Swachh Mandir Abhiyan: ಮುಜರಾಯಿ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸಲಿರುವ ಸ್ವಚ್ಚ ಮಂದಿರ ಅಭಿಯಾನ
Feb 10, 2023 08:33 PM IST
ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಚಾಲನೆ ನೀಡಿದ ಸಚಿವೆ ಶ್ರೀಮತಿ ಶಶಿಕಲಾ ಅ ಜೊಲ್ಲೆ
- ಪ್ರಧಾನಿ ನರೇಂದ್ರ ಮೋದಿಜೀ ಅವರ “ಸ್ವಚ್ಚ ಭಾರತ” ಕಲ್ಪನೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಒತ್ತಾಸೆಯಂತೆ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ “ಸ್ವಚ್ಚ ಮಂದಿರ ಅಭಿಯಾನ”ಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು.
ಶ್ರೀರಂಗಪಟ್ಟಣ (ಮಂಡ್ಯ): ಪ್ರಧಾನಿ ನರೇಂದ್ರ ಮೋದಿಜೀ ಅವರ “ಸ್ವಚ್ಚ ಭಾರತ” ಕಲ್ಪನೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಒತ್ತಾಸೆಯಂತೆ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ “ಸ್ವಚ್ಚ ಮಂದಿರ ಅಭಿಯಾನ”ಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು.
ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಹಾಗೂ 11 ಇತರೆ ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದೇವಸ್ಥಾನಗಳಲ್ಲಿ ಸ್ವಚ್ಚ ಹಾಗೂ ನೈರ್ಮಲ್ಯದ ಪರಿಸರವನ್ನು ಕಾಪಾಡುವ ಉದ್ದೇಶದಿಂದ ಸ್ವಚ್ಚ ಮಂದಿರ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಕಂಡಿದ್ದ ಕನಸು ಇಂದು ನನಸಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಸ್ಥಾನಗಳ ಅಭಿವೃದ್ದಿಗೆ ಬಹಳಷ್ಟು ಮಹತ್ವ ನೀಡಿದ್ದಾರೆ. ಕಾಶಿ ಕಾರಿಡಾರ್, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿ, ಅಯೋಧ್ಯೆ ಮಂದಿರ ಸ್ಥಾಪನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಹಸಿ, ಒಣ ಕಸ ಮತ್ತು ಹೂಗಳನ್ನ ಪಾವಿತ್ರ್ಯವನ್ನು ಕಾಪಾಡಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ದೇವಸ್ಥಾನದ ಪರಿಸರ ಕಾಪಾಡಲು ಅಧಿಕಾರಿಗಳಿಗೆ ತಾಕೀತು:
ತ್ಯಾಜ್ಯ ವಿಲೇವಾರಿ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಗಳನ್ನ ನೀಡದೆ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ದೇವಸ್ಥಾನ ಹಾಗೂ ಅವುಗಳ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವ ಗುರಿ:
ಪ್ರಧಾನಿ ನರೇಂದ್ರ ಮೋದಿಜೀ ಅವರ ಸ್ವಚ್ಚ ಮಂದಿರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಇತ್ತೀಚಿನ ದಿನಗಳಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುವುದರ ಜೊತೆಯಲ್ಲಿ ತ್ಯಾಜ್ಯ ಉತ್ಪಾದನೆಯೂ ಹೆಚ್ಚಾಗುತ್ತಿದೆ. ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ದಿನನಿತ್ಯ ಸುಮಾರು 400 ಕೆಜಿಯಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಹಬ್ಬದ ಹಾಗೂ ವಿಶೇಷ ದಿನಗಳಲ್ಲಿ ಇದರ ಪ್ರಮಾಣ 600 ಕೆಜಿಗಳಿಗೆ ಹೆಚ್ಚಾಗುತ್ತದೆ. ಇದೇ ರೀತಿ ಮೊದಲ ಹಂತದಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಪ್ರಾರಂಭಿರುವ 12 ದೇವಸ್ಥಾನಗಳಲ್ಲಿ ಸಾಮಾನ್ಯ ದಿನಗಳಲ್ಲಿ 3500 ಕೆಜಿಯಷ್ಟು ತ್ಯಾಜ್ಯ ಉತ್ಪತ್ತಿಯಾದರೆ, ವಿಶೇಷ ದಿನಗಳ್ಲಿ 12000 ಕೆಜಿಗಳಷ್ಟು ತಲುಪುತ್ತದೆ. ಇದನ್ನ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಹಾಗೂ ಭಕ್ತಾದಿಗಳಿಗೆ ಉತ್ತಮ ಪರಿಸರವನ್ನು ನೀಡುವ ಮೂಲಕ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವುದು ಪ್ರಮುಖ ಗುರಿಯಾಗಿದೆ ಎಂದರು.
12 ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳ ಉದ್ಘಾಟನೆ:
ಮಾನ್ಯ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಬೆಂಗಳೂರಿನ ಬನಶಂಕರಿ ದೇವಾಲಯ, ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆಯ ಶ್ರೀ ರೇವಣ ಸಿದ್ದೇಶ್ವರ ದೇವಾಲಯ, ಕನಕಪುರ ತಾಲ್ಲೂಕಿನ ಶ್ರೀ ಕಬ್ಬಾಳಮ್ಮ ದೇವಾಲಯ, ರಾಮನಗರ ಜಿಲ್ಲೆಯ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ಮಂಡ್ಯ ಜಿಲ್ಲೆಯ ಶ್ರೀ ರಂಗನಾಥ ಸ್ವಾಮಿ ದೇವಾಲಯ, ಹಾಸನ ಜಿಲ್ಲೆಯ ಶ್ರೀ ಚೆನ್ನಕೇಶವ ದೇವಾಲಯ, ಉಡುಪಿ ಜಿಲ್ಲೆ ಮಂದಾರ್ತಿಯ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯ, ಚಿತ್ರದುರ್ಗ ಜಿಲ್ಲೆಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ತುಮಕೂರು ಜಿಲ್ಲೆಯ ದೇವರಾಯನ ದುರ್ಗದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಾಲಯ 11 ದೇವಸ್ಥಾನಗಳ ತ್ಯಾಜ್ಯ ವಿಲೇವಾರಿ ಘಟಕಗಳ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ಶ್ರೀರಂಗಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ಶ್ರೀಮತಿ ಶ್ವೇತಾ ಎನ್ ರವೀಂದ್ರ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.