ಕರ್ನಾಟಕ ಹವಾಮಾನ ಮೇ 6; ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ
May 06, 2024 06:18 AM IST
ಕರ್ನಾಟಕ ಹವಾಮಾನ ಮೇ 6 ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 6; ರಾಜ್ಯದ ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗಬಹುದು. ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆಯ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.
ಬೆಂಗಳೂರು: ಕರ್ನಾಟಕದ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಇಂದು (ಮೇ 6) ಹಗುರ, ಸಾಧಾರಣ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿಶೇಷವಾಗಿ ಬೆಂಗಳೂರು ನಗರ ಜಿಲ್ಲೆ ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆಗಳುಂಟಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.
ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಬಿದ್ದಿದ್ದು, ಭೂಮಿ ಕೊಂಚ ಮಟ್ಟಿಗೆ ತಂಪಾಗಿದೆಯಾದರೂ, ಸೆಖೆ ಹೆಚ್ಚಳವಾಗಿದೆ. ಈ ನಡುವೆ, ನಾಳೆಯಿಂದ (ಮೇ 7) ಆರು ದಿನ ಕರಾವಳಿ, ಮಲೆನಾಡು, ಮಧ್ಯಕರ್ನಾಟಕ. ಮೈಸೂರು, ಬೆಂಗಳೂರು ನಗರದಲ್ಲೂ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ವಿವರಿಸಿದೆ.
ಕರ್ನಾಟಕದ 18 ಜಿಲ್ಲೆಗಳಲ್ಲಿ ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರಂತೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ ಮುನ್ಸೂಚನೆ ಇದೆಯಾದರೂ, ಶಾಖದ ಅಲೆಯ ವಾತಾವರಣ ಕಡಿಮೆಯಾಗಿಲ್ಲ. ಮೇ 9 ರ ತನಕವೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶಾಖದ ಅಲೆ, ಉಷ್ಣಾಂಶ ಹೆಚ್ಚಳದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆಯ ವರದಿ ಎಚ್ಚರಿಸಿದೆ. ಹೀಗಾಗಿ ಜನ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ.
ಇದನ್ನೂ ವೀಕ್ಷಿಸಿ| ಕರ್ನಾಟಕದಲ್ಲಿ ರಣಬಿಸಿಲು, ಶಾಖದ ಅಲೆಯಿಂದ ರಕ್ಷಣೆಗೆ 7 ಸಲಹೆಗಳು - ವಿಡಿಯೋ
ಇನ್ನು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಬಿಸಿ ವಾತಾವರಣ ಮತ್ತು ಆರ್ದ್ರತೆ ಯ ಕಾರಣ ಸೆಖೆಯನ್ನು ಹೆಚ್ಚು ಮಾಡಲಿದೆ ಎಂದು ವರದಿ ಎಚ್ಚರಿಸಿದೆ.
ಬೆಂಗಳೂರು ಹವಾಮಾನ ಇಂದು (ಮೇ 6), ಗರಿಷ್ಠ 39 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಮೇ 6) ಗರಿಷ್ಠ ತಾಪಮಾನವು 39 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ಇರುವ ಕಾರಣ ಕೆಲವು ಕಡೆ ಮಳೆ ಬೀಳಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 39 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 5) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 37.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 39 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮೇ 5) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 39.2 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 24.4 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 6 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 39)
ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
ಚಿತ್ರದುರ್ಗ – 28.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)
ಹೊನ್ನಾವರ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76)
ಕಲಬುರಗಿ – 31.5 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 22)
ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)
ಕಾರವಾರ – 36.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)