Jai Bharat Samavesh: ಮೇ 10ನೇ ತಾರೀಖು ಕರ್ನಾಟಕದ ಸ್ವಾಭಿಮಾನ ಉಳಿಸುವ ದಿನ: ಡಿಕೆಶಿ
Apr 16, 2023 04:44 PM IST
ಕೋಲಾರದಲ್ಲಿ ಜೈ ಭಾರತ್ ಸಮಾವೇಶ
- ಕೋಲಾರದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ಮೇ 10ನೇ ತಾರೀಖು ರಾಜ್ಯದಲ್ಲಿ ಕೇವಲ ಮತದಾನದ ದಿನ ಮಾತ್ರವಲ್ಲ. ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ, ಕರ್ನಾಟಕ ರಾಜ್ಯದ ಸ್ವಾಭಿಮಾನ ಉಳಿಸುವ ದಿನ ಎಂದರು.
ಕೋಲಾರ: ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು, ಸತ್ಯವನ್ನು ಉಳಿಸಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸತ್ಯ ನುಡಿದ ಈ ಜಾಗದಲ್ಲೇ ಸಮಾವೇಶ ಮಾಡಲಾಗುತ್ತಿದೆ. ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಕೋಲಾರದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ಮೇ 10ನೇ ತಾರೀಖು ರಾಜ್ಯದಲ್ಲಿ ಕೇವಲ ಮತದಾನದ ದಿನ ಮಾತ್ರವಲ್ಲ. ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ, ನಿಮ್ಮ ಭವಿಷ್ಯ ಬರೆಯುವ ದಿನ, ಜನರ ಸಮಸ್ಯೆಗಳಿಗೆ ಮುಕ್ತಿ ನೀಡುವ ದಿನ, ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸುವ ದಿನ, ಕರ್ನಾಟಕ ರಾಜ್ಯದ ಸ್ವಾಭಿಮಾನ ಉಳಿಸುವ ದಿನ. ಗೃಹಜ್ಯೋತಿ, ಗೃಹಲಕ್ಷ್ಮಿ ಉಳಿಸುವ ದಿನ, ಬಡವರಿಗೆ ಅನ್ನಭಾಗ್ಯ ನೀಡುವ ದಿನ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ದಿನ ಎಂದರು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಇಂದು ಕಾಂಗ್ರೆಸ್ ಪಕ್ಷ ಜನರಿಗೆ ಬೆಲೆ ಏರಿಕೆಯಿಂದ ಮುಕ್ತಿ ನೀಡಲು ನಾಲ್ಕು ಗ್ಯಾರಂಟಿ ಯೋಜನೆ ನೀಡಿದೆ. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ ಹಣ ಉಳಿತಾಯ ಮಾಡಬಹುದಾಗಿದೆ. ಈ ಯೋಜನೆಯ ಗ್ಯಾರಂಟಿ ಕಾರ್ಡ್ ಗೆ ನಾನು ಸಿದ್ದರಾಮಯ್ಯ ಅವರು ಸಹಿ ಹಾಕಿದ್ದು, ಅಧಿಕಾರಕ್ಕೆ ಬಂದ ಮೊದಲ ದಿನ ನಾವು ಈ ಯೋಜನೆ ಜಾರಿ ಮಾಡುತ್ತೇವೆ. ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ. 47 ಜನ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಯಾರೆಲ್ಲಾ ಪಕ್ಷ ಸೇರುತ್ತಾರೆ ಎಂದು ಮುಂದೆ ಮಾತನಾಡುತ್ತೇನೆ ಎಂದು ಹೇಳಿದರು.
'ಮೋದಿ ಉಪನಾಮ' ಹೇಳಿಕೆ ನೀಡಿ ಲೋಕಸಭೆಯಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲಿ ಆ ಹೇಳಿಕೆ ನೀಡಿದ್ದರೋ ಅಲ್ಲಿಗೆ ಬಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೋಲಾರದಲ್ಲಿ ಜೈ ಭಾರತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿಒಟ್ಟಾಗಿ ಹೋರಾಟ ಮಾಡುತ್ತಿರುವುದು ಸಂತೋಷದ ವಿಚಾರ. ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಬೇಕಾಗಿದೆ. ಒಂದು ಮಾತು ನೆನಪಿನಲ್ಲಿಡಿ. ಬಿಜೆಪಿ ಸರ್ಕಾರ 40% ಕಮಿಷನ್ ಹಣದಲ್ಲಿ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಾರೆ. ನಿಮ್ಮಿಂದ ಕದ್ದ ಹಣದಲ್ಲಿ ಸರ್ಕಾರ ಬೀಳಿಸಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಾರೆ. ಹೀಗಾಗಿ ನೀವು ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು. ಆಗ ಬಿಜೆಪಿಗೆ ಭ್ರಷ್ಟಾಚಾರ ಮಾಡಲು ಅವಕಾಶ ತಪ್ಪಿಸಬಹುದು" ಎಂದರು.
2019ರಲ್ಲಿ ಕೋಲಾರದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ, ಚೌಕೀದಾರ್ ಶೇಕಡ 100ರಷ್ಟು ಕಳ್ಳ ಇದ್ದಾನೆ. ಒಂದು ಸಣ್ಣ ಪ್ರಶ್ನೆ ಕೇಳ್ತೇನೆ. 'ಎಲ್ಲಾ ಕಳ್ಳರು ಹೇಗೆ ಮೋದಿ ಎಂಬ ಸರ್ನೇಮ್ಗಳನ್ನು ಹೊಂದಿದ್ದಾರೆ? ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ, ಇನ್ನೂ ಹುಡುಕಾಡಿದ್ರೆ ಇನ್ನಷ್ಟು ಮೋದಿಗಳು ಬಯಲಾಗಬಹುದು ಎಂದು ಹೇಳಿಕೆ ನೀಡಿದ್ದರು.
ಇದನ್ನು ಖಂಡಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಮಾರ್ಚ್ 23 ರಂದು ಈ ಪ್ರಕರಣದ ಅಂತಿಮ ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿದೆ. ಅಲ್ಲದೇ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ತೀರ್ಪು ಪ್ರಕಟವಾದ ಬೆನ್ನಲ್ಲೇ ಲೋಕಸಭೆಯಿಂದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿತ್ತು.