CM Siddaramaiah: ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿ ವಿಳಂಬಕ್ಕೆ ಸಿಎಂ ಅಸಮಾಧಾನ, ಕಾರ್ಯದರ್ಶಿಗಳ ಮೇಲೆ ಗರಂ
ಕನ್ನಡ ಸುದ್ದಿ  /  ಕರ್ನಾಟಕ  /  Cm Siddaramaiah: ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿ ವಿಳಂಬಕ್ಕೆ ಸಿಎಂ ಅಸಮಾಧಾನ, ಕಾರ್ಯದರ್ಶಿಗಳ ಮೇಲೆ ಗರಂ

CM Siddaramaiah: ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿ ವಿಳಂಬಕ್ಕೆ ಸಿಎಂ ಅಸಮಾಧಾನ, ಕಾರ್ಯದರ್ಶಿಗಳ ಮೇಲೆ ಗರಂ

Mining ಕರ್ನಾಟಕದಲ್ಲಿ ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿಗೆ ವಿಳಂಬ ಮಾಡುತ್ತಿರುವ ಇಲಾಖೆಯ ಕಾರ್ಯದರ್ಶಿಗಳ ವಿರುದ್ದ ಸಿದ್ದರಾಮಯ್ಯ ಮಾತಿನ ಚಾಟಿ ಬೀಸಿದರು.

ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಅಭಿವೃದ್ದಿ ಆಯುಕ್ತರಾದ ಡಾ.ಶಾಲಿನಿ ರಜನೀಶ್‌ ಪಾಲ್ಗೊಂಡಿದ್ದರು.
ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಅಭಿವೃದ್ದಿ ಆಯುಕ್ತರಾದ ಡಾ.ಶಾಲಿನಿ ರಜನೀಶ್‌ ಪಾಲ್ಗೊಂಡಿದ್ದರು.

ಬೆಂಗಳೂರು: ಗಣಿ ಪರಿಸರ ಪುನಶ್ಚೇತನ ಯೋಜನೆ ಜಾರಿ ಮಾಡಲು ವಿಳಂಬ ಆಗುತ್ತಿರುವುದಕ್ಕೆ ವಿವಿ ಇಲಾಖೆಗಳ ಕಾರ್ಯದರ್ಶಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ಕಾರ್ಯದರ್ಶಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ ಆದರು. ವರ್ಷ ಕಳೆದರೂ ವಿಸ್ತೃತ ಯೋಜನೆ ನೀಡಲು ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳ ಆಕ್ರೋಶ ಹೊರ ಹಾಕಿದ್ದೂ ಅಲ್ಲದೇ ಬೇಗನೇ ವರದಿ ನೀಡುವಂತೆ ತಾಕೀತು ಮಾಡಿದರು,

ಕೆಎಂಇಆರ್ ಸಿ ಗೆ ಕೆಪ್‌ ಮಿಜ್‌(CEPMIZ) ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ. ಇದರಲ್ಲಿ ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಒಟ್ಟು 7928.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದ್ದಾರೆ. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ.ಈ ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸಿಎಂ ಸೂಚಿಸಿದರು.

ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಸೂಚಿಸಿದರು.

ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಮೊದಲೇ ಅನುಮತಿ ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟ ಪಡಿಸಲು ನಿರ್ದೇಶನ ನೀಡಿದರು.

ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ. , ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ. , ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ. ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರವೇ ಗುರುತಿಸಬೇಕು. ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ‌ ಮಾಡಬೇಕು. ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡುವಂತೆ ಸೂಚಿಸಿದರು.

ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಭಾಗವಹಿಸಬೇಕು. ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟವನ್ನು ಖಾತರಿಪಡಿಸಬೇಕು. ಗಣಿ ಬಾಧಿತ ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆ ಇದ್ದು, ತೃಪ್ತಿಕರ ಹಂತಕ್ಕೆ ತಲುಪಿದೆ ಎಂದು ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Whats_app_banner