Uttarakhand: ನಿರ್ಮಾಣ ಹಂತದ ಸುರಂಗ ಕುಸಿತ; ಅವಶೇಷಗಳಡಿ ಸಿಲುಕಿದ 40 ಕಾರ್ಮಿಕರು
Nov 12, 2023 02:34 PM IST
ನಿರ್ಮಾಣ ಹಂತದ ಸುರಂಗ ಕುಸಿತ
- ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಸುಮಾರು 40 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ.
ಉತ್ತರಕಾಶಿ (ಉತ್ತರಾಖಂಡ): ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಸುಮಾರು 40 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು ಮುಂಜಾನೆ (ನ.12, ಭಾನುವಾರ) ನಡೆದಿದೆ.
ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಸಿಲ್ಕ್ಯಾರಾ ಮತ್ತು ದಾಂಡಲ್ಗಾಂವ್ ನಡುವೆ ಸುರಂಗವನ್ನು ನಿರ್ಮಿಸಲಾಗುತ್ತಿತ್ತು. ನಾಲ್ಕೂವರೆ ಕಿಲೋ ಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದ ಭಾಗ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕುಸಿದು ಬಿದ್ದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ಅವರು ರಕ್ಷಣಾ ತಂಡದೊಂದಿದೆ ತಕ್ಷಣ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಶೀಘ್ರದಲ್ಲೇ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಸುರಂಗವನ್ನು ನಿರ್ಮಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಎನ್ಎಚ್ಐಡಿಸಿಎಲ್) ನೌಕರರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಚಾರ್ ಧಾಮ್ ರಸ್ತೆ ಯೋಜನೆಯಡಿಯಲ್ಲಿ ಈ ಸರ್ವಋತು ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಇದು ಉತ್ತರಕಾಶಿಯಿಂದ ಯಮುನೋತ್ರಿ ಧಾಮಕ್ಕೆ 26 ಕಿಲೋ ಮೀಟರ್ಗಳಷ್ಟು ಪ್ರಯಾಣ ಕಡಿಮೆ ಮಾಡುತ್ತದೆ.