Rain Deaths: ಕರ್ನಾಟಕದ ಮಳೆ ಅನಾಹುತಕ್ಕೆ ಮನೆ ಗೋಡೆ ಕುಸಿದು ಮತ್ತೆ ಮೂವರ ಸಾವು; ವಿಜಯನಗರ, ಬೆಳಗಾವಿ, ಹಾಸನ ಜಿಲ್ಲೆಯಲ್ಲಿ ಪ್ರತ್ಯೇಕ ಘಟನೆ
Jul 27, 2023 11:24 AM IST
ಕರ್ನಾಟಕದಲ್ಲಿ ಭಾರೀ ಮಳೆಯಿಂದ ಮನೆ ಕುಸಿದು ಯುವಕ. ವೃದ್ದೆ ಮೃತಪಟ್ಟಿದ್ದಾರೆ.
- Rain Updates ಕರ್ನಾಟಕದಲ್ಲಿ ನಾಲ್ಕೈದು ದಿನದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ಬಹಳಷ್ಟು ಕಡೆ ಅನಾಹುತಗಳಾಗಿ ಮೂವರು ಮೃತಪಟ್ಟಿದ್ದಾರೆ. ಅದರಲ್ಲೂ ಮನೆ ಗೋಡೆ ಕುಸಿತದಿಂದಲೇ ಇಬ್ಬರು ವೃದ್ದೆಯರು, ಒಬ್ಬ ಯುವಕ ಜೀವ ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮಳೆಯಿಂದ ಆಗಿರುವ ಅನಾಹುತಗಳ ವಿವರ ಇಲ್ಲಿದೆ.
ಬೆಂಗಳೂರು: ಮೂರು ದಿನದ ಹಿಂದೆಯಷ್ಟೇ ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಈಗ ಕರ್ನಾಟಕದ ಎರಡು ಕಡೆ ಗೋಡೆ ಕುಸಿದು ಇಬ್ಬರು ವೃದ್ದೆಯರು ಸೇರಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಕರ್ನಾಟಕದಲ್ಲಿ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಹಾವೇರಿ, ದಾವಣಗೆರೆ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಎರಡು ದಿನದ ಹಿಂದೆಯಷ್ಟೇ ಮೃತಪಟ್ಟಿದ್ದರು.
ವೃದ್ದೆಯರ ದುರ್ಮರಣ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕೋಗಳಿ ಗ್ರಾಮದಲ್ಲಿ ನಿನ್ನೆರಾತ್ರಿ ಮನೆಗೋಡೆ ಕುಸಿದು ಗಂಭೀರ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಿಸದೆ 60 ವರ್ಷದ ಹಿರಿಯಮ್ಮ ಕೊನೆಯುಸಿರೆಳೆದಿದ್ದಾರೆ. ಈ ವೇಳೆ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ಧಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹೂವಿನಹಡಗಲಿ ತಾಲೂಕಿನ ಇಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಗಾಳಿ ಮಳೆಗೆ ಮನೆಗೋಡೆ ಕುಸಿದು ಹಾಸನ ಜಿಲ್ಲೆಯಲ್ಲಿ ವೃದ್ಧೆ ಸಾವನ್ನಪ್ಪಿದ್ದು, ಆಕೆಯ ಪತಿ ಗಾಯ ಗೊಂಡಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಡಿ.ಎಂ.ಕುರ್ಕೆ ಗ್ರಾಮದಲ್ಲಿ ನಡೆದಿದೆ.
ಗೌರಮ್ಮ (62) ಮೃತರು. ಪತಿ ನಟರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಅವಘಡ ಸಂಭವಿಸಿದೆ. ಮನೆಯೊಳಗೆ ಗೌರಮ್ಮ ಅಡುಗೆ ಮಾಡುತ್ತಾ ಕುಳಿತಿದ್ದ ವೇಳೆ ಏಕಾಏಕಿ ಗೋಡೆ ಕುಸಿದು ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ನಟರಾಜು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಶಾಸಕ ಕೆ.ಎಂ.ಶಿವಲಿಂಗೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕ ಸಾವು
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಗಸಿ ಗ್ರಾಮದಲ್ಲಿ ಮಳೆಯಿಂದ ಮನೆಗೋಡೆ ಕುಸಿದು ಕಾಶಿನಾಥ್ ಸುತಾರ್(23) ಎಂಬ ಯುವಕ ಮೃತಪಟ್ಟಿದ್ದಾರೆ. ನಿರಂತರ ಮಳೆಗೆ ಮನೆ ಗೋಡೆ ನೆನೆದು ಈ ಅವಘಡ ಸಂಭವಿಸಿದ್ದು,ಘಟನಾ ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳೆಯಿಂದ ಈ ಅನಾಹುತವಾಗಿದೆ. ಕುಟುಂಬ ನೋಡಿಕೊಳ್ಳಬೇಕಾಗಿದ್ದ ಮಗನೇ ತೀರಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದರು.
38 ಮಂದಿ ಸಾವು
ಬೆಂಗಳೂರಿನಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಈವರೆಗೂ ಕರ್ನಾಟಕದಲ್ಲಿ 38 ಮಂದಿ ಮಳೆ ಅನಾಹುತಕ್ಕೆ ಮೃತಪಟ್ಟಿರುವ ಮಾಹಿತಿ ನೀಡಿದ್ದರು.
ಜೂನ್ 1 ರಿಂದ ಈ ವರೆಗೆ ರಾಜ್ಯದಲ್ಲಿ ನೀರಿನಲ್ಲಿ ಸಿಲುಕಿ, ಸಿಡಿಲು ಬಡಿದು, ಮನೆ ಕುಸಿದು, ಮರ ಬಿದ್ದು ಹಾಗೂ ಭೂಕುಸಿತದಿಂದ ಒಟ್ಟು 38 ಮಾನವ ಜೀವಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ 57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರವಾಗಿ ಹಾಗೂ 2682 ಮನೆಗಳು ಭಾಗಶಃ ಹಾನಿಯಾಗಿದೆ. ಮಳೆಯಿಂದಾಗಿ 105 ಜಾನುವಾರುಗಳು ಮೃತಪಟ್ಟಿವೆ ಎಂದು ಸಭೆಯಲ್ಲಿ ತಿಳಿಸಲಾಗಿತ್ತು.
ರಸ್ತೆ, ಸೇತುವೆ ಹಾಳು
ಮಳೆಯಿಂದಾಗಿ 407 ಕಿ.ಮೀ. ರಾಜ್ಯ ಹೆದ್ದಾರಿ, 425 ಕಿ.ಮೀ. ಜಿಲ್ಲಾ ಹೆದ್ದಾರಿ, ಗ್ರಾಮೀಣ ರಸ್ತೆಗಳು 1277 ಕಿ.ಮೀ. ಒಟ್ಟು 2109 ಕಿ.ಮೀ. ರಸ್ತೆ ಹಾನಿಯಾಗಿದೆ. 189 ಸೇತುವೆಗಳು, 889 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿರುವುದು ವರದಿಯಾಗಿದೆ. 11,995 ವಿದ್ಯುತ್ ಕಂಬಗಳು, 894 ಟ್ರಾನ್ಸ್ಫಾರ್ಮರ್ ಗಳು ಹಾನಿಯಾಗಿದ್ದು, 215 ಕಿ.ಮೀ. ಉದ್ದದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. 185 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 356 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು- ಒಟ್ಟು 541.39 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಜಲಾವೃತಗೊಂಡಿದೆ. ಪ್ರಸ್ತುತ ಎರಡು ಪರಿಹಾರ ಶಿಬಿರ ಗಳಲ್ಲಿ 50 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಸಿಎಂ ಅವರಿಗೆ ಅಧಿಕಾರಿಗಳು ವಿವರ ನೀಡಿದ್ದರು.