HD Kumaraswamy in Pancharatna Yatra: 2023ಕ್ಕೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರೋದು ನಿಶ್ಚಿತ; ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ
Oct 27, 2022 04:43 PM IST
ಬೆಂಗಳೂರಿನ ಬಸವನಗುಡಿಯಲ್ಲಿ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು.
ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬಸವನಗುಡಿಯಲ್ಲಿ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ನಂತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್- ಬಿಜೆಪಿಯ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ನವರು ಯಾವ ಜೋಡೋ ಆದರೂ ಮಾಡಿಕೊಳ್ಳಲಿ, ಬಿಜೆಪಿ ಯವರು ಯಾವ ಸಂಕಲ್ಪ ಯಾತ್ರೆ ಆದರೂ ಮಾಡಿಕೊಳ್ಳಲಿ. 2023ಕ್ಕೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದ್ದಾರೆ.
ಜನರಿಂದ ಲೂಟಿ ಮಾಡಿದ ಹಣವನ್ನು ಹಂಚಲು ಬರುತ್ತಾರೆ. ಒಂದು ಮತಕ್ಕೆ 2000, ಮತ್ತೆ ಕುಕ್ಕರ್ ಅಂತಾ ಬರ್ತಾರೆ. ಇದೆಲ್ಲ ಹಣ ರಾಜ್ಯದ ಜನರಿಂದ ಲೂಟಿ ಮಾಡಿರುವ ಹಣ. ಆದರೆ ನಾವು ಯಾರು ದುಡ್ಡು ಲೂಟಿ ಹೊಡೆದಿಲ್ಲ ಎಂದು ಹೇಳಿದರು.
ಭಾರತ್ ಜೋಡೋ ದಿಂದ ಜನರ ಸಮಸ್ಯೆ ಗಳ ಅರ್ಥ ಆಗಲ್ಲ ಇವಾಗ ಏನೋ ಕಾಂಗ್ರೆಸ್ ನಾಯಕರು ಪಟ್ಟಿ ಮಾಡ್ತಾರಂತೆ. ಅವರಿಂದ ಏನು ಕೂಡ ಜನರ ಸಮಸ್ಯೆ ನಿವಾರಣೆ ಮಾಡುವುದಕ್ಕೆ ಆಗುವುದಿಲ್ಲ ಎಂದು ಟಾಂಗ್ ನೀಡಿದರು.
ಇಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ. ಪವಿತ್ರ ದಿನ ಅಂತ ಇಂದು ಚಾಲನೆ ಕೊಡಲಾಗಿದೆ. ಪಂಚರತ್ನ ಕಾರ್ಯಕ್ರಮ ಮಹತ್ವದ ಕಾರ್ಯಕ್ರಮ ಎಂದು ಕುಮಾರಸ್ವಾಮಿ ಹೇಳಿದರು.
ಬಡವ, ಶ್ರೀಮಂತ ಅಂತ ತಾರತಮ್ಯ ಇಲ್ಲದೆ ಅತ್ಯಾಧುನಿಕ ಶಿಕ್ಷಣ ಕೊಡಿಸಬೇಕು. ಗ್ರಾಮ ಪಂಚಾಯತಿ, ಪ್ರತಿ ವಾರ್ಡ್ ನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಸರ್ಕಾರ ಕೊಡಬೇಕು. ಉಚಿತ ಶಿಕ್ಷಣ ನೀಡುವ ಕಾರ್ಯಕ್ರಮ ಇದಾಗಿದೆ. ಕೊರೊನಾ ಸಮಯದಲ್ಲಿ ಶಾಲೆ ನಡೆಯದೇ ಇದ್ದರೂ ಖಾಸಗಿ ಶಿಕ್ಷಣ ಸಂಸ್ಥೆಯವರು ಫೀಸ್ ಕಟ್ಟಲೇ ಬೇಕು ಅಂತ ಒತ್ತಡ ಹಾಕಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಕಾರ್ಯಕ್ರಮ ರೂಪಿಸಲಾಗಿದೆ. ಅತ್ಯುತ್ತಮ ಶಿಕ್ಷಣ ನೀಡಲು ಈ ಯೋಜನೆ ರೂಪಿಸಲಾಗಿದೆ. ಮಕ್ಕಳಿಗೆ ಇಂಗ್ಲಿಷ್ ಕೂಡ ಅನಿವಾರ್ಯ. ವೃತ್ತಿ ಬದುಕಿಗೆ ಇದು ಅನುವಾರ್ಯವಾಗಿದೆ ಎಂದು ತಿಳಿಸಿದರು.
ಆರೋಗ್ಯ ವಿಚಾರವಾಗಿ ಎಲ್ಲರಿಗೂ ಉಚಿತ ಚಿಕಿತ್ಸೆ ಸಿಗಬೇಕು. ಕ್ಯಾನ್ಸರ್, ಡಯಾಲಿಸಿಸ್ ಗೆ ಲಕ್ಷಾಂತರ ಹಣ ಕಟ್ಟಬೇಕು. ಕೊರೊನಾ ಸಮಯದಲ್ಲಿ ಎಷ್ಟು ಸಾವು ನೋವು ಆಗಿರೋದನ್ನು ನೋಡಿದ್ದೇವೆ. 6,000 ಗ್ರಾಮ ಪಂಚಾಯತಿಯಲ್ಲಿ ದೊಡ್ಡ ಆಸ್ಪತ್ರೆ ಕಟ್ಟಬೇಕು. ಪ್ರತಿ ಆಸ್ಪತ್ರೆಯಲ್ಲಿ ವೈದ್ಯರು, ಲ್ಯಾಬ್ ಹೀಗೆ ಎಲ್ಲವೂ ಇರಬೇಕು.
ಖಾಸಗಿ ಆಸ್ಪತ್ರೆಯಲ್ಲಿ ಹೊರಗಡೆ ಹೋಗಿ ಎಕ್ಸರೇ ತೆಗೆಸಿ ಅಂತಾರೆ. ಇದು ಬಡವರಿಗೆ ಸಾಧ್ಯವಿಲ್ಲ. ಆರೋಗ್ಯದ ವಿಮೆ ಸರ್ಕಾರವೇ ಮಾಡಬೇಕು. ಗ್ರಾಮ ಮಟ್ಟದಲ್ಲಿ ಹೆರಿಗೆಗೆ ತಕ್ಷಣಕ್ಕೆ ಬೇಕಾದ ಸೌಲಭ್ಯ ಸಿಗಬೇಕು ಎಂದರು.
ಮಹಿಳೆಯರಿಗೆ ಮತ್ತು ಯುವಕರಿಗೆ ಉದ್ಯೋಗ :
ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ನೀಡುವ ಯೋಜನೆ ಹಾಕಿದ್ದೆ. ಆದರೆ ಬಿಜೆಪಿ ಸರ್ಕಾರ ಅದನ್ನು ನಿಲ್ಲಿಸಿದ್ದಾರೆ. 30 ಸಾವಿರ ಕೋಟಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ವರ್ಗದ ಜನರಿಗೆ ಕೊಟ್ಟಿದ್ದೇವೆ ಅಂದ್ರು. ಒಂದು ಮಹಿಳೆ ಬಂದು ಪಾನಿ ಪೂರಿ ಅಂಗಡಿ ಹಾಕಲಿಕ್ಕೆ ಸಹಾಯ ಮಾಡಿ ಅಂದ್ರು. ಆಕೆ ದಲಿತ ಸಮಾಜದ ಹೆಣ್ಣು ಮಗಳು. ನಾನು ವೈಯಕ್ತಿಕವಾಗಿ ಹತ್ತು ಸಾವಿರ ಕೊಟ್ಟೆ. ಆದರೆ ಒಟ್ಟು 80 ಸಾವಿರ ಬೇಕಿತ್ತು. ಅಂಬೇಡ್ಕರ್ ನಿಗಮಕ್ಕೆ ಪತ್ರ ಬರೆದೆ. ಆದರೆ ಇಲ್ಲಿಯವರೆಗೆ ರೆಸ್ಪಾನ್ಸ್ ಇಲ್ಲ. ಮನೆ ಇಲ್ಲದವರಿಗೆ ಮನೆ ಕಟ್ಟುವ ಕಾರ್ಯಕ್ರಮ ಹಾಕಿಕೊಂಡಿದ್ದೆ. ನಾನು ಆಗ ಬೇರೆಯವರ ಹಂಗಿನಲ್ಲಿ ಇದ್ದೆ. ಹಾಗಾಗಿ ಈ ಯೋಜನೆ ಆಗಲಿಲ್ಲ. ನಾನು ಮಾಡಿದ ಯೋಜನೆಯನ್ನು ಮುಂದೆ ಬಂದ ಸರ್ಕಾರಗಳು ಗಾಳಿಗೆ ತೂರಿದವು. ನನ್ನ ಮುಂದಿನ ಯೋಜನೆಯಲ್ಲಿ ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶವಿದೆ ಎಂದು ವಿವರಿಸಿದರು.
ಬಿಜೆಪಿ ಸರ್ಕಾರ ಏನು ಮಾಡಿದ್ದಾರೆ. ಕೆಂಪೇಗೌಡರ ಹೆಸರಿನಲ್ಲಿ ಪ್ರವಾಸ ತಾಣ ಮಾಡಲು ಹೊರಟಿದ್ದಾರೆ. ಆಂಧ್ರಪ್ರದೇಶದಲ್ಲಿ ಅಮರಾವತಿ ಕಟ್ಟುತ್ತೇವೆ ಅಂತ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಣ್ಣು ತೆಗೆದುಕೊಂಡು ಬಂದ್ರು ಎಂದರು.
ಕೆಂಪೇಗೌಡ ಹೆಸರಿನಲ್ಲಿ ವಿವಿ :
ನಾನು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಕೆಂಪೇಗೌಡರ ಹೆಸರಲ್ಲಿ ವಿವಿ ಪ್ರಾರಂಭ ಮಾಡಬೇಕು. ಮಾಗಡಿಯಲ್ಲಿ ಇದನ್ನು ಮಾಡಬೇಕಿದೆ. ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು. ಜನರ ಬದುಕು ಕಟ್ಟಿಕೊಡಬೇಕಿದೆ. ಮಾರ್ಚ್ 15ರ ವರೆಗೆ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡಲಾಗುತ್ತದೆ. ಇದಕ್ಕಾಗಿ ಒಂದು ಅವಕಾಶ ಕೊಡಿ ಅಂತ ಕೇಳುತ್ತಿದ್ದೇವೆ ಎಂದು ಮನವಿ ಮಾಡಿದರು.
ರೈತರಿಗಾಗಿಯೂ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ವರ್ಷ ಭತ್ತದ ಬೆಳೆ ಕಡಿಮೆ ಉತ್ಪಾದನೆ ಆಗಿದೆ. ರೈತರಿಗೆ ಬಿತ್ತನೆಗೆ ಸರ್ಕಾರದಿಂದಲೇ ಸಹಾಯ ಆಗಬೇಕು. ರೈತ ಚೈತನ್ಯ ಕಾರ್ಯಕ್ರಮದಲ್ಲಿ ಅವರಿಗೆ ಅನುಕೂಲ ಆಗುವಂತೆ ಮಾಡಲಾಗಿದೆ. ರೈತ ಬಂಧು ಅಂತ ತೆಲಂಗಾಣದಲ್ಲಿ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಾಡುತ್ತೇನೆ ಎಂದು ಹೇಳಿದರು.
ಇಂದು ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆ ಇದೆ. ಇದರಲ್ಲಿ ದೇವೇಗೌಡರನ್ನು ಮತ್ತೆ ರಾಷ್ಟ್ರೀಯ ಅಧ್ಯಕ್ಷರಾಗಿ ಘೋಷಣೆ ಮಾಡಲಿದ್ದಾರೆ ಎಂದರು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ಮುಖಂಡ ಬಾಗೇಗೌಡ, ಅರಮನೆ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.