ಇಂಡಿಯಾ ಮೈತ್ರಿ ಕೂಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರಥಿ; ಸಂಚಾಲಕರಾಗಿ ನಿತೀಶ್ ಕುಮಾರ್ ಆಯ್ಕೆ
Jan 13, 2024 03:01 PM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಿಸಲಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಕೂಟದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿರೋಧ ಪಕ್ಷಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಬ್ಲಾಕ್ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಈ ಹುದ್ದೆಯ ರೇಸ್ನಲ್ಲಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮೈತ್ರಿಕೂಟದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಇಂಡಿಯಾ ಬ್ಲಾಕ್ನ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.
ಇಂಡಿಯಾ ನಾಯಕರು ಇಂದು (ಜನವರಿ 13, ಶನಿವಾರ) ನಡೆಸಿದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಮಾಜವಾದಿ ಪಕ್ಷ-ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧಿನಾಯಕಿ ಮಮತಾ ಬ್ಯಾನರ್ಜಿ ಈ ವರ್ಚುವಲ್ ಸಭೆಗೆ ಗೈರಾಗಿದ್ದರು. ಇವತ್ತಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಎರಡೂ ಪಕ್ಷಗಳ ನಾಯಕರಿಗೆ ತಿಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷದಿಂದ ಯಾರಾದರು ಒಬ್ಬರು ಈ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಹೇಳಿ ನಿತೀಶ್ ಕುಮಾರ್ ಅವರು ಸಂಚಾಲಕ ಹುದ್ದೆಯನ್ನು ತಿರಸ್ಕರಿಸಿದ್ದಾರೆ ಎಂದು ಸಭೆಯಲ್ಲಿದ್ದ ಜೆಡಿಯು ನಾಯಕ ಸಂಜಯ್ ಝಾ ಹೇಳಿದ್ದಾರೆ. ಮೈತ್ರಿಕೂಟದ ಎಲ್ಲ ಪಕ್ಷಗಳ ಒಪ್ಪಿಗೆ ಇದ್ದರೆ ಮಾತ್ರ ಈ ಪಾತ್ರವನ್ನು ಒಪ್ಪಿಕೊಳ್ಳುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿಯನ್ನು ಉಲ್ಲೇಖಿಸಿ ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ದ ಸೋದರ ಸಂಸ್ಥೆ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿ ಕೂಟವನ್ನು ಎದುರಿಸಲು ಇಂಡಿಯಾ ಮೈತ್ರಿ ಕೂಟ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ನಡುವೆಯೇ ಒಂದಿಲ್ಲೊಂದು ವಿಚಾರದಲ್ಲಿ ಎದುರಾಗುತ್ತಿರುವ ಅಸಮಾಧಾನಿತರನ್ನು ಸಮಾಧಾನಪಡಿಸುವುದು ದೊಡ್ಡ ಸವಾಲಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿ ಕೂಟದ ಸಂಚಾಲಕರನ್ನಾಗಿ ಮಾಡಬೇಕೆಂದು ಜೆಡಿಯುವ ಬಯಸಿತ್ತು. ಆದರೆ ಇದಕ್ಕೆ ಟಿಎಂಸಿ ವಿರೋಧ ವ್ಯಕ್ತಪಡಿಸಿರುವುದಾಗಿ ಟಿಪಿಐ ವರದಿ ಮಾಡಿದೆ.
ಜನವರಿ 13ರ ವರ್ಚುವಲ್ ಸಭೆಯಲ್ಲಿ ಸೀಟು ಹಂಚಿಕೆ, ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವಿಕೆ ಹಾಗೂ ಮೈತ್ರಿ ಕೂಟಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ನ್ಯಾಷನಲ್ ಕಾಂಗ್ರೆಸ್ ಪಾರ್ಟಿ-ಎನ್ಸಿಪಿ ನಾಯಕ ಶರತ್ ಪವರ್ ಅವರು ಮುಂಬೈನಿಂದ, ಡಿಎಂಕೆ ನಾಯಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸಂಸದೆ ಕನಿಮೋಳಿ ಕರುಣಾನಿಧಿ ಅವರು ಚೈನೈನಿಂದಲೇ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.