ಷಣವೇ, ರಾಜ್ಯದ ಬಡಕುಟುಂಬದ ಪ್ರತಿ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ ಎಂದು ಭರವಸೆ ನೀಡಿದರು.
ಬಿಜೆಪಿ ಸರ್ಕಾರದ ಸುಳ್ಳಿನಿಂದ ಬೇಸತ್ತಿರುವ ರಾಜ್ಯದ ಜನ, ಕಾಂಗ್ರೆಸ್ ಮೇಲೆ ಭರವಸೆ ಇಟ್ಟುಡಿದ್ದಾರೆ. ಜನರ ಭರವಸೆಯನ್ನು ಉಳಿಸಿಕೊಳ್ಳಲು ನಾವು ಗ್ಯಾರಂಟಿ ಕಾರ್ಡ್ ಅನ್ನು ಪ್ರತಿ ಮನೆಗೂ ನೀಡುತ್ತಿದ್ದೇವೆ. ಹತ್ತು ಕೆ.ಜಿ ಅಕ್ಕಿಗೆ ಖರ್ಚಾಗುವ ಹಣವನ್ನು ರಾಜ್ಯದ ಖಜಾನೆಯಿಂದ ಹೇಗೆ ಹೊಂದಿಸಲಾಗುವುದು ಎಂಬ ಮಾಹಿತಿಯನ್ನೂ ನಾವು ಜನರಿಗೆ ನೀಡುತ್ತೇವೆ. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವಿನಿಂದ ಮಲಗಬಾರದು ಎಂಬುದು ನಮ್ಮ ಉದ್ದೇಶ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಒಟ್ಟಿನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು, ಪ್ರತಿಪಕ್ಷ ಕಾಂಗ್ರೆಸ್ ತನ್ನ ಮೂರನೇಯ ಮತ್ತು ಮಹತ್ವದ ಭರವಸೆಯನ್ನು ಘೋಷಿಸಿದೆ ಎಂದು ಹೇಳಬಬಹುದು.
ವಿಭಾಗ