Siddheshwar swamiji death: ಇಂದು ಸಂಜೆ 5 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ
Jan 03, 2023 08:00 AM IST
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ
ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಆಶ್ರಮದ ಆವರಣದಲ್ಲಿ ನೆರವೇರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ್ ತಿಳಿಸಿದ್ದಾರೆ.
ವಿಜಯಪುರ: ಶತಮಾನದ ಸಂತ, ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ನಿನ್ನೆ ಸಂಜೆ 6 ಗಂಟೆ 5 ನಿಮಿಷಕ್ಕೆ ಶಿವನ ಪಾದದಲ್ಲಿ ಲಿಂಗೈಕ್ಯರಾಗಿದ್ದಾರೆ.
ಅನಾರೋಗ್ಯದಿಂದ ಬಲುತ್ತಿದ್ದ ಆಧ್ಯಾತ್ಮಿಕ ಚಿಂತಕ ಮತ್ತು ಖ್ಯಾತ ಪ್ರವಚನಕಾರರು ಆದ ಸ್ವಾಮೀಜಿಗಳನ್ನು ಆಶ್ರಮದ ಆಸ್ಪತ್ರೆಯಲ್ಲೇ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಧಿವಿಶರಾಗಿದ್ದಾರೆ.
ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಗಣ್ಯರು ಹಾಗೂ ಸಾವಿರಾರು ಭಕ್ತರು ಆಶ್ರಮದತ್ತ ಆಗಮಿಸಿದ್ದರು. ಪ್ರವಚನಗಳಿಂದಲೇ ಜನರಿಗೆ ದಾರಿ ದೀಪವಾಗಿದ್ದ ಸಿದ್ದೇಶ್ವರ ಸ್ವಾಮೀಜಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಅವರ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಜ್ಞಾನಯೋಗಾಶ್ರಮದ ಮುಂಭಾಗದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ. ಆ ಬಳಿಕ ಶ್ರೀಗಳ ಪಾರ್ಥಿವ ಶರೀರವನ್ನು ಸಿದ್ದೇಶ್ವರ ದೇವಸ್ಥಾನ, ಗಾಂಧಿ ಚೌಕ, ಅಥಣಿ ರಸ್ತೆ ಮಾರ್ಗವಾಗಿ ಸೈನಿಕ ಶಾಲೆಗೆ ತೆಗೆದುಕೊಂಡು ಬರಲಾಗಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸಂಜೆ 4 ಗಂಟೆಗೆ ಸರ್ಕಾರದಿಂದ ಗೌರವ ವಂದನೆ ಸಲ್ಲಿಸಲಾಗುತ್ತದೆ. ಆ ನಂತರ ಪಾರ್ಥಿವ ಶರೀರವನ್ನು ಜ್ಞಾನಯೋಗಾಶ್ರಮಕ್ಕೆ ಕರೆತರಲಾಗುತ್ತದೆ. ಸಂಜೆ 5 ಗಂಟೆಗೆ ಆಶ್ರಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಶ್ರೀಗಳು ತಮ್ಮ ಶರೀರವನ್ನು ಭೂಮಿಯಲ್ಲಿ ಹೂಳದೆ ಅಗ್ನಿಸ್ಪರ್ಶ ಮಾಡಬೇಕು. ಶ್ರಾದ್ಧಿಕ ವಿಧಿ ವಿಧಾನ ಅನಗತ್ಯ, ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸಬೇಕು. ನನ್ನ ಹೆಸರಿನಲ್ಲಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂದು ಕೊನೆಯಾಸೆಯ ಪತ್ರವನ್ನು 2014ರಲ್ಲಿ ಬರೆದಿದ್ದರು. ಶ್ರೀಗಳ ಆಸೆಯಂತೆ ಅಂತ್ಯಕ್ರಿಯೆ ನೆರವಿಸಲಾಗುತ್ತಿದೆ. ಸ್ವಾಮೀಜಿಗಳು ದೈಹಿಕವಾಗಿ ಅಲಿದ್ದರೂ ಅವರ ಸಂದೇಶಗಳು ಎಂದೆಂದಿಗೂ ಜನರೊಟ್ಟಿಗೆ ಇರಲಿವೆ.
ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ
ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಸ್ವಾಮೀಜಿಗಳ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ಸಾಧ್ಯತೆ ಇದೆ. ಇಲ್ಲಿಗೆ ಬರುವ ಎಲ್ಲಾ ಭಕ್ತರಿಗೂ ಪ್ರಸಾದ ಹಾಗೂ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿಗಳ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ
ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ ಎಂದು ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ವಿಭಾಗ