Nalin Kumar Kateel: ಪಲಾಯನ ಮಾಡಲ್ಲ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದ ನಳಿನ್ ಕುಮಾರ್ ಕಟೀಲ್
Jun 23, 2023 06:00 AM IST
ನಳಿನ್ ಕುಮಾರ್ ಕಟೀಲ್
- Kalaburagi News: ಅಕ್ಕಿ ವಿಚಾರದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯದಲ್ಲಿ ದ್ವೆಷದ ರಾಜಕಾರಣ ಪ್ರಾರಂಭ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದರು.
ಕಲಬುರಗಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಆ ಸೋಲನ್ನು ವಿನಮ್ರತೆಯಿಂದ ಸ್ವೀಕರಿಸಿ, ಪುನಃ ಹೋರಾಟ ಮಾಡಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಸಂಜೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಚಾರದಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದರು. ರಾಜ್ಯದಲ್ಲಿ ದ್ವೆಷದ ರಾಜಕಾರಣ ಪ್ರಾರಂಭ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ. ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ತೆಗೆದುಕೊಳ್ಳುತ್ತಿದ್ದಾರೆ. ಪಠ್ಯ ಪುಸ್ತಕ ಬದಲಾವಣೆ ತಂದರು. ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಲು ಸೂಚಿಸಿದ್ದಾರೆ. ಇದು ದ್ವೇಷದ ರಾಜಕಾರಣ ಅಲ್ಲದೆ ಬೇರೆನು ಎಂದು ಪ್ರಶ್ನಿಸಿದರು.
ಪ್ರತಿಪಕ್ಷದ ನಾಯಕನ ಅವಶ್ಯಕತೆ ಇರುವುದು ಅಧಿವೇಶನದ ಸಮಯದಲ್ಲಿ. ಹೀಗಾಗಿ ಪ್ರತಿಪಕ್ಷದ ನಾಯಕನ ಆಯ್ಕೆ ಅಧಿವೇಶನದ ಒಳಗೆ ಮಾಡುತ್ತೇವೆ ಎಂದರು.
ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡುತ್ತಿದೆ. ಕೇಂದ್ರ ಸರ್ಕಾರದ ಪಾಲು ಬಿಟ್ಟು ಇವರು ಮೊದಲು ಹೇಳಿದಂತೆ ಹತ್ತು ಕೆಜಿ ಅಕ್ಕಿ ನೀಡಲಿ ಎಂದರು. ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಮುಂದಿನ ತಿಂಗಳಿನಿಂದ ವೇತನ ಕೊಡಲಿ ಹಾಗೂ ಹೆಚ್ಚಳ ಮಾಡಿರುವ ವಿದ್ಯುತ್ ದರ ಕಡಿಮೆ ಮಾಡಲಿ ಎಂದು ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಭಾರತೀಯ ಜನತಾ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಮ್ಮ ಪಕ್ಷದ ಇಬ್ಬರು ಶಾಸಕರು ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಇಬ್ಬರು ಶಾಸಕರು ಕೇವಲ ನಿಮ್ಮ ಕ್ಷೇತ್ರಕ್ಕೆ ಸಿಮೀತವಾಗದೆ, ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಿ ಎಂದರು.
ರಾಜ್ಯದಲ್ಲಿ ಸುಳ್ಳು ಆಶ್ವಾಸನೆ, ಗ್ಯಾರಂಟಿ ಕೊಡುವ ಮೂಲಕ ಕಾಂಗ್ರೆಸ್ ಮತದಾರರಿಗೆ ವಂಚನೆ ಮಾಡಿದೆ. ಐದು ಯೋಜನೆಗಳನ್ನು ನಾಡಿನ ಜನತೆಗೆ ಯಾವುದೇ ಶರತ್ತುಗಳಿಲ್ಲದೆ ನೀಡಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತವಾಗಿ ಹತ್ತು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿ, ಇದೀಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನುಡಿದಂತೆ ನಾಡಿನ ಜನತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಬೇಕು. ಕಾಂಗ್ರೆಸ್ ಸರ್ಕಾರ ರಚನೆಯಾದ 40 ದಿನಗಳಲ್ಲೇ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ, ಹೋರಾಟ ನಡೆಯುತ್ತಿವೆ ಎಂದರೆ, ಸರ್ಕಾರ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಒಂಬತ್ತು ವರ್ಷ ಪೂರೈಸುವ ಹಿನ್ನೆಲೆಯಲ್ಲಿ ದೇಶದ ಜನರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ. ಶೌಚಾಲಯ, ಜನಧನ ಖಾತೆ, ಉಜ್ವಲ ಯೋಜನೆಯಡಿ ಗ್ಯಾಸ್, ಮುದ್ರಾ ಯೋಜನೆ, ಕಿಸಾನ್ ಸಮ್ಮಾನ ನಿಧಿ, ಪ್ರತಿ ಮನೆ ಮನೆಗೂ ನಲ್ಲಿಯ ಮೂಲಕ ನೀರು ಸೇರಿದಂತೆ ರೈಲ್ವೆ, ರಸ್ತೆ, ಮೆಡಿಕಲ್ ಕಾಲೇಜಿನ ಸೌಕರ್ಯಗಳನ್ನು ಒದಗಿಸುವ ಮೂಲಕ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೆ ಮುಟ್ಟಿಸುವ ಮೂಲಕ ಬರುವಂತಹ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.