CET Exam: ಸಿದ್ದರಾಮಯ್ಯ ಡಿಕೆಶಿ ಪ್ರಮಾಣವಚನ ದಿನದಂದೇ ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳೇ ಟ್ರಾಫಿಕ್ ಬಗ್ಗೆ ಇರಲಿ ಎಚ್ಚರ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ನಾಳೆಯೇ ಸಿಇಟಿ ಪರೀಕ್ಷೆ ಇರುವುದರಿಂದ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕಿದೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka assembly election) ಕಾಂಗ್ರೆಸ್ ಪಕ್ಷ (Congress) ಸ್ಪಷ್ಟಬಹುಮತದ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಫಲಿತಾಂಶ ಹೊರಬಿದ್ದ 7 ದಿನಗಳ ಬಳಿಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ನಾಳೆ (ಮೇ 20, ಶನಿವಾರ) ಕಂಠೀವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮತ್ತೊಂದೆಡೆ ಇದೇ ದಿನ ಅಂದರೆ ನಾಳೆಯಿಂದ ವೃತ್ತಿಪರ ಕೋರ್ಸ್ಗಳಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ (Karnataka CET 2023) ಆರಂಭವಾಗಲಿದ್ದು, ವಿದ್ಯಾರ್ಥಿಗಳು ಟ್ರಾಫಿಕ್ ಸಂಚಾರದ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ.
ವಿವಿಧ ವೃತ್ತಿಪರ ಕೋರ್ಸ್ಗಳಿಗಾಗಿ ರಾಜ್ಯಾದ್ಯಂತ ನಾಳೆ (ಮೇ 20, ಶನಿವಾರ) ಹಾಗೂ ನಾಡಿದ್ದು (ಮೇ 21, ಭಾನುವಾರ) ಸಿಇಟಿ ಪರೀಕ್ಷೆ ನಡೆಯಲಿದೆ. ಬಿಎಸ್ಸಿ ನರ್ಸಿಂಗ್, ವೆಟರ್ನರಿ, ಫಾರ್ಮಸಿ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ನ್ಯಾಚುರೋಪಥಿ ಮತ್ತು ಯೋಗ ಸೇರಿದಂತೆ ಮುಂದಾಗ ವೃತ್ತಿ ಪರ ಕೋರ್ಸ್ಗಳಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.
592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಒಟ್ಟು 2,16,610 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನವಾದ ನಾಳೆ ಬೆಳಿಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ.
ಮೇ 21ರ ಭಾನುವಾರ ಬೆಳಗ್ಗೆ 10.30 ರಿಂದ 11.50 ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50ರ ವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಮೇ 22 ರಂದು ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಳಗ್ಗೆ 11.30 ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ 2,084 ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬಿಗಿ ಭದ್ರತೆಯನ್ನು ಕೈಗೊಳ್ಳಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ.
ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 592 ವೀಕ್ಷಕರು, 1,184 ಮಂದಿ ವಿಶೇಷ ಸ್ಕ್ವಾಡ್, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಪರೀಕ್ಷೆಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಶೇಷವಾಗಿ ನಾಳಿನ (ಮೇ 20, ಶನಿವಾರ) ಸಿಇಟಿ ಪರೀಕ್ಷೆಯ ದಿನದಂದೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಗರದ ಹೃದಯ ಭಾಗದಲ್ಲಿ ಇರುವ ಕಂಠೀವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಾಗಿದ್ದಾರೆ. ಹೀಗಾಗಿ ನಾಳೆ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
ತಮ್ಮ ನೆಚ್ಚಿನ ನಾಯಕರ ಪದಗ್ರಹಣ ಕಾರ್ಯಕ್ರಮಕ್ಕೆ ಈ ನಾಯಕರ ಬೆಂಬಲಿಗರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸಲಿದ್ದಾರೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಿಇಟಿ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳು ನಿಗದಿತ ಸಮಯಕ್ಕಿಂತ ಮುಂಚೆಯೇ ಪರೀಕ್ಷಾ ಕೇಂದ್ರಗಳಿಗೆ ತಲುಪಿದರೆ ಯಾವುದೇ ರೀತಿಯ ಅಡ್ಡಿ ಆತಂಕಗಳು ಎದುರಾಗುವುದಿಲ್ಲ.
ಸಿಇಟಿ ಪರೀಕ್ಷೆಗೆ ಸಂಬಂಧಪಟ್ಟಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಜಿಗಳ ತಿದ್ದುಪಡಿಗೆ ಕಡೆಯ ಅವಕಾಶವನ್ನು ಇತ್ತೀಚೆಗೆ ನೀಡಿತ್ತು.