Belagavi News: ಬಾನಂಗಳದಲ್ಲಿ ಚಿಮ್ಮಿದ ರಂಗು, ಬೆಳಗಾವಿ ಸುವರ್ಣಸೌಧದ ಎದುರು ಬಾಪೂಜಿ ಪುತ್ಥಳಿ ಲೋಕಾರ್ಪಣೆ ಮೆರಗು
ಬೆಳಗಾವಿಯಲ್ಲಿ ಮಂಗಳವಾರ ಗಾಂಧಿ ಸ್ಮರಣೆ. ಶತಮಾನದ ಹಿಂದೆ ಬೆಳಗಾವಿಗೆ ಗಾಂಧೀಜೀ ಬಂದು ಕಾಂಗ್ರೆಸ್ ಸಮಾವೇಶ ನಡೆಸಿದ ನೆನಪಿನ ಕಾರ್ಯಕ್ರಮ, ಅವರ ಪುತ್ಥಳಿ ಅನಾವರಣವೂ ನಡೆಯಿತು.

ಬೆಳಗಾವಿ: ಬೆಳಗಾವಿಯಲ್ಲಿ ಅಪರೂಪದ ಕಾರ್ಯಕ್ರಮ. ಅದು ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರು ಬೆಳಗಾವಿ ಸರಿಯಾಗಿ ನೂರು ವರ್ಷದ ಹಿಂದೆ ಭೇಟಿ ನೀಡಿದ ನೆನಪಿನ ಕಾರ್ಯಕ್ರಮ. ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಾಪೂಜಿಯ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಚರಕವನ್ನು ತಿರುಗಿಸುವ ಮೂಲಕ ಮಹಾತ್ಮಾಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಿದ ಕೂಡಲೇ ಬಾನಂಗಳಕ್ಕೆ ಚಿಮ್ಮಿದ ಬಣ್ಣದ ಚಿತ್ತಾರ ಮೂಡಿಸಿ, ಚಿತ್ತಾಕರ್ಷಕ ಕಾಮನಬಿಲ್ಲಿನ ವರ್ಣಗಳನ್ನು ಅರಳಿಸಿ, ಪಟಾಕಿ ಹಾರಿಸಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಿತು.
ಕರ್ನಾಟಕ ಏಕೀಕರಣ ಚಳವಳಿಗೆ ಪ್ರೇರಣೆಯಾಗಿದ್ದ ಹುಯಿಲಗೋಳ ನಾರಾಯಣರಾವ್ ಅವರು ರಚಿಸಿದ " ಉದಯವಾಗಲಿ ನಮ್ಮ ಚೆಲುವು ಕನ್ನಡ ನಾಡು" ಗೀತೆಯನ್ನು ಸಾದ್ವಿನಿ ಕೊಪ್ಪ ಅವರು ಪ್ರಸ್ತುತಪಡಿಸಿದಾಗ ಗಾಂಧೀಜಿಯನ್ನು ಭಾವಪೂರ್ವವಾಗಿಯೇ ಗಣ್ಯರು ಸ್ಮರಿಸಿದರು.
ಗಾಂಧಿ ಟೋಪಿ ಧರಿಸಿ ಬಂದ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ ಅನಾವರಣಗೊಳಿಸಿದರು.
ಕಲಬುರಗಿಯಲ್ಲೂ ಗಾಂಧಿ ಪುತ್ಥಳಿ
ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ ಕರ್ನಾಟಕಕ್ಕೆ ಗೌರವ ತಂದಿದೆ. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು. ಗಾಂಧೀಜಿವರು ದೇಶಕ್ಕೆ ನೀಡಿದ ಕೊಡುಗೆಯನ್ನು ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ.ಗಾಂಧೀಜಿಯವರು ತಮ್ಮ ಅಧ್ಯಕ್ಷತೆಯಲ್ಲಿ 1924 ರಲ್ಲಿ ಜರುಗಿದ ಅಧಿವೇಶನದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಕರೆ ನೀಡಿದರು. ಆದ್ದರಿಂದ ಈ ನೆಲವು ಐತಿಹಾಸಿಕ ಮಹತ್ವವನ್ನು ಹೊಂದಿದೆ.1924 ರಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿಯೇ ನೂರು ವರ್ಷದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಿರುವುದು ಅತ್ಯಂತ ಮಹತ್ವದ್ದಾಗಿದೆ. ಕಲಬುರಗಿಯಲ್ಲೂ ಕೂಡ ಮಹಾತ್ಮಾಗಾಂಧೀಜಿಯವರ ವಿಶೇಷ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.
ಗಾಂಧೀಜಿ ನಿಜ ಹಿಂದೂ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಗಾಂಧೀಜಿಯವರು 1924 ರಲ್ಲಿ ಕಾಂಗ್ರೆಸ್ ನ ಐತಿಹಾಸಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ನಡೆದಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಮಹಾತ್ಮಾ ಗಾಂಧೀಜಿಯವರು ಅಂದು ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತು ಪ್ರತಿಪಾದನೆ ಮಾಡಿದ್ದರು. ಗಾಂಧೀಜಿಯವರು ಸದಾ ಶ್ರೀರಾಮನ ಸ್ಮರಣೆಮಾಡುತ್ತಿದ್ದರು. ಅವರು ಅಪ್ಪಟ ಹಿಂದೂ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಅವರು ಎಂದೂ ಹಿಂದೂ ವಿರೋಧಿಯಾಗಿರಲಿಲ್ಲ; ಆದರೆ ಹಿಂದೂ ಧರ್ಮದಲ್ಲಿ ಸಮಾನತೆ ಮತ್ತು ಸಹೋದರತೆಯನ್ನು ಬಯಸಿದ್ದರು. "ಹೇ ರಾಮ್" ಎನ್ನುತ್ತಲೇ ಕೊನೆಯುಸಿರೆಳೆದರು. ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೂಡ ಮಹಾತ್ಮಾ ಗಾಂಧೀಜಿಯವರ ತತ್ವಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಸಂವಿಧಾನ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ ನಡೆದಿದೆ. ಅದಕ್ಕೆ ನಾವು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು.
ರಾಮರಾಜ್ಯ ಕನಸು
ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ , ಇದೊಂದು ಐತಿಹಾಸಿಕ ಕಾರ್ಯಕ್ರಮ; ಇದು ಕೇವಲ ಪುತ್ಥಳಿ ಅನಾವರಣ ಕಾರ್ಯಕ್ರಮ ಮಾತ್ರವಲ್ಲ. ಸ್ವಾತಂತ್ರ್ಯ ಯೋಧರಿಗೆ ಗೌರವಿಸುವ ಮತ್ತು ಸಂವಿಧಾನದ ಘನತೆ ಎತ್ತಿ ಹಿಡಿಯುವ ಪವಿತ್ರ ಕಾರ್ಯಕ್ರಮವಾಗಿದೆ. ಏಕೀಕರಣ ಕೂಡ ಗಾಂಧಿಜಿಯವರ ಪ್ರೇರಣೆ ದೊರೆತಿದೆ. ಏಕತೆ, ಸಮಾನತೆಕಾಪಾಡಿಕೊಂಡು ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್ ಮನನ ಮಾಡಲು ಇದು ಸ್ಫೂರ್ತಿದಾಯಕವಾಗಿದೆ. ಗಾಂಧೀಜಿಯವರ ತತ್ವಗಳನ್ನು ಬದಿಗಿಟ್ಟು ಸದೃಢ ಭಾರತ ನಿರ್ಮಾಣ ಅಸಾಧ್ಯ. ಆದ್ದರಿಂದ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಎಲ್ಲರೂ ಒಗ್ಗೂಡಿಕೊಂಡು ಮುನ್ನಡೆಯಬೇಕಿದೆ. ರಾಮರಾಜ್ಯ ಮತ್ತು ಗ್ರಾಮರಾಜ್ಯ ಮಹಾತ್ಮಾ ಗಾಂಧೀಜಿಯವರ ಕನಸಾಗಿತ್ತು. ಪರಸ್ಪರ ಸಹೋದರತೆ, ತ್ಯಾಗ, ಪತ್ನಿಯ ತ್ಯಾಗವು ರಾಮರಾಜ್ಯದ ನೈಜ ಪರಿಕಲ್ಪನೆಯಾಗಿದೆ ಎಂದು ಹೇಳಿದರು.
ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಗಾಂಧಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಜೈರಾಮ್ ರಮೇಶ್ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ, ಸತೀಶ್ ಜಾರಕಿಹೊಳಿ, ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಉಪಸ್ಥಿತರಿದ್ದರು.
ಗ್ರಾಮೀಣ ವಿವಿಗೆ "ಮಹಾತ್ಮಾ ಗಾಂಧೀಜಿ" ನಾಮಕರಣ
ಗದುಗಿನ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಯಲಯವನ್ನು "ಮಹಾತ್ಮಾ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ" ಎಂದು ಮರುನಾಮಕರಣ ಮಾಡುವುದರ ಜತೆಗೆ ನೂತನ ಲಾಂಛನವನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು. ಕುಲಪತಿ ಡಾ.ಸುರೇಶ್ ನಾಡಗೌಡರ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧೀ ಭಾರತ ವಿಶೇಷ ಅಂಚೆ ಲಕೋಟೆಯನ್ನು ಕೂಡ ಬಿಡುಗಡೆಗೊಳಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹೊರತರಲಾದ "ಗಾಂಧಿ ಭಾರತ-ಮರುನಿರ್ಮಾಣ" ಹಾಗೂ ಉದಯ ಕಾಲ ಸಮೂಹದ ಗಾಂಧಿ ಬಿತ್ತಿದ ಬೆಳಕು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.
