ಕಾವೇರಿ ನೀರು ಹಂಚಿಕೆಯಲ್ಲಿ ಮಧ್ಯ ಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡ ಪತ್ರ; ಗೌಡರ ಪತ್ರಕ್ಕೆ ಸಿಎಂ ಸ್ವಾಗತ
Sep 25, 2023 04:34 PM IST
ಕಾವೇರಿ ನೀರು ಹಂಚಿಕೆಯಲ್ಲಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡ ಪತ್ರ; ಗೌಡರ ಪತ್ರಕ್ಕೆ ಸಿಎಂ ಸ್ವಾಗತ
- ಕಾವೇರಿ ನೀರು ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಬರದ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆಯೂ ತಮಿಳುನಾಡಿಗೆ ನೀರು ಹರಿಸುವುದು ಅಸಾಧ್ಯ. ಹಾಗಾಗಿ ಈ ವಿಚಾರದಲ್ಲಿ ನೀವು ಮಧ್ಯ ಪ್ರವೇಶಿಸಬೇಕು ಎಂದು ಪಿಎಂ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಎಚ್. ಡಿ ದೇವೇಗೌಡ.
Cauvery Water Dispute: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪಿಎಂ, ರಾಜ್ಯ ಸಭಾ ಸದಸ್ಯ ಎಚ್.ಡಿ ದೇವೇಗೌಡ ಪತ್ರ ಬರೆದಿದ್ದಾರೆ.
ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ನೈರುತ್ಯ ಮುಂಗಾರು ರಾಜ್ಯಕ್ಕೆ ಅಪ್ಪಳಿಸಿಲ್ಲ. ರಾಜ್ಯಕ್ಕೆ ನಿಗದಿತ ಮಳೆಯ ಕೊರೆತೆಯೂ ಎದುರಾಗಿದೆ. ಕೃಷಿ ಬಳಕೆ ಒತ್ತಟಿಗಿರಲಿ, ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ರಾಜ್ಯದಾದ್ಯಂತ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಕರ್ನಾಟಕದಲ್ಲಿ ಸುರಿದ ಮಳೆ 123 ವರ್ಷಗಳ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಮಳೆ. ಇದರ ಜತೆಗೆ ಈಗಾಗಲೇ ತಮಿಳುನಾಡು ಕೇಳಿದಷ್ಟು ನೀರನ್ನು ಈ ವರೆಗೂ ಕರ್ನಾಟಕ ಹರಿಸುತ್ತಲೇ ಬಂದಿದೆ.
ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ನೀರಿನ ಸಂಗ್ರಹವಿದೆ. ಕೃಷ್ಣ ರಾಜ ಸಾಗರ, ಕಬಿನಿ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿ ಅಳತೆಯ ಪ್ರಕಾರ 104.55 ಟಿಎಂಸಿ ನೀರು ಇರಬೇಕಿತ್ತು. ಆದರೆ, ಪ್ರಸ್ತುತ 51.10 ಟಿಎಂಸಿ ನೀರು ಮಾತ್ರ ಇದೆ. ಹಾಗಾಗಿ ಕರ್ನಾಟಕದ ಸ್ಥಿತಿಗತಿಯನ್ನೂ ತಾವು ಅರಿತುಕೊಂಡು, ಮಧ್ಯಸ್ಥಿಕೆ ವಹಿಸಬೇಕು.
40 ಟಿಎಂಸಿಗಿಂತ ಹೆಚ್ಚಿನ ಹೆಚ್ಚುವರಿ ಬಿಡುಗಡೆಗೆ ತಮಿಳುನಾಡು ಒತ್ತಾಯಿಸಿದೆ. ಇದು ಕೇವಲ ಅನ್ಯಾಯದ ಧೋರಣೆ ಮಾತ್ರವಲ್ಲ. ಸಮಾನತೆ ಮತ್ತು ನೈಸರ್ಗಿಕ ತತ್ವಗಳ ವಿರುದ್ಧವಾಗಿದೆ. ಸಂವಿಧಾನದ ಪ್ರಕಾರ ಕುಡಿಯುವ ನೀರು ಒದಗಿಸುವುದು ಮೂಲಭೂತ ಹಕ್ಕು. ಹಾಗಾಗಿ ಈ ಅಂಶವನ್ನು ಕೊಂಚ ಗಂಭೀರವಾಗಿ ಪರಿಗಣಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದೇವೇಗೌಡರ ಪತ್ರಕ್ಕೆ ಸಿಎಂ ಸ್ವಾಗತ
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಪಿಎಂ ದೇವೇಗೌಡ ಅವರ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು Xನಲ್ಲಿ ಪ್ರತಿಕ್ರಿಯಸಿರುವ ಅವರು, ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ದೇವೇಗೌಡ ಅವರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ.
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ.
ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ. ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ.
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.