MLA Anand Mamani Died: ಸವದತ್ತಿ ಕ್ಷೇತ್ರದ ಶಾಸಕ ಆನಂದ್ ಮಾಮನಿ ನಿಧನ; ಸಂತಾಪ ಸೂಚಿಸಿದ ಸಿಎಂ
Oct 23, 2022 06:47 AM IST
ಸವದತ್ತಿ ಕ್ಷೇತ್ರದ ಶಾಸಕ ಆನಂದ್ ಮಾಮನಿ ನಿಧನ; ಸಂತಾಪ ಸೂಚಿಸಿದ ಸಿಎಂ
- ರಾಜಕೀಯ ನಾಯಕ, ಉಪ ಸಭಾಪತಿ ಆನಂದ್ ಮಾಮನಿ ತಡರಾತ್ರಿ 12.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಆನಂದ್ ಮಾಮನಿ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು.
ಬೆಂಗಳೂರು: ರಾಜಕೀಯ ನಾಯಕ, ಉಪ ಸಭಾಪತಿ ಆನಂದ್ ಮಾಮನಿ ತಡರಾತ್ರಿ 12.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಆನಂದ್ ಮಾಮನಿ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ, ವಿಧಿವಶರಾಗಿದ್ದಾರೆ.
ಇಂದು ಸಂಜೆ (ಭಾನುವಾರ) ಸ್ವಕ್ಷೇತ್ರ ಸವದತ್ತಿಯಲ್ಲಿ ಅವರ ಅಂತಿಮ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಾಸಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ಮಧ್ಯೆರಾತ್ರಿಯೇ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ಸಿಎಂ ಬೊಮ್ಮಾಯಿ, ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ಅವರ ನಿಧನದ ವಿಚಾರವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿ, ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.
ಬಿಜೆಪಿಯಿಂದ 2008 ರಲ್ಲಿ ಮೊದಲ ಬಾರಿಗೆ ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಮಾಮನಿ, ಅದಾದ ಬಳಿಕ 2013ರಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2018 ರಲ್ಲಿಯೂ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಮಾಮನಿ ಕಾರ್ಯನಿರ್ವಹಿಸುತ್ತಿದ್ದರು.