DK Sivakumar on BJP: ನಮ್ಮಲ್ಲಿ ಯಾವುದೇ ಅಂತರವಿಲ್ಲ; ಇದು ಬಿಜೆಪಿ, ಮಾಧ್ಯಮದವರ ಸೃಷ್ಟಿ: ಡಿಕೆ ಶಿವಕುಮಾರ್
Dec 02, 2022 11:00 AM IST
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ನಮ್ಮ ಪಕ್ಷದ ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಯಾರೆಲ್ಲಾ ಷರತ್ತುರಹಿತವಾಗಿ ಪಕ್ಷ ಸೇರಲು ಬಯಸುತ್ತಾರೋ ಅವರು ಅರ್ಜಿ ಹಾಕಲಿ. ಇದುವರೆಗೂ ನಾವು ಯಾರ ಜತೆ ಸಂಪರ್ಕ ಹೊಂದಿದ್ದೇವೆ ಎಂಬುದರ ಬಗ್ಗೆ ಈಗ ಬಹಿರಂಗಪಡಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಲಬುರಗಿ: ನಮ್ಮಲ್ಲಿ ಯಾವುದೇ ಅಂತರವಿಲ್ಲ. ಇದನ್ನು ಬಿಜೆಪಿ ಹಾಗೂ ಮಾಧ್ಯಮದವರು ಸೃಷ್ಟಿಸುತ್ತಿದ್ದಾರೆ. ರಾಜಕೀಯ ನಿಂತ ನೀರಲ್ಲ. ಇಲ್ಲಿ ಯಾರೂ ಶಾಶ್ವತವಲ್ಲ. ಪಿಜಿಆರ್ ಸಿಂಧ್ಯಾ ಅವರ ಜತೆ ನಾನು ಚುನಾವಣೆಯಲ್ಲಿ ಹೋರಾಡಿದರೂ, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲವೇ? ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರ ಮಧ್ಯೆ ಅಂತರ ಇದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಪತ್ರ ನೀಡಲಿಲ್ಲವೇ? ಬಿಜೆಪಿಯಲ್ಲಿ ಬಿರುಕಿದ್ದು, ನಮ್ಮಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸನಗೌಡ ಯತ್ನಾಳ್, ಯಡಿಯೂರಪ್ಪನವರ ಗುಂಪು ಇಲ್ಲವೇ. ಅವರ ಪಕ್ಷದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆಶಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರ ಭರವಸೆ ಕೇವಲ ಕಾಗದದ ಮೇಲೆ ಉಳಿದಿದ್ದು, ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೇ 10 ರಂದು 371 ಜೆ ತಿದ್ದುಪಡಿ ಜಾರಿಗೆ ಪರಿಶ್ರಮ ಹಾಗೂ ಅದು ಜಾರಿಯಾದ ನಂತರ ಜನರ ಬದುಕಿನಲ್ಲಿ ಆಗುವ ಬದಲಾವಣೆ ಬಗ್ಗೆ ತಿಳಿಸಲಾಗುವುದು. ಬಿಜೆಪಿ ಕೇವಲ ಭಾವನೆಗಳ ವಿಚಾರದ ಮೇಲೆ ರಾಜಕೀಯ ಮಾಡುತ್ತದೆ. ನಮ್ಮ ಪಕ್ಷ ಜನರ ಬದುಕಿನ ಬಗ್ಗೆ ಚಿಂತನೆ ನಡೆಸಿದೆ ಎಂದಿದ್ದಾರೆ.
ಕಾಂಗ್ರೆಸ್ ನಲ್ಲಿ ಬಹಳಷ್ಟು ರೌಡಿಗಳಿದ್ದು, ಲೆಕ್ಕ ಹಾಕಿ ಹೇಳಲಿ ಎಂಬ ಬಿಜೆಪಿ ಮುಖಂಡರ ಹೇಳಿಕೆ ಬಗ್ಗೆ ಕೇಳಿದಾಗ, ಈಗ ಅವರು ಯಾರ ಜತೆ ಪ್ರೀತಿ, ವಿಶ್ವಾಸ ಹೊಂದಿದ್ದಾರೆ, ಅವರ ಸಂಸ್ಕೃತಿ ಏನು ಎಂಬುದು ಎಲ್ಲವೂ ಬಹಿರಂಗವಾಗುತ್ತಿದೆ. ಇದೇನು ಹೊಸತಲ್ಲ. ತಮ್ಮಲ್ಲಿರುವ ಕಲಹ ಬಿಟ್ಟು ಬೇರೆಯವರ ಕಲಹದ ಬಗ್ಗೆ ಮಾತನಾಡುತ್ತಾರೆ ಎಂದರು.
ಪಕ್ಷದ ಸಿದ್ದಾಂತ, ನಾಯಕತ್ವ ಒಪ್ಪಿ ಬರುವವರಿಗೆ ಆಹ್ವಾನ
ನಮ್ಮ ಪಕ್ಷದ ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಯಾರೆಲ್ಲಾ ಷರತ್ತುರಹಿತವಾಗಿ ಪಕ್ಷ ಸೇರಲು ಬಯಸುತ್ತಾರೋ ಅವರು ಅರ್ಜಿ ಹಾಕಲಿ. ಇದುವರೆಗೂ ನಾವು ಯಾರ ಜತೆ ಸಂಪರ್ಕ ಹೊಂದಿದ್ದೇವೆ ಎಂಬುದರ ಬಗ್ಗೆ ಈಗ ಬಹಿರಂಗಪಡಿಸುವುದಿಲ್ಲ. ಈ ವಿಚಾರವಾಗಿ ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಇದೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಂದ ಹಿಡಿದು ಸ್ಥಳೀಯ ಮಟ್ಟದ ನಾಯಕರವರೆಗೆ ಎಲ್ಲರ ಜತೆ ಚರ್ಚೆ ಮಾಡಿ, ಪಕ್ಷಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ
ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೆ ಟಿಕೆಟ್ ಬೇಕು ಎಂದು ಅರ್ಜಿ ಹಾಕಿದ್ದಾರೆ ಎಂದು ಕೇಳಿದಾಗ, 'ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಅವರು ಪಕ್ಷದ ಹೈಕಮಾಂಡ್ ಗೆ ಜವಾಬ್ದಾರಿ ಬಿಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ಈ ಮಟ್ಟದ ಶಿಸ್ತು ಇದೆ. ಯತೀಂದ್ರ ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಎಂದರು.
ರೌಡಿ ನಾಗ ಸಚಿವ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರ ಪಕ್ಷದಲ್ಲಿ ಕಾರ್ಯಕರ್ತರು ಇಲ್ಲ. ಹೀಗಾಗಿ ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದು, ಹೀಗಾಗಿ ಅವರು ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಗೌರವ ನಾಶ ಮಾಡುತ್ತಿದ್ದಾರೆ
ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಗಾಬರಿಯಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನೇಮಕಾತಿ, ಗುತ್ತಿಗೆಯಲ್ಲಿ ಲೂಟಿ ಮಾಡಿ ಆಯಿತು. ಕಡೆಗೆ ಈಗ ಮತ ಕದಿಯುತ್ತಿದ್ದಾರೆ. ಪರಿಶಿಷ್ಟರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಮತದಾರರ ಹೆಸರು ಕೈಬಿಡಲಾಗಿದೆ. ಇದರಿಂದ ರಾಜ್ಯದ ಗೌರವ ನಾಶ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಜಾಗತಿಕ ಮಟ್ಟದಲ್ಲಿ ಇದ್ದ ಕೀರ್ತಿಯನ್ನು ಅಳಿಸಿ, ದೇಶದ ಭ್ರಷ್ಟಾಚಾರದ ರಾಜಧಾನಿ ಎಂಬ ಕುಖ್ಯಾತಿ ನೀಡಿದ್ದಾರೆ ಎಂದರು.
ಸರ್ಕಾರ ಗಡಿ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ನಮ್ಮ ಊರು, ನಮ್ಮ ಹಳ್ಳಿ ನಮ್ಮದು. ಅವರದು ಅವರಿಗೆ. ಇದರಲ್ಲಿ ಬದಲಾವಣೆ ಅಸಾಧ್ಯ. ಜನ ನೆಮ್ಮದಿಯಾಗಿ ಬದುಕಲು ಬಿಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.