ನಿಂತಲ್ಲೇ ಇರುವ ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ; ಗುತ್ತಿಗೆದಾರರಿಗೆ ಬಿಬಿಎಂಪಿ ನೋಟಿಸ್
ಗುತ್ತಿಗೆ ನೀಡಿ ತಿಂಗಳುಗಳೇ ಕಳೆದರೂ ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿರುವುದು ಹಾಗೂ ನಿಧಾನಗತಿಯ ಕಾಮಗಾರಿಗಾಗಿ ಗುತ್ತಿಗೆದಾರರಿಗೆ ಬಿಬಿಪಿಎಂ ನೋಟಿಸ್ ನೀಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-ಬಿಬಿಎಂಪಿ ಈಜಿಪುರ ಫ್ಲೈಓವರ್ ಕಾಮಗಾರಿಯ ಗುತ್ತಿಗೆ ಪಡೆದಿರುವ ಬಿಎಸ್ಸಿಪಿಎಲ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ಗೆ ನೋಟಿಸ್ ನೀಡಿದೆ. ಶೇಕಡಾ 4 ರಷ್ಟು ಮಾತ್ರ ಕಾಮಗಾರಿಯನ್ನು ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬುಧವಾರ (ಮೇ 22) ಸಿಟಿ ರೌಂಡ್ಸ್ ವೇಳೆ ಈಜಿಪುರ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿರುವ ಬಗ್ಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಭರ್ತಿ ಮಾಡಬೇಕು
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.
ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ.
ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬ ಫುಲ್ ಟ್ರೋಲ್
ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ಗಳನ್ನು ಹಲವು ಕಡೆಗಳಲ್ಲಿ ಕಾಣಬಹುದು ಆದರೆ ಈಜಿಪುರ ಫ್ಲೈಓವರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿತ್ತು. 2023ರ ಮಾರ್ಟ್ನಲ್ಲೇ ಗೂಗಲ್ ಸ್ಥಳಗಳಲ್ಲಿ ನೋಡಲೇಬೇಕಾದ ಸ್ಮಾರಕವೆಂದು ಟ್ರೋಲ್ ಆಗಿದೆ. 6 ವರ್ಷಗಳ ಅಪೂರ್ಣ ಯೋಜನೆಯ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ ಎಂಬುದನ್ನು ನೆಟ್ಟಿಗರು ವ್ಯಂಗ್ಯವಾಗಿ ಟೀಕಿಸಿದ್ದರು.
ಕಾಲೇಬ್ ಫ್ರೈಸೆನ್ ಎಂಬ ಟ್ವಿಟ್ಟರ್ ಬಳಕೆದಾರರು ಅಪೂರ್ಣಗೊಂಡಿರುವ ಈಜಿಪುರ ಫ್ಲೈಓವರ್ ಅನ್ನು ತೋರಿಸುವ 'ಸ್ಟೋನ್ಹೆಂಜ್' ಎಂಬ ಗೂಗಲ್ ಹೆಗ್ಗುರುತನ್ನು ಹಂಚಿಕೊಂಡಿದ್ದರು."ಈ ಸ್ಮಾರಕಗಳು ಬೆಂಗಳೂರಿನ ಅತ್ಯಂತ ನಡೆಯುತ್ತಿರುವ ಭಾಗದಲ್ಲಿ ಪ್ರವಾಸೋದ್ಯಮದ ಸಾರಾಂಶವಾಗಿದೆ. ಭೇಟಿ ನೀಡಲೇಬೇಕು! ಎನ್ನುವ ಮೂಲಕ ಹಲವರು ಈ ಪೋಸ್ಟ್ಗೆ ಕಾಮೆಂಟ್ಗಳನ್ನು ಕೂಡ ಮಾಡಿದ್ದಾರೆ.
"ನಾನು ಸೋನಿ ಸಿಗ್ನಲ್ ಪಕ್ಕದಲ್ಲಿಯೇ ವಾಸಿಸುತ್ತಿದ್ದೇನೆ, ಇಲ್ಲಿ ಕಾಮಗಾರಿ ಕೆಲಸ ನಡೆಯುತ್ತಿತ್ತು. ಆದರೆ ಇದನ್ನು ಕೈಬಿಡಲಾಗಿದೆ. ಫ್ಲೈಓವರ್ ಈಜಿಪುರ ಮತ್ತು ಮಡಿವಾಳವನ್ನು ಸಂಪರ್ಕಿಸಬೇಕಿತ್ತು. ಕಳೆದ 5 ವರ್ಷಗಳಿಂದ ಪ್ರತಿದಿನ ಟ್ರಾಫಿಕ್ ಜಾಮ್ ಉಂಟುಮಾಡಿದ್ದಾರೆ. ಮತ್ತು ಇನ್ನೂ ಯೋಜನೆಯನ್ನು ಪೂರ್ಣಗೊಳಿಸುವ ಯಾವುದೇ ಯೋಜನೆಗಳಿಲ್ಲ. ನಿಜವಾಗಿಯೂ ಕರುಣಾಜನಕ ಎಂದು ಮತ್ತೊಬ್ಬ ನೆಟ್ಟಿಗರು ಕಾಮೆಂಟ್ ಮಾಡಿದ್ದರು.
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)