Karnataka Weather: ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ
May 30, 2023 06:34 AM IST
ರಾಜ್ಯದ ಹಲವು ಭಾಗಗಳಲ್ಲಿ ಮೇ 30 ಮತ್ತು 31 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಕೋಲಾರ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದ್ದು, ಇಂದು (ಮೇ 30, ಮಂಗಳವಾರ) ಮತ್ತು ನಾಳೆ (ಮೇ 31, ಬುಧವಾರ) ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಬೆಂಗಳೂರು ಹಾಗೂ ಸುತ್ತಮುತ್ತ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Bengaluru rain) ಸಂಭವ ಇದೆ ಅಂತ ಎಚ್ಚರಿಕೆ ನೀಡಿದೆ. ನಗರದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ಇರುವ ಸಾಧ್ಯತೆ ಇದೆ.
ಇನ್ನ ಕಳೆದ ಕೆಲವು ದಿನಗಳಿಂದ ಸುರಿದ ಮಳೆ ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆ ಭಾರಿ ಅವಾಂತರವನ್ನು ಸೃಷ್ಟಿ ಮಾಡಿತ್ತು. ಬೆಂಗಳೂರಿನಲ್ಲಿ ಮರಗಳು ಧರೆಗುರುಳಿದರೆ, ರಸ್ತೆಗಳ ಮೇಳೆ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿತ್ತು. ಕೆಲ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಅಬ್ಬರಿಂದ ಬೆಳೆ ಹಾನಿಯಾಗಿದೆ.
ಇದರ ನಡುವೆಯೇ ಇಂದು, ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗೂರು ಗ್ರಾಮಾಂತರ, ರಾಮನಗರ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40 ರಿಂದ 50 ಕಿಲೋ ಮೀಟರ್ ಇರುವ ಸಾಧ್ಯತೆ ಇದೆ. ಕರಾವಳಿಯಲ್ಲಿ 30 ರಿಂದ 40 ಕಿ.ಮೀ ಇರಲಿದೆ.
ನಿನ್ನೆ (ಮೇ 29, ಸೋಮವಾರ) ರಾಜ್ಯದಲ್ಲೇ ಅತ್ಯಧಿಕ ಮಳೆ ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರಿನಲ್ಲಿ ಆಗಿದೆ. ಇಲ್ಲಿ 5 ಸೆಂಟಿ ಮೀಟರ್ ಮಳೆಯ ವರದಿಯಾಗಿದೆ. ಉಳಿದಂತೆ ಬೆಳಗಾವಿ ಜಿಲ್ಲೆಯ ಕಣಬರ್ಗಿ, ಹಾವೇರಿ ಜಿಲ್ಲೆಯ ಸವಣೂರರು, ಕೊಡಗು ಜಿಲ್ಲೆಯ ಗೋಣಿಕೊಪ್ಪಲು, ಶ್ರೀಮಂಗಲದಲ್ಲಿ ತಲಾ 2 ಸೆಂಟಿ ಮೀಟರ್, ಹಾವೇರಿಯ ಎಂಪಿಎಂಸಿ, ಬೆಳಗಾವಿ ನಗರ, ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಾಗೂ ಮೂಡಿಗೆರೆಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಒಳನಾಡಿನ ಒಂದರೆಡು ಕಡೆಗಳಲ್ಲಿ ಸಾಮಾನ್ಯಕಿಂತ ಗಮನಾರ್ಹವಾದ ಉಷ್ಣಾಂಶ ಹೆಚ್ಚಳವಾಗಿದ್ದು, ಉತ್ತರ ಒಳನಾಡಿನ ಕೆಲವೆಡೆ ಉಷ್ಣಾಂಶ ಕೊಂಚ ಕಡಿಮೆಯಾಗಿರುವ ವರದಿಯಾಗಿದೆ.
ಜೂನ್ 4ಕ್ಕೆ ನೈಋತ್ಯ ಮುಂಗಾರು ಕೇರಳ ಪ್ರವೇಶಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಜೂನ್ ಮತ್ತು ಆಗಸ್ಟ್ನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆ ಇದೆ ಅಂತ ಹೇಳಿದೆ.
ವಿಭಾಗ