Bengaluru Parking Policy: ಬೆಂಗಳೂರು ಪಾರ್ಕಿಂಗ್ ನೀತಿ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಆಪ್!
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಬೆಂಗಳೂರು ಪಾರ್ಕಿಂಗ್ ನೀತಿ ವಿರುದ್ಧ ಆಮ್ ಆದ್ಮಿ ಪಕ್ಷ(ಆಪ್) ಸಿಡಿದೆದ್ದಿದೆ. ಕೂಡಲೇ ಪಾರ್ಕಿಂಗ್ ನೀತಿ ಕೈಬಿಡದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಆಪ್ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಆಪ್ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ನೂತನ ಪಾರ್ಕಿಂಗ್ ನೀತಿ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲಿದೆ ಎಂದು ಗುಡುಗಿದರು.
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಬೆಂಗಳೂರು ಪಾರ್ಕಿಂಗ್ ನೀತಿ ವಿರುದ್ಧ ಆಮ್ ಆದ್ಮಿ ಪಕ್ಷ(ಆಪ್) ಸಿಡಿದೆದ್ದಿದೆ. ಕೂಡಲೇ ಪಾರ್ಕಿಂಗ್ ನೀತಿ ಕೈಬಿಡದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಆಪ್ ಎಚ್ಚರಿಕೆ ನೀಡಿದೆ.
ಈ ಕುರಿತು ಮಾತನಾಡಿರುವ ಆಪ್ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ಬೆಂಗಳೂರಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಲು ಸಾಧ್ಯವಾಗದ ಬಿಜೆಪಿಯ 40 ಪರ್ಸೆಂಟ್ ಸರ್ಕಾರ, ಈಗ ನೂತನ ಪಾರ್ಕಿಂಗ್ ನೀತಿ ಜಾರಿಗೆ ತರುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವುದು ಖಂಡನೀಯ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ದಾಸರಿ, ಭಾನುವಾರದ ರಜಾ ದಿನದಂದೂ ಟೆಂಡರ್ಗೆ ಆಹ್ವಾನ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಟಿಪಿಪಿ ಕಾಯಿದೆ ಪ್ರಕಾರ ಟೆಂಡರ್ಗೆ 40 ದಿನಗಳ ಕಾಲಾವಕಾಶ ನೀಡಬೇಕಾಗಿದ್ದರೂ, ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಂಟು ವಲಯಗಳಲ್ಲೂ ಎಂಟು ಗುತ್ತಿಗೆದಾರರನ್ನು ಪೂರ್ವನಿಗದಿ ಮಾಡಿಕೊಂಡಿದ್ದು, ಕೇವಲ ತೋರ್ಪಡಿಕೆಗೆ ಟೆಂಡರ್ ಕರೆಯಲಾಗಿದೆ ಎಂದು ಆರೋಪಿಸಿದರು.
ರಸ್ತೆ ಬದಿ ವಾಹನ ನಿಲ್ಲಿಸುವುದಕ್ಕೂ ಪ್ರಿಪೇಯ್ಡ್ ಶುಲ್ಕ ವಿಧಿಸುವ ನೂತನ ಪಾರ್ಕಿಂಗ್ ನೀತಿಯು, ಸಾಮಾನ್ಯ ವಾಹನ ಸವಾರರಿಗೆ ಭಾರೀ ಹೊರೆಯಾಗಲಿದೆ. ಪ್ರತಿ ಗಂಟೆಗೆ 15ರಿಂದ 30 ರೂಪಾಯಿವರೆಗೆ ಪಾರ್ಕಿಂಗ್ ಶುಲ್ಕ ವಿಧಿಸುವುದರಿಂದ, ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರದ ಆದಾಯದ ದೊಡ್ಡ ಪಾಲು ಈ ಶುಲ್ಕ ಭರಿಸುವುದರಲ್ಲೇ ಖರ್ಚಾಗಲಿದೆ ಎಂದು ಮೋಹನ್ ದಾಸರಿ ಕಿಡಿಕಾರಿದರು.
ಇದರ ಜೊತೆಗೆ ತಮ್ಮ ಮನೆಯೆದುರು ಕಾರು ಪಾರ್ಕಿಂಗ್ ಮಾಡುವುದಕ್ಕೂ 3,000ದಿಂದ 5,000 ರೂಪಾಯಿ ನೀಡಿ ಪರವಾನಗಿ ಪಡೆಯಬೇಕೆಂಬ ನಿಯಮ ರೂಪಿಸಲಾಗಿದೆ. ವಾಹನ ಸವಾರರಿಗೆ ನೆರವಾಗುವಂತಹ ನೀತಿ ರೂಪಿಸುವ ಬದಲು, ಅವರನ್ನು ಲೂಟಿ ಮಾಡಲು ಸರ್ಕಾರ ಮುಂದಾಗಿದೆ. ಜನವಿರೋಧಿ ನೀತಿಯನ್ನು ಹಿಂಪಡೆಯದಿದ್ದರೆ, ಪಕ್ಷವು ಬೃಹತ್ ಹೋರಾಟ ರೂಪಿಸಲಿದೆ ಎಂದು ಮೋಹನ್ ದಾಸರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡೀದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, ಪಾರ್ಕಿಂಗ್ಗೆ ದುಬಾರಿ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವುದನ್ನು ಬೆಂಗಳೂರಿನ ಜನರು ಈಗ ಸಹಿಸಿಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರವು ಶುಲ್ಕವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.
ವರ್ಷಕ್ಕೆ ಸುಮಾರು 200 ಕೋಟಿ ರೂಪಾಯಿಯನ್ನು ಈ ಮೂಲಕ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಇದೊಂದು ದಂಧೆಯಾಗಿ ಮಾರ್ಪಾಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಜನರು ಕಟ್ಟುವ ಶುಲ್ಕವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೇಬು ಸೇರಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸಲು ಮೀನಮೇಷ ಎಣಿಸುತ್ತಿರುವ ಜನವಿರೋಧಿ ಸರ್ಕಾರ, ಜನರಿಂದ ವಸೂಲಿ ಮಾಡಲು ಮಾತ್ರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಖಂಡನೀಯ ಎಂದು ಸುರೇಶ್ ರಾಥೋಡ್ ಹರಿಹಾಯ್ದರು.
ಏನಿದು ಪಾರ್ಕಿಂಗ್ ನೀತಿ?:
ಬೆಂಗಳೂರಿನ ಪಾರ್ಕಿಂಗ್ ನೀತಿ 2.0 ಗೆ ಸಂಬಂಧಿಸಿದಂತೆ ನಗರ ಭೂ ಸಾರಿಗೆ ನಿರ್ದೇಶನಾಲಯ(ಡಿಯುಎಲ್ಟಿ) ಕಳುಹಿಸಿದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ. ಘ್ರದಲ್ಲೇ ರಸ್ತೆಗಳಲ್ಲಿ ನಿಲ್ಲಿಸುವ ಪ್ರತಿಯೊಂದು ವಾಹನಗಳಿಗೆ ಹಣ ಪಾವತಿ ಮಾಡುವ ನಿಯಮ ಜಾರಿಯಾಗಲಿದೆ.
ಸ್ಥಳವನ್ನುಆಧರಿಸಿ ಗಂಟೆಗೆ ಸುಮಾರು 25 ರಿಂದ 75 ರೂ. ಪಾರ್ಕಿಂಗ್ ಶುಲ್ಕ ವಿಧಿಸಲು ಡಿಯುಎಲ್ಟಿ ಪ್ರಸ್ತಾವನೆ ಸಲ್ಲಿಸಿದೆ. ಸುಗಮ ಟ್ರಾಫಿಕ್, ವಾಹನ ಮಾಲೀಕರಲ್ಲಿ ಶಿಸ್ತು ತರಲು, ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರು ಸರ್ಕಾರಿ ಸಾರಿಗೆ ಬಳಸಲು ಉತ್ತೇಜಿಸಲು ಈ ಪಾರ್ಕಿಂಗ್ ನೀತಿ ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.