Draupadi Murmu visit Karnataka: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ, ಸೆ. 28ಕ್ಕೆ ವಾಪಸ್, ಕಾರ್ಯಕ್ರಮಗಳೇನು?
Sep 26, 2022 06:39 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ, ಸೆ. 28ಕ್ಕೆ ವಾಪಸ್, ರಾಜ್ಯದಲ್ಲಿ ಅವರ ಕಾರ್ಯಕ್ರಮಗಳೇನು? (HT FIle Photo)
- ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಎರಡು ದಿನಗಳ ಭೇಟಿಗಾಗಿ ಇಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇಂದಿನಿಂದ ಒಟ್ಟು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ದ್ರೌಪದಿ ಮುರ್ಮು ಅವರು ಕರ್ನಾಟಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಎರಡು ದಿನಗಳ ಭೇಟಿಗಾಗಿ ಇಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇಂದಿನಿಂದ ಒಟ್ಟು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ದ್ರೌಪದಿ ಮುರ್ಮು ಅವರು ಕರ್ನಾಟಕಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಈ ಎರಡು ದಿನಗಳ ಕಾಲ ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಇವರು ಭಾಗಿಯಾಗಲಿದ್ದಾರೆ.
ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮುಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿ ದ್ರೌ ಪದಿ ಮುರ್ಮು ಅವರಿಂದ ಚಾಮುಂಡೇಶ್ವರಿ ಪೂಜೆ, ದಸರಾ ಉದ್ಘಾಟನೆ ನಡೆಯಲಿದೆ. ಇದೇ ದಿನ ಅವರು ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ- ಧಾರವಾಡ ಮುನ್ಸಿಪಾಲ್ ಕಾರ್ಪೋರೇಷನ್ನಿಂದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದರೊಂದಿಗೆ ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೆಷನ್ ಟೆಕ್ನಾಲಜಿಯ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಇಂದು ಬೆಳಗ್ಗೆ ಮೈಸೂರು ದಸರಾ ಉದ್ಘಾಟಿಸಿದ ಬಳಿಕ ದ್ರೌಪದಿ ಮುರ್ಮು ಅಪರಾಹ್ನ ಐಐಐಟಿ ಧಾರವಾಡದ ಹೊಸ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ. ದ್ರೌಪದಿ ಮುರ್ಮು ಅವರು ಮಧ್ಯಾಹ್ನವೇ ಐಐಐಟಿಗೆ ಆಗಮಿಸಿ ಅಲ್ಲೇ ಭೋಜನ ಮಾಡಲಿದ್ದಾರೆ. ಬಳಿಕ ಐಐಐಟಿ-ಧಾರವಾಡವನ್ನು ಉದ್ಘಾಟಿಸಲಿದ್ದಾರೆ.
"ಎಸ್ಪಿಜಿ ತಂಡವು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇವಲ 700 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಈ ಕ್ಯಾಂಪಸ್ಗೆ ಭೂಮಿ ನೀಡಿರುವ ರೈತರನ್ನು ಕಾರ್ಯಕ್ರಮದಲ್ಲಿ ಆಹ್ವಾನಿಸಲಾಗುತ್ತದೆʼʼ ಎಂದು ಶಾಸಕ ಅರವಿಂದ್ ಬೆಲ್ಲದ್ ಮಾಹಿತಿ ನೀಡಿದ್ದಾರೆ.
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಎಂಜಿನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ.
ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಝೋನಲ್ ಇನ್ಸ್ಟಿಟ್ಯೂಟ್ ಆಫ್ ವೈರೊಲಜಿ (ಸೌತ್ ಝೋನ್) ಅನ್ನು ವರ್ಚ್ಯುವಲ್ ಆಗಿ ಉದ್ಘಾಟಿಸಲಿದ್ದಾರೆ.
ನಾಳೆ ಸೇಂಟ್ ಜೋಸೆಫ್ ಯೂನಿವರ್ಸಿಟಿಯ ಉದ್ಘಾಟನಾ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳಲಿದ್ದಾರೆ. ಬಳಿಕ ರಾಜ್ಯ ಸರಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಿಸಲು ಆಯೋಜಿಸಿದ ನಾಗರಿಕ ಸ್ವಾಗತ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸೆಪ್ಟೆಂಬರ್ 28ರಂದು ದ್ರೌಪದಿ ಮುರ್ಮು ದೆಹಲಿಗೆ ಹೊರಡುತ್ತಾರೆ.