ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಹನುಮ ಜಯಂತಿ; ಪ್ರಸಿದ್ಧ ಕೋಟೆ ಆಂಜನೇಯ ಸೇರಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ
ತುಮಕೂರು ಜಿಲ್ಲೆಯಲ್ಲಿ ಹನುಮ ಜಯಂತಿ ಅದ್ದೂರಿಯಾಗಿ ನೆರವೇರಿದೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನೂರಾರು ಮಂದಿ ಭಕ್ತರು ದೇವಾಲಯಗಳಿಗೆ ದೇವರ ದರ್ಶನ ಪಡೆದು ಪುನೀತರಾದರು. ನಗರದಲ್ಲಿ ಹನುಮ ಜಯಂತಿ ಹೇಗಿತ್ತು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ತುಮಕೂರು: ನಗರದ ವಿವಿಧ ದೇವಾಲಯಗಳಲ್ಲಿ ಇಂದು (ಡಿಸೆಂಬರ್ 13, ಶುಕ್ರವಾರ) ಅದ್ಧೂರಿಯಾಗಿ ಹನುಮ ಜಯಂತಿಯನ್ನು ಆಚರಿಸಲಾಯಿತು. ಮುಂಜಾನೆಯಿಂದಲೇ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಗೇಟ್ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಬಿ.ಹೆಚ್. ರಸ್ತೆಯ ಆರ್ಟಿಓ ಕಚೇರಿ ಮುಂಭಾಗದಲ್ಲಿರುವ ವರಪ್ರಸಾದ ವೀರಾಂಜನೇಯ ಸ್ವಾಮಿ ದೇಗುಲ, ಶ್ರೀರಾಮ ನಗರದ ಕಿಕ್ಕೇರಿ ಆಂಜನೇಯಸ್ವಾಮಿ ದೇವಾಲಯ, ಬಟವಾಡಿ ಸಮೀಪದ ಭಕ್ತಾಂಜನೇಯ ಸ್ವಾಮಿ ದೇವಾಲಯ, ವಿದ್ಯಾನಗರದ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನ, ಹನುಮಂತಪುರದ ಬಯಲಾಂಜನೇಯ ಸ್ವಾಮಿ ದೇವಾಲಯ, ಬನಶಂಕರಿಯ ಮಾರುತಿ ದೇವಾಲಯ, ಮೆಳೇಕೋಟೆಯ ಅಭಯ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಭಕ್ತರು ಹನುಮ ನಾಮ ಸ್ಮರಣೆ ಮಾಡಿದರು. ವೇದ ಘೋಷ, ಭಜನೆಗಳು ಮೊಳಗಿದವು. ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ, ಟೌನ್ ಹಾಲ್ ವೃತ್ತ, ಕಾಲ್ಟ್ಟ್ಯಾಕ್ಸ್, ಎಂ.ಜಿ.ರಸ್ತೆ, ಬಾರ್ಲೈನ್ ರಸ್ತೆ, ಎಸ್.ಎಸ್.ಪುರಂ ರಸ್ತೆ ಸೇರಿದಂತೆ ಜಿಲ್ಲೆಯಾದ್ಯಂತ ಪಟ್ಟಣಗಳು, ಹೋಬಳಿ ಕೇಂದ್ರಗಳು ಕೇಸರಿ ಧ್ವಜಗಳಿಂದ ಕಂಗೊಳಿಸಿದವು. ಕೋಟೆ ಶ್ರೀಆಂಜನೇಯ ಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ದೇವಾಲಯಕ್ಕೆ ಬರುವ ಭಕ್ತರಿಗೆ ಹೆಸರು ಬೇಳೆ, ಪಾನಕ, ಮಜ್ಜಿಗೆಯನ್ನು ಪ್ರಸಾದವಾಗಿ ನೀಡಿದರು.
ಹನುಮ ಜಯಂತಿ ಅಂಗವಾಗಿ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಅಭಿಷೇಕ, ಹೋಮ ಹವನ, ಭಜನಾ ಕಾರ್ಯಕ್ರಮ ನಡೆದಿದ್ದು, ಆಂಜನೇಯ ಸ್ವಾಮಿ ವಿಗ್ರಹ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷ ಎಂದರೆ ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ, ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ, ಬೆಳಗ್ಗೆಯಿಂದಲೇ ಭಕ್ತಾದಿಗಳು ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪಂಚಾಮೃತ ಅಭಿಷೇಕ
ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಮಂಗಳಾರತಿ, ಪ್ರಾಕಾರೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನಡೆದವು, ಮಧ್ಯಾಹ್ನ ವಿಶೇಷವಾಗಿ ಸಿದ್ಧಪಡಿಸಿ ಬಗೆ ಬಗೆಯ ಹೂವುಗಳಿಂದ ಅಲಂಕರಿಸಿದ್ದ ಮಂಟರದಲ್ಲಿ ಕೋಟೆ ಆಂಜನೇಯ ಸ್ವಾಮಿಯ ಉತ್ಸವ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹನುಮನ ದೇವಾಲಯಗಳಲ್ಲಿ ಶ್ರೀರಾಮ ನಾಮ ಜಪ ಹಾಗೂ ಹನುಮ ನಾಮ ಸ್ಮರಣೆ ಭಕ್ತರಿಂದ ಮೊಳಗಿದವು. ಮೆಳೇಕೋಟೆಯ ಶ್ರೀಆಭಯಾಂಜನೇಯ ಸ್ವಾಮಿಗೆ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಧಾರ್ಮಿಕ ಕೈಂಕರ್ಯದಲ್ಲಿ ಮಹಾಸಂಕಲ್ಪ, ಪಂಚಾಮೃತ ಅಭಿಷೇಕ, ಅಲಂಕಾರದೊಂದಿಗೆ ಮಹಾ ಮಂಗಳಾರತಿ ನಡೆಯಿತು. ನಗರದ ವಿವಿಧೆಡೆ ಹನುಮನ ದೇವಾಲಯಗಳಲ್ಲಿ ಬೆಳಗ್ಗೆಯಿಂದ ಪೂಜಾ ವಿಧಿ ವಿಧಾನಗಳು ನೆರವೇರಿದ್ದು, ಭಕ್ತಾದಿಗಳು ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾದರು.