Drashan: ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯಲ್ಲಿವೆ ಈ ಕಾರಣಗಳು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಲಾಗಿತ್ತು. ಆದರೆ ಜಾಮೀನು ರದ್ದು ಮಾಡಬೇಕೆಂದು ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಇಂದು ವಿಚಾರಣೆ ನಡೆದಿದೆ. ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇನ್ನುಳಿದ ಆರೋಪಿಗಳಿಗೆ ಜಾಮೀನು ಲಭ್ಯವಾಗಿತ್ತು. ಆದರೆ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಇಂದೇ ಅರ್ಜಿ ವಿಚಾರಣೆ ನಡೆಯಲಿದೆ. ಯಾಕೆ ಜಾಮೀನು ರದ್ದು ಮಾಡಬೇಕು ಎಂಬ ಕಾರಣಗಳನ್ನೂ ರಾಜ್ಯ ಸರ್ಕಾರ ನೀಡಿದೆ. 7 ಕಾರಣಗಳನ್ನು ನೀಡಿ ಜಾಮೀನು ರದ್ದು ಮಾಡುವಂತೆ ಕೋರಿದೆ. ಇಂದು ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜೈಲಾ ಅಥವಾ ಬೇಲಾ? ಎಂದು ನಿರ್ಧಾರವಾಗಬಹುದು ಎನ್ನಲಾಗಿತ್ತು ಆದರೆ ನೋಟಿಸ್ ನೀಡಲಾಯ್ತು.
ಇಲ್ಲಿವೆ ಕಾರಣಗಳು
1) ದರ್ಶನ್ ಸೆಲಿಬ್ರೆಟಿಯಾಗಿರುವ ಕಾರಣ ಜಾಮೀನು ಪಡೆದು ಹೊರ ಹೋದರೆ ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಜಾಮೀನು ರದ್ದು ಮಾಡಬೇಕು
2) ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪ ಇನ್ನೂ ನಿಗದಿ ಹಂತಕ್ಕೆ ಬಂದಿಲ್ಲ ಆರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖ ಮಾಡಲಾಗಿದೆ. ವಿಚಾರಣೆಯು ವಿಳಂಬವಾಗುವುದರಿಂದ ಜಾಮೀನು ಮಂಜೂರು ಮಾಡಲಾಗಿದೆ ಇದು ಅವಸರದ ನಿರ್ಧಾರ ಇದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿದೆ.
3) ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬಲವಂತವಾಗಿ ಕಾರಿನಲ್ಲಿ ಬೆಂಗಳೂರಿಗೆ ಕರೆತಂದಿದ್ದಾರೆ. ಇದು ಐಪಿಸಿ ಸೆಕ್ಷನ್ 364ರ ಅಡಿ ಇದು ಅಪರಾಧ. ಆದರೆ ಕೋರ್ಟ್ ಇದನ್ನು ಪರಿಗಣಿಸಿಲ್ಲ.
4) 76 ಮತ್ತು 91ನೇ ಪ್ರತ್ಯಕ್ಷ ಸಾಕ್ಷಿಗಳು ಸಿಆರ್ಪಿಸಿ ಸೆಕ್ಷನ್ 164ರ ಅಡಿ ಆರೋಪಿಗಳು ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸಿರುವುದರ ಬಗ್ಗೆ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿರುವುದನ್ನು ಹೈಕೋರ್ಟ್ ಪರಿಗಣಿಸಲು ವಿಫಲವಾಗಿದೆ.
5) ಸಾಂದರ್ಭಿಕ ಸಾಕ್ಷಿಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು, ಆರೋಪಿಗಳ ಬಟ್ಟೆ/ ಶೂ/ಚಪ್ಪಲಿಗಳಲ್ಲಿ ಸಂತ್ರಸ್ತನ ವಂಶವಾಹಿ ಗುರುತು, ಕರೆ ದಾಖಲೆ ವಿಶ್ಲೇಷಣೆ, ಸೆಲ್ ಟವರ್ ಸ್ಥಳ, ಸಿಸಿಟಿವಿ ತುಣುಕುಗಳು, ಅಪರಾಧದ ಸ್ಥಳದಲ್ಲಿ ಆರೋಪಿಗಳ ಓಡಾಟ, ಆರೋಪಿಗಳ ಮೊಬೈಲ್ನಲ್ಲಿ ಸಂತ್ರಸ್ತನ ಫೋಟೊಗಳು ಪತ್ತೆಯಾಗಿರುವುದನ್ನು ಹೈಕೋರ್ಟ್ ಪರಿಣಿಸಲು ವಿಫಲವಾಗಿದೆ.
6) ಕಾನೂನಿನ ಪ್ರಕಾರ ತನಿಖಾಧಿಕಾರಿಯು ಆರೋಪಿಗಳಿಗೆ ಏಕೆ ಬಂಧಿಸಲಾಗುತ್ತಿದೆ ಎಂಬುದರ ಸಾಮಾನ್ಯ ವಿಚಾರಗಳನ್ನು ತಿಳಿಸಬೇಕಿತ್ತು. ಎಲ್ಲಾ ಆರೋಪಿಗಳಿಗೆ ಒಂದೇ ತೆರನಾದ ಬಂಧನದ ಆಧಾರ ನೀಡಲಾಗಿದೆ.
7) ಮಧ್ಯಂತರ ಪರಿಹಾರದ ಭಾಗವಾಗಿ ಮಧ್ಯಂತರ ಏಕಪಕ್ಷೀಯ ಆದೇಶದ ಮೂಲಕ ಜಾಮೀನು ಆದೇಶವನ್ನು ತಡೆ ಹಿಡಿಯಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ. ಇನ್ನು ಮುಂದೆ ವಿಚಾರಣೆ ನಡೆಯಲಿದೆ.
ಇಂದು ಸುಪ್ರೀಂ ಕೋರ್ಟ್ನ ಮೊದಲ ಹಿಯರಿಂಗ್ ಆಗಿದ್ದು ನೋಟಿಸ್ ನೀಡಲಾಗಿದೆ ಎಂದು ಟಿವಿ9 ವರದಿ ಮಾಡಿದೆ.
