ಕೈಗಾರಿಕಾ ಉದ್ದೇಶಕ್ಕೆ ನೀಡಿದ ಎಚ್ಎಂಟಿ ಭೂಮಿ ಈಗ ರಿಯಲ್ ಎಸ್ಟೇಟ್ಗೆ ಬಳಕೆ, 443 ಎಕರೆ ಭೂಮಿ ಮಂಜೂರಾತಿ ಗೆಜೆಟ್ ಅಧಿಸೂಚನೆಯೇ ಇಲ್ಲ
ಬೆಂಗಳೂರಿನಲ್ಲಿ ಎಚ್ಎಂಟಿ ಕಂಪೆನಿಗೆ ಅರಣ್ಯ ಭೂಮಿ ಹಸ್ತಾಂತರಕ್ಕೆ ಸಂಬಂಧಿಸಿ ಸೂಕ್ತ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿಲ್ಲ ಎನ್ನುವುದು ಈಗ ಹೊರ ಬಿದ್ದಿದೆ.

ಬೆಂಗಳೂರು: ಬೆಂಗಳೂರಿನ ಎಚ್ಎಂಟಿ ಉದ್ಯಮಕ್ಕೆ ದಶಕಗಳ ಹಿಂದೆ ನೀಡಿದ್ದ ಅರಣ್ಯ ಭೂಮಿ ವಿವಾದ ಭಿನ್ನ ಸ್ವರೂಪ ಪಡೆದುಕೊಳ್ಳುತ್ತಲೇ ಇದೆ. ಈಗಾಗಲೇ ಎಚ್ಎಂಟಿ ಕಾರ್ಖಾನೆ ಬಂದ್ ಆದ ನಂತರ ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ ನೀಡಿದ್ದ ಭೂಮಿಯನ್ನು ವಶಕ್ಕೆ ಪಡೆದು ಅಲ್ಲಿ ಅರಣ್ಯ ಪ್ರದೇಶ ಬೆಳೆಸುವ ಪ್ರಸ್ತಾವನೆಯನ್ನು ಕರ್ನಾಟಕ ಅರಣ್ಯ ಈಗಾಗಲೇ ಸಿದ್ದಪಡಿಸಿದೆ. ಅಲ್ಲಿನ ಭೂಮಿಯನ್ನು ರಿಯಲ್ ಎಸ್ಟೇಟ್ ರೂಪದಲ್ಲಿ ವಸತಿಗಳ ನಿರ್ಮಾಣಕ್ಕೆ ಬಳಸಲಾಗಿದೆ. ಉಳಿದಿರುವ ಭೂಮಿಯನ್ನು ವಶಕ್ಕೆ ಪಡೆದು ಸರ್ಕಾರದ ಅನುಮತಿಯೇ ಇಲ್ಲದೇ ಹಸ್ತಾಂತರಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದವೂ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಈ ನಡುವೆ ಎಚ್ಎಂಟಿಗೆ ನೀಡಿರುವ 443 ಎಕರೆ ಭೂಮಿ ಮಂಜೂರಾತಿ ಗೆಜೆಟ್ ಅಧಿಸೂಚನೆಯೇ ಇಲ್ಲ ಎನ್ನುವ ಅಂಶವೂ ಬೆಳಕಿಗೆ ಬಂದಿದೆ.
ವಿವಾದ ಭಿನ್ನ ಸ್ವರೂಪ ಪಡೆದುಕೊಂಡು ಕೇಂದ್ರ ಕೈಗಾರಿಕಾ ಇಲಾಖೆಯು ಭೂಮಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಉದ್ಯಮವೇ ಇಲ್ಲದ ಎಚ್ಎಂಟಿಗೆ ಅರಣ್ಯ ಭೂಮಿ ಅಗತ್ಯವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರಣದಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ಭೂಮಿ ಹಸ್ತಾಂತರಕ್ಕೆ ಸಂಬಂಧಿಸಿ ದಾಖಲೆಗಳನ್ನು ಪರಿಶೀಲಿಸಿದಾಗ ಯಾವುದೇ ಗೆಜೆಟ್ ಅಧಿಸೂಚನೆಯನ್ನು ಹೊರಡಿಸದೇ ಭೂಮಿಯನ್ನು ದಶಕಗಳ ಹಿಂದೆ ಹಸ್ತಾಂತರಿಸಲಾಗಿದೆ. ಹೀಗೆ ಅಧಿಸೂಚನೆ ಮಾಡದೇ ಅರಣ್ಯ ಭೂಮಿಯನ್ನು ಹಸ್ತಾಂತರ ಮಾಡಲು ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಕೂಡ ಹೇಳಿದೆ. ಇದರ ನಡುವೆಯೇ ಸರ್ಕಾರ ಹಾಗೂ ಸಚಿವ ಸಂಪುಟದ ಗಮನಕ್ಕೂ ತಾರದೇ ಅರಣ್ಯ ಇಲಾಖೆಯ ಕೆಲವು ಅಧಿಕಾರಿಗಳು ಭೂಮಿ ಪರಾಭಾರೆ ವಿಚಾರದಲ್ಲ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವುದು ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ಇದೇ ಕಾರಣದಿಂದ ಕೆಲವು ಅಧಿಕಾರಿಗಳಿಗೆ ನೊಟೀಸ್ ಅನ್ನು ಕೂಡ ಜಾರಿಗೊಳಿಸಲಾಗಿದೆ.
ಈ ಕುರಿತು ಮಾತನಾಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಜಮೀನು ಮಂಜೂರಾತಿಯ ಬಗ್ಗೆಯೇ ಅನುಮಾನವಿದೆ. ಎಚ್.ಎಂ.ಟಿ. ತನಗೆ ಮಂಜೂರಾಗಿದೆ ಎಂದು ಒದಗಿಸಿರುವ ದಾಖಲೆಯಲ್ಲಿ ಸರ್ವೆ ನಂಬರ್ ಮತ್ತು ಮಂಜೂರಾದ ದಿನಾಂಕವೂ ಇಲ್ಲ. 443 ಎಕರೆ ಭೂಮಿ ಮಂಜೂರಾತಿ ಬಗ್ಗೆ ಅಥವಾ ಅರಣ್ಯೇತರ ಉದ್ದೇಶಕ್ಕೆ ಸರ್ಕಾರಿ ಆದೇಶ ಆಗಿರುವ ಯಾವುದೇ ಗೆಜೆಟ್ ಅಧಿಸೂಚನೆ ಇಲ್ಲ. ಹೀಗಿದ್ದೂ ಪ್ರಸ್ತುತ ಮುಚ್ಚಿಹೋಗಿರುವ ಎಚ್ಎಂಟಿ ಅರಣ್ಯ ಜಮೀನನ್ನು ಖಾಸಗಿ ಬಿಲ್ಡರ್ ಗಳು ಸೇರಿದಂತೆ ಹಲವು ಕಂಪನಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದೆ. ಎಚ್.ಎಂ.ಟಿ.ಗೆ ರಿಯಲ್ ಎಸ್ಟೇಟ್ ದಂಧೆ ನಡೆಸಲು ಸರ್ಕಾರ ಅವಕಾಶ ಕೊಡಬೇಕೇ ಎಂಬ ಪ್ರಶ್ನೆಯನ್ನು ಹಾಕಿದ್ದಾರೆ.
ಸರ್ವೋಚ್ಚ ನ್ಯಾಯಾಲಯವು ಒಮ್ಮೆ ಅರಣ್ಯ ಎಂದು ಗುರುತಿಸಿದರೆ ಅದು ಯಾವಾಗಲೂ ಅರಣ್ಯವೇ. ಅಲ್ಲವೇ ಮಾನವ ಹಕ್ಕುಗಳಿಗಿಂತ ಪರಿಸರವೇ ಅತೀಮುಖ್ಯ ಎನ್ನುವುದನ್ನು ಎಲ್ಲರೂ ಅರಿಯಬೇಕು ಎನ್ನುವುದನ್ನು ಉಲ್ಲೇಖಿಸಿರುವ ಈಶ್ವರ ಖಂಡ್ರೆ, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಡಿನೋಟಿಫೈ ಆಗಿಲ್ಲ. ಹೀಗಾಗಿ ಅದನ್ನು ಪರಭಾರೆ, ದಾನ ಮಾಡಲು ಅವಕಾಶವೇ ಇಲ್ಲ. ಅರಣ್ಯ ಭೂಮಿ ಮರಳಿ ಪಡೆಯುವುದರಲ್ಲಿ ತಪ್ಪೇನು? ಎಂದೂ ಕೇಳಿದ್ದಾರೆ.
ಜೊತೆಗೆ ಕೆಲವೇ ಕೆಲವು ಅಧಿಕಾರಿಗಳು ಸಚಿವ ಸಂಪುಟದ ಗಮನಕ್ಕೂ ತಾರದೆ, ತಾವೇ ಸ್ವಯಂ ನಿರ್ಧಾರ ಕೈಗೊಂಡು ಸುಪ್ರೀಂಕೋರ್ಟ್ ಗೆ ಮಧ್ಯಂತರ ಅರ್ಜಿ (IA) ಹಾಕಿದ್ದರು, ಈ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಸಹ ನೀಡಲಾಗಿದೆ. ಸರ್ಕಾರದ ಸಮ್ಮತಿ ಇಲ್ಲದ ಐಎ ಹಿಂಪಡೆಯಲು ನಿರ್ಧರಿಸಲಾಗಿತ್ತು, ಇದಕ್ಕೆ ಸಚಿವ ಸಂಪುಟವೂ ಘಟನೋತ್ತರ ಅನುಮೋದನೆ ನೀಡಿದೆ. ಇದರಲ್ಲಿ ಅಭಿವೃದ್ಧಿಗೆ ಅಡ್ಡಿ ಪಡಿಸುವ ಯಾವುದೇ ರಾಜಕೀಯ ಇಲ್ಲ. ಬದಲಾಗಿ ರಾಜ್ಯದ ಹಿತವಿದೆ. ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ, ಮತ್ತು ಕೆಐಓಸಿಎಲ್. ವಿಚಾರದಲ್ಲಿ ಆರೋಪ ಮಾಡುವುದನ್ನು ಬಿಟ್ಟು, ರಾಜ್ಯದ ಹಿತದ ಬಗ್ಗೆಯೂ ಚಿಂತಿಸಬೇಕು ಎಂದು ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ.
ಕುದುರೆಮುಖ ಐಒಸಿಎಲ್
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ. ಕೆಐಓಸಿಎಲ್. ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ ಮೊತ್ತ ಸೇರಿದಂತೆ 1400 ಕೋಟಿ ರೂ. ಬಾಕಿ ಕಟ್ಟಿಲ್ಲ. ತನ್ನ ತಪ್ಪು ಸರಿಪಡಿಸಿಕೊಳ್ಳಲು ತಯಾರಿಲ್ಲದ ಕಂಪನಿಗೆ ಮತ್ತಷ್ಟು ಪರಿಸರ ಹಾನಿ ಮಾಡಲು ಬಿಡಬೇಕೆ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಕೆಐಓಸಿಎಲ್ ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿತ್ತು. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಎನ್.ಪಿ.ವಿ. ಮೊತ್ತ, ಬಡ್ಡಿ ಸೇರಿ ಸುಮಾರು 1349.52948 ಕೋಟಿ ರೂ.ಗಳನ್ನು ಅರಣ್ಯ ಇಲಾಖೆಗೆ ಪಾವತಿಸಬೇಕಿದೆ, ಇದರ ಜೊತೆಗೆ 1334.33 ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕಿದೆ. ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರು, ಅರಣ್ಯ ಇಲಾಖೆಗೆ ಕಟ್ಟಬೇಕಾದ ಬಾಕಿ ಮತ್ತು ಹಿಂತಿರುಗಿಸಬೇಕಾದ ಭೂಮಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎನ್ನುವುದು ಖಂಡ್ರೆ ಪ್ರಶ್ನೆ.
ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ಕೆಐಓಸಿಎಲ್ ಪರಿಸರಕ್ಕೆ ಮಾಡಿರುವ ಹಾನಿಯ ಬಗ್ಗೆ ಸ್ಪಷ್ಟವಾಗಿ ಉಲ್ಲೇಖವಿದೆ. ಕಂಪನಿ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಸೂಕ್ತ ಅನುಮತಿ ಪಡೆಯದೇ ನಿಯಮ ಉಲ್ಲಂಘಿಸಿದೆ. ಮಾಡಿರುವ ತಪ್ಪು ಸರಿಪಡಿಸಿಕೊಂಡು, ದಂಡ ಪಾವತಿಸಿ ಎಂದು ಹೇಳಿದರೆ ಅದು ಅಭಿವೃದ್ಧಿಗೆ ಅಡ್ಡಿ ಮಾಡುವ ರಾಜಕೀಯ ಆಗುತ್ತದೆಯೇ ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.
ಬಳ್ಳಾರಿ ಕಾರ್ಖಾನೆ ಏನಾಯ್ತು
ಕೇಂದ್ರ ಉಕ್ಕು ಸಚಿವಾಲಯದಡಿ ಬರುವ ಎನ್.ಎಂ.ಡಿ.ಸಿ.ಗೆ ಉಕ್ಕು ಕಾರ್ಖಾನೆ ಸ್ಥಾಪಿಸಲು 2014ರಲ್ಲಿಯೇ ಬಳ್ಳಾರಿ ಬಳಿ ವೇಣಿವೀರಾಪುರದಲ್ಲಿ 2857.54 ಎಕರೆ ಜಮೀನು ನೀಡಲಾಗಿದೆ. ಉಕ್ಕು ಕಾರ್ಖಾನೆ ಆರಂಭಿಸಿದರೆ 50 ಸಾವಿರ ಜನರಿಗೆ ಉದ್ಯೋಗ ಲಭಿಸುತ್ತದೆ. ಕೆಐಓಸಿಎಲ್ ಮುಚ್ಚಿದರೆ 300 ಕಾರ್ಮಿಕರಿಗೆ ತೊಂದರೆ ಆಗುತ್ತದೆ ಎನ್ನುತ್ತಿದ್ದ ಕುಮಾರಸ್ವಾಮಿ ಈಗ 1000 ಕಾರ್ಮಿಕರು ಎನ್ನುತ್ತಿದ್ದಾರೆ, ವೇಣಿಪುರದಲ್ಲಿ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ನೀಡಬಹುದು. ಏಕೆ ಆರಂಭ ಮಾಡುತ್ತಿಲ್ಲ ಎಂದು ಉತ್ತರಿಸಲಿ ಎನ್ನುವುದು ಖಂಡ್ರೆ ಹಾಕಿರುವ ಸವಾಲು.
