ಕನ್ನಡ ಸುದ್ದಿ  /  ಚುನಾವಣೆಗಳು  /  ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಏ 26 ಕ್ಕೆ ಮತದಾನ, ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ, ರಾಜಕೀಯ ಪಕ್ಷಗಳಿಂದ ಕೊನೇ ಗಳಿಗೆ ಕಸರತ್ತು

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಏ 26 ಕ್ಕೆ ಮತದಾನ, ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ, ರಾಜಕೀಯ ಪಕ್ಷಗಳಿಂದ ಕೊನೇ ಗಳಿಗೆ ಕಸರತ್ತು

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ (ಏಪ್ರಿಲ್ 24) ಸಂಜೆ ತೆರೆ ಬೀಳಲಿದೆ. ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಮತ್ತು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಏ 26 ಕ್ಕೆ ಮತದಾನ
ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಏ 26 ಕ್ಕೆ ಮತದಾನ

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ (ಏಪ್ರಿಲ್ 24) ಸಂಜೆ ತೆರೆ ಬೀಳಲಿದೆ. ಮೊದಲ ಹಂತದ ಮತದಾನವು ಶುಕ್ರವಾರ (ಏಪ್ರಿಲ್ 26) ನಡೆಯಲಿದೆ. ಮತದಾರರನ್ನು ಒಲಿಸಿಕೊಳ್ಳಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಭಾರೀ ಕಸರತ್ತು ನಡೆಸಿವೆ. ಮೂರೂ ಪಕ್ಷಗಳ ವರಿಷ್ಠರು ಬಹಿರಂಗ ಸಭೆ, ಪಾದಯಾತ್ರೆ ಮತ್ತು ರೋಡ್ ಶೋ ನಡೆಸುವ ಮೂಲಕ ಮತದಾರರನ್ನು ಗೆಲ್ಲಲು ಕಸರತ್ತು ನಡೆಸಿದ್ದಾರೆ. ಆದರೆ ಬಿಸಿಲಿನ ಕಾರಣಕ್ಕೆ ಪ್ರಚಾರ ಅಷ್ಟಾಗಿ ಬಿರುಸು ಪಡೆದುಕೊಂಡಿರಲಿಲ್ಲ.

ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಮತ್ತು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಕೇಂದ್ರ ನಾಯಕರ ಭರ್ಜರಿ ರೋಡ್‌ ಶೋ 

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ನ ಕೇಂದ್ರ ಮುಖಂಡರು ಹಲವಾರು ಸುತ್ತಿನ ಪ್ರಚಾರ ನಡೆಸಿದ್ದಾರೆ. ಜೊತೆಗೆ ರಾಜ್ಯ ನಾಯಕರು ಎಡಬಿಡದೆ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದಾರೆ. ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಮುಖಂಡರು ವ್ಯಾಪಕ ಪ್ರಚಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು, ಚಿಕ್ಕಬಳ್ಳಾಪುರ ಮೈಸೂರು, ಮತ್ತು ಹಾಸನದಲ್ಲಿ ನಡೆದ ಬಹಿರಂಗ ಸಭೆಗಳಲ್ಲಿ ಭಾಗಿಯಾಗಿ ಮತ ಕೇಳಿದ್ದರು. ಮಂಗಳೂರಿನಲ್ಲಿ ರೋಡ್‌ ಶೋ ಸಹ ನಡೆಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿನಲ್ಲಿ ವಿವಿಧ ಹಂತದ ಕಾರ್ಯಕರ್ತರು ಮತ್ತು ಮುಖಂಡರ ಸಭೆಗಳನ್ನು ನಡೆಸಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್‌ ಶೋ ನಡೆಸುವ ಮೂಲಕ ಪ್ರಚಾರದಲ್ಲಿ ಭಾಗಿಯಾಗಿದ್ದರು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ

ಪಕ್ಷ ಹಮ್ಮಿಕೊಂಡಿದ್ದ ಬಹಿರಂಗ ಸಭೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಕಾಂಗ್ರೆಸ್‌ನ ಮತ್ತೊಬ್ಬ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರೂ ಸರಣಿ ಸಭೆಗಳಲ್ಲಿ ಭಾಗಿಯಾಗಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಬ್ಬರೂ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ 14 ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಪ್ರಚಾರದಲ್ಲಿ ಹಿಂದೆ ಬೀಳಲಿಲ್ಲ. ಸ್ವತಃ ಮಂಡ್ಯದ ಅಭ್ಯರ್ಥಿಯೂ ಆಗಿರುವ ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹಲವು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ ಗಮನ ಸೆಳೆದರು.

ಮೂರೂ ಪಕ್ಷಗಳ ಪ್ರಚಾರ ಅಭಿವೃದ್ಧಿ ವಿಷಯಗಳಿಗಿಂತ ವೈಯಕ್ತಿಕ ಟೀಕೆ ಟಿಪ್ಪಣಿ, ನಿಂದನೆ, ಧರ್ಮ ಮೊದಲಾದ ಭಾವನಾತ್ಮಕ ವಿಷಯಗಳ ಸುತ್ತ ಗಿರಕಿ ಹೊಡೆಯಿತು. ಇಂದು ಸಂಜೆ ಸಂಜೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ. ಗುರುವಾರ ಮನೆಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಅಭ್ಯರ್ಥಿಗಳು ಮನೆ ಮನೆ ಪ್ರಚಾರದಲ್ಲಿ ಭಾಗಿಯಾಗಬಹುದು. ಅದರೆ 10 ಮಂದಿಗಿಂತ ಹೆಚ್ಚಿನ ಜನ ಸೇರುವಂತಿಲ್ಲ.

ವರದಿ: ಮಾರುತಿ ಎಚ್‌.