Bengaluru Rain: ಮಳೆಗೆ ತತ್ತರಿಸಿದ ಬೆಂಗಳೂರು, ಇಂದೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ, ಓದಿ ಇಂದಿನ ಹವಾಮಾನ ವರದಿ
May 22, 2023 08:42 AM IST
Bengaluru Rain: ಮಳೆಗೆ ತತ್ತರಿಸಿದ ಬೆಂಗಳೂರು, ಇಂದೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆ, ಓದಿ ಇಂದಿನ ಹವಾಮಾನ ವರದಿ. (ANI Photo)
- Bengaluru Rain: ಭಾನುವಾರ ಸುರಿದ ಮಳೆಗೆ ಬೆಂಗಳೂರಿನಲ್ಲಿ ಇಂದೂ ವಾಹನ ಸವಾರರು ಪರದಾಡುತ್ತಿದ್ದಾರೆ. ಸೋಮವಾರವೂ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಕರ್ನಾಟಕದ ಕೆಲವು ಕಡೆ ನಿನ್ನೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸಾಕಷ್ಟು ಹಾನಿಯುಂಟು ಮಾಡಿದೆ. ಹವಾಮಾನ ಇಲಾಖೆಯ ಅಪ್ಡೇಟ್ ಪ್ರಕಾರ ಬೆಂಗಳೂರಿನಲ್ಲಿ ನಿನ್ನೆ ಸರಾಸರಿ 33 ಮೀಟರ್ ಮಳೆಯಾಗಿದೆ. ನಂದಿನಿ ಲೇಔಟ್ನಲ್ಲಿ ಗರಿಷ್ಠ 44 ಮೀ. , ಪುಲಕೇಶಿ ನಗರದಲ್ಲಿ 44 ಮೀ., ಕುಶಾಲ್ನಗರದಲ್ಲಿ 35 ಮೀಟರ್ ಮಳೆಯಾಗಿದೆ. ಕೆಆರ್ ಪುರದಲ್ಲಿ 36 ಮೀಟರ್ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಇಂದು ಕೂಡ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಹವಾಮಾನ ವರದಿ
ಭಾನುವಾರ ರಾತ್ರಿ ಕರಾವಳಿಯ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗಿತ್ತು. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮುಂದಿನ 24 ಗಂಟೆ ದಕ್ಷಿಣ ಕನ್ನಡ ಮತ್ತು ಉಡುಪಿಯ ವಿವಿಧ ಕಡೆಗಳಲ್ಲಿ ಹಗುರ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರೆಯಲಿದೆ. ಇಂದು ಮತ್ತು ಮೇ 25ರಂದು ಕರಾವಳಿಯ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಹೆಚ್ಚಿರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ವರದಿ
ಇಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲಿ ಹಗುರ, ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಹವಮಾನ ವರದಿ
ನಿನ್ನೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಆಲಿಕಲ್ಲು ಮಳೆಯಾಗಿದೆ. ಇಂದು ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಯಾವುದೇ ಕಡೆಗಳಲ್ಲಿಯೂ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿಲ್ಲ. ಇಂದು ದಕ್ಷಿಣ ಒಳನಾಡಿನ ಎಲ್ಲಾ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿಗರನ್ನು ಭಾನುವಾರದ ಮಳೆ ಬೆಚ್ಚಿ ಬೀಳಿಸಿತ್ತು. ಅಂಡರ್ಪಾಸ್ನಲ್ಲಿ ಮಳೆ ನೀರು ತುಂಬಿ ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಕೆಆರ್ ಪುರ ಅಂಡರ್ಪಾಸ್ನಲ್ಲಿ ಕಾರೊಂದು ಸಿಲುಕಿ ಯುವತಿಯೊಬ್ಬರು ಮೃತಪಟ್ಟ ಧಾರುಣ ಘಟನೆಯೂ ನಡೆದಿದೆ. ಮೈಸೂರಿನ ಹುಣಸೂರಿನಲ್ಲಿಯೂ ರೈತರೊಬ್ಬರು ಮಳೆಯ ಅವಾಂತರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಇಂದಿನಿಂದ ಮೂರು ದಿನ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆ ಪ್ರಮಾಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.