ಬೂಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಬಾನು ಮುಷ್ತಾಕ್ಗೆ ಅಭಿನಂದಿಸಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ
ಕರ್ನಾಟಕದ ಲೇಖಕಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಲೇಖಕಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು.
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ.
ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ.
ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ 'ಹೃದಯ ದೀಪ'ವನ್ನು ಇಂಗ್ಲೀಷ್ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
ಇನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ಬಾನು ಮುಷ್ತಾಕ್ ಅವರಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.
ಹಾಗೆಯೇ; ಬೂಕರ್ ಪ್ರಶಸ್ತಿ ಪುರಸ್ಕೃತವಾಗಿರುವ ಅವರ ಹೃದಯ ದೀಪ ಕೃತಿಯನ್ನು ಇಂಗ್ಲೀಷ್ ಭಾಷೆಗೆ ಅನುವಾದಿಸಿರುವ ಲೇಖಕಿ ದೀಪಾ ಭಸ್ತಿ ಅವರಿಗೂ ಅಭಿನಂದನೆಗಳು.
ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ.