HD Kumaraswamy: 'ಯಾರೇ ಕೂಗಾಡಲಿ, ಊರೇ ಹೋರಾಡಲಿ', ಕೋಲಾರ ಜೆಡಿಎಸ್ ಅಭ್ಯರ್ಥಿ ಬದಲಾವಣೆ ಇಲ್ಲ: ಹೆಚ್ಡಿಕೆ!
Nov 23, 2022 06:03 AM IST
ಹೆಚ್ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
- ಕೋಲಾರ ತಾಲೂಕಿನ ಕ್ಯಾಲನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಯಾರನ್ನೇ ಕಣಕ್ಕಿಳಿಸಿದರೂ, ಜೆಡಿಎಸ್ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂಆರ್ ಶ್ರೀನಾಥ್ ಅವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದು, ಕೋಲಾರದ ಜನತೆ ಶ್ರೀನಾಥ್ ಅವರನ್ನು ಬೆಂಬಲಿಸಿದ್ದಾರೆ ಎಂದು ಹೆಚ್ಡಿಕೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋಲಾರ: 2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್, ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಘೋಷಿಸಿದೆ. ಪಂಚರತ್ನ ರಥಯಾತ್ರೆ ಮೂಲಕ ರಾಜ್ಯದ ಮೂಲೆ ಮೂಲೆಯನ್ನು ತಲುಪುವ ನಿರ್ಧಾರ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಸದ್ಯ ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಈ ಮಧ್ಯೆ ಕೋಲಾರದಲ್ಲಿ ಈ ಬಾರಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದು, ಇದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ರಣತಂತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದರೆ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಕೋಲಾರ ತಾಲೂಕಿನ ಕ್ಯಾಲನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿಕೆ, ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಯಾರನ್ನೇ ಕಣಕ್ಕಿಳಿಸಿದರೂ, ನಮ್ಮ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂಆರ್ ಶ್ರೀನಾಥ್ ಅವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದು, ಕೋಲಾರದ ಜನತೆ ಶ್ರೀನಾಥ್ ಅವರನ್ನು ಬೆಂಬಲಿಸಿದ್ದಾರೆ ಎಂದು ಹೆಚ್ಡಿಕೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಕೋಲಾರ ಹಾಗೂ ಚಿಕ್ಕ ಬಳ್ಳಾಪುರ ಕ್ಷೇತ್ರಗಳ 11 ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡುವ ಆಲೋಚನೆ ಪಕ್ಷದ ಮುಂದಿಲ್ಲ. ಕೋಲಾರದಲ್ಲಿ ಸಿದ್ದರಾಮಯ್ಯ ಅವರ ಸ್ಪರ್ಧಿಸುತ್ತಾರೆ ಎಂಬ ಕಾರಣಕ್ಕೆ, ನಾವು ನಮ್ಮ ರಣತಂತ್ರವನ್ನು ಬದಲಾಯಿಸುವ ಅವಶ್ಯಕತೆ ಇಲ್ಲ ಎಂದು ಹೆಚ್ಡಿಕೆ ಹೇಳಿದರು.
2018ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಕೋಲಾರಕ್ಕೆ ಬಂದಿದ್ದರು. ಆಗ ಕ್ಷೇತ್ರದ ಜನ ಜೆಡಿಎಸ್ ಪಕ್ಷಕ್ಕೆ ಭಾರೀ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಉತ್ಸಾಹವನ್ನು ನಾನು ಜನರಲ್ಲಿ ಕಂಡಿದ್ದೇನೆ ಎಂದು ಹೆಚ್ಡಿಕೆ ನುಡಿದರು.
ರಾಜ್ಯದಲ್ಲಿಈ ಬಾರಿ ಕನ್ನಡಿಗರಿಂದ ಕನ್ನಡಿಗರಿಗಾಗಿ ಇರುವ ಜನತಾ ಸರಕಾರ ರಚನೆಯಾಗಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ, ಆರೋಗ್ಯವನ್ನೂ ಲೆಕ್ಕಿಸದೆ ಮುಂದಿನ ನೂರು ದಿನ ರಾಜ್ಯ ಪ್ರವಾಸ ಮಾಡುವ ನಿರ್ಧಾರ ಮಾಡಿದ್ದೇನೆ. ವಿಧಾನಸಭೆ ಕಲಾಪದಲ್ಲಿ ಭಾಗವಹಿಸುವುದು ಕೂಡ ಸದ್ಯ ನನ್ನ ಪ್ರಾಮುಖ್ಯತೆ ಅಲ್ಲ. ಜನರನ್ನು ಭೇಟಿ ಮಾಡಿ ಪಕ್ಷದ ಪರ ಅಲೆ ಸೃಷ್ಟಿಸುವುದೇ ನನ್ನ ಮುಂದಿರುವ ಏಕೈಕ ಗುರಿ ಎಂದು ಮಾಜಿ ಸಿಎಂ ಹೇಳಿದರು.
ಕೋಲಾರ ಜಿಲ್ಲೆಯಲ್ಲಿ ರೈತ ಯುವಕರಿಗೆ ವಧು ಕೊರತೆ ಇದೆ ಎಂಬುದಾಗಿ ಧನಂಜಯ್ ಎಂಬ ಯುವಕ ಸಮಸ್ಯೆ ಹೇಳಿಕೊಂಡಿದ್ದಾರೆ. ಹೀಗಾಗಿಯೇ, ರೈತ ಚೈತನ್ಯ ಜಾರಿ ಮಾಡಲು ಯೋಜನೆ ರೂಪಿಸಿದ್ದೇನೆ. ರೈತರು ಸ್ವಾಭಿಮಾನದಿಂದ ಬದುಕಬೇಕು. ಸರಕಾರ ರಚಿಸಿಯೂ ಆ ಕಾರ್ಯಕ್ರಮ ಜಾರಿಗೆ ತರದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಇದೇ ವೇಳೆ ಹೆಚ್ಡಿ ಕುಮಾರಸ್ವಾಮಿ ಘೋಷಿಸಿದರು.
ಡಿ.7ರಂದು ಕೆಜಿಎಫ್ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದೆ. ಅದೇ ರೀತಿ ಡಿ.8ಕ್ಕೆ ಅಫ್ಜಲ್ಪುರದಲ್ಲಿ ಜೆಡಿಎಸ್ ಸಮಾವೇಶ ನಡೆಯಲಿದೆ.ಕಲಬುರಗಿ ಭಾಗದ 2 ಲಕ್ಷ ಜೆಡಿಎಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೆಚ್ಡಿಕೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೋಲಾರ ಕ್ಷೇತ್ರದ ಅಭ್ಯರ್ಥಿ ಸಿಎಂಆರ್ ಶ್ರೀನಾಥ್, ಎಂಎಲ್ಸಿ ಇಂಚರ ಗೋವಿಂದರಾಜು, ಜೆಡಿಎಸ್ ಮುಖಂಡ ಕೆ.ಬಿ.ಗೋಪಾಲಕೃಷ್ಣ, ತಾಲೂಕು ಅಧ್ಯಕ್ಷೆ ಕುರ್ಕಿ ರಾಜೇಶ್ವರಿ, ಮುಖಂಡರಾದ ವಕ್ಕ ಲೇರಿ ರಾಮು, ಕಡಗಟ್ಟೂರು ವಿಜಯ್ಕುಮಾರ್, ಹರೀಶ್ಗೌಡ, ಲೋಕೇಶ್ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ವಿಭಾಗ