ಬಿಡದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬಿಡದಿಯಲ್ಲಿ ನಡೆದಿದೆ. ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಡಾನ್, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ (ಏಪ್ರಿಲ್ 12, ಶನಿವಾರ) 1.30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗಾಯವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಿಕ್ಕಿ ರೈ ತಮ್ಮ ಕಪ್ಪು ಬಣ್ಣದ ಫಾರ್ಚೂನರ್ ಕಾರಿನಲ್ಲಿ ಬೆಂಗಳೂರಿಗೆ ಹೋಗಲು ಮನೆಯಿಂದ ಹೊರ ಬರುತ್ತಿದ್ದಂತೆ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ತೀವ್ರವಾಗಿ ಗಾಯಗೊಂಡಿರುವ ರಿಕ್ಕಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಮನಗರ ಎಸ್ಪಿ ಶ್ರೀನಿವಾಸ ಗೌಡ, ಡಿವೈಎಸ್ಪಿ ಶ್ರೀನಿವಾಸ ಅವರ ನೇತೃದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಗುಂಡಿನ ದಾಳಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈರಿಂಗ್ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ರಿಕ್ಕಿ ರೈ ಅವರ ಮನೆ ಬಳಿಯ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಬಿಡದಿ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಎರಡು ದಿನಗಳ ಹಿಂದಷ್ಟೇ ವಿದೇಶದಿಂದ ಬೆಂಗಳೂರಿಗೆ ವಾಪಸ್ ಬಂದಿದ್ದರು. ಈತ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.