ಕನ್ನಡ ಸುದ್ದಿ  /  Karnataka  /  Araga Jnanendra On Flag Hoisting At Chamrajpet Idgah Maidan

Araga Jnanendra: ನಾಳೆ ಬೆಳಗ್ಗೆ 8 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

ನಾಳೆ ಬೆಳಿಗ್ಗೆ 8 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ
ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ನಡೆಸಿದರು. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಸಮಾರಂಭಕ್ಕೆ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯಲ್ಲೂ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯ ಸಾರ್ವಜನಿಕರು ಶಾಂತಿ ಪ್ರಿಯರು. ಹಾಗಾಗಿ ಯಾವುದೇ ಅಡಚಣೆ ಆಗುವುದಿಲ್ಲ ಎಂದು ಭಾವಿಸಿದ್ದೇನೆ. ಆದರೂ ಮೊದಲ ಬಾರಿಯ ಧ್ವಜಾರೋಹಣವಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಧ್ವಜಾರೋಹಣ ಸಮಾರಂಭದಲ್ಲಿ ಸ್ಥಳೀಯ ಸಂಸದರು, ಶಾಸಕರು, ಜನಪತ್ರಿನಿಧಿಗಳು ಹಾಗಾಗಿ ಸ್ಥಳೀಯ ನಾಗರಿಕರು ಭಾಗವಹಿಸಲಿದ್ದಾರೆ ಎಂದರು.

ಮೈದಾನದ ಪಕ್ಕದಲ್ಲೇ ಇರುವ ಕಾರ್ಪೋರೇಷನ್ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ನಾವ್ಯಾರೂ ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿರಲಿಲ್ಲ. ಸ್ವಾತಂತ್ರ್ಯ ತರಲು ಬಹಳಷ್ಟು ಜನರು ತ್ಯಾಗ ಬಲಿದಾನ ನೀಡಿದ್ದಾರೆ. ಅವರನ್ನು ಸ್ಮರಣೆ ಮಾಡಿಕೊಳ್ಳುವ ಮೂಲಕ ದೇಶಭಕ್ತಿಯನ್ನು ನಿರ್ಮಾಣ ಮಾಡುವಂತಹ ಸಂದರ್ಭ ಇದು. ಹಾಗಾಗಿ ಕಾರ್ಯಕ್ರಮಕ್ಕೆ ಯಾರಿಗೂ ನಿರ್ಬಂಧವಿಲ್ಲ. ಎಲ್ಲರೂ ಭಾಗವಹಿಸಬಹುದು ಎಂದು ಹೇಳಿದರು.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದ ವತಿಯಿಂದ ನಾಳೆ ನಡೆಯಲಿರುವ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷ ಧ್ವಜಾರೋಹಣ ಸಮಾರಂಭದ ಹಿನ್ನೆಲೆಯಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸಂಜೆ ಪರಿಶೀಲಿ‌ಸಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ದಿ ಹಾಗೂ ಇತರ ಅಧಿಕಾರಿಗಳೂ ಈ ಸಂದರ್ಭದಲ್ಲಿ ಹಾಜರಿದ್ದರು.