ಕನ್ನಡ ಸುದ್ದಿ  /  Karnataka  /  Congress To Host Aikyatha Samavesha At Chitradurga

Karnataka Congress: ಕಾಂಗ್ರೆಸ್‌ನಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ 'ಐಕ್ಯತಾ ಸಮಾವೇಶ'

ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಜ.8ರಂದು ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮಾಡಿದರೆ ಉತ್ತರ ಕರ್ನಾಟಕದ ಜನರಿಗೆ ದೂರವಾಗುತ್ತದೆ. ಹೀಗಾಗಿ ಎಲ್ಲರಿಗೂ ಅನುಕೂಲವಾಗುವಂತೆ ಮಧ್ಯ ಕರ್ನಾಟಕ ಭಾಗದಲ್ಲಿರುವ ಚಿತ್ರದುರ್ಗದಲ್ಲಿ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ.

ಡಾ.ಜಿ ಪರಮೇಶ್ವರ್ ಸುದ್ದಿಗೋಷ್ಠಿ
ಡಾ.ಜಿ ಪರಮೇಶ್ವರ್ ಸುದ್ದಿಗೋಷ್ಠಿ

ಬೆಂಗಳೂರು: ಜನವರಿ 8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’ವನ್ನು ಚಿತ್ರದುರ್ಗದಲ್ಲಿ ನಡೆಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ಸಮಾಜದಲ್ಲಿ ಶೋಷಿತ ವರ್ಗಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಅಂದಿನಿಂದ ಇಲ್ಲಿಯವರೆಗೂ ಈ ಸಮುದಾಯಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿವೆ. ಕಾಂಗ್ರೆಸ್ ಕೂಡ ಅವರ ಕ್ಷೇಮಾಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಕಾನೂನು ತರುವ ಮೂಲಕ, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ ಅಂಶಗಳನ್ನು ಜಾರಿಗೆ ತರಲು ಎಲ್ಲ ಪ್ರಯತ್ನ ಮಾಡಿದೆ ಎಂದರು.

ಕರ್ನಾಟಕದಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ, ಬಡತನ ರೇಖೆಯಿಂದ ಹೊರಗೆ ಮುಖ್ಯವಾಹಿನಿಗೆ ತರಲು ಕಾನೂನಾತ್ಮಕವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂದು ಬೇರೆ ಬೇರೆ ಪಕ್ಷಗಳು ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿವೆ. ಯಾವ ಪಕ್ಷಗಳು ಅವರ ಯೋಗಕ್ಷೇಮಕ್ಕೆ ಪ್ರಯತ್ನಿಸಲಿಲ್ಲ. ಪಕ್ಷದ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಪೋಟೋಗಳನ್ನು ಹಾಕಿಕೊಳ್ಳದವರು ಇಂದು ದಲಿತರ ಮನೆಗಳಲ್ಲಿ ಮಲಗಲು, ಬೇರೆ ಹೊಟೇಲ್‌ನಿಂದ ಊಟ ತರಿಸಿ ತಿಂದು ಬರುತ್ತಿದ್ದಾರೆ ಎಂದು ಟೀಕಿಸಿದರು.

ಈ ಸಮುದಾಯಗಳನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿವೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರುಗಳು ನಮ್ಮ ಜನರಿಗೆ ನಿಮ್ಮ ಜತೆ ಇದ್ದೇವೆ. ನಿಮ್ಮ ಕ್ಷೇಮ ಕಾಪಾಡಲು ನಾವು ಇದ್ದೇವೆ ಎಂದು ಮರುಭರವಸೆ ನೀಡುವ ಉದ್ದೇಶದಿಂದ ಸಮಾವೇಶ ಮಾಡಲು ನಿರ್ಧರಿಸಿದ್ದೇವೆ. ಪರಿಶಿಷ್ಟ ಜಾತಿಯಲ್ಲಿ 101 ಹಾಗೂ ಪರಿಶಿಷ್ಟ ಪಂಗಡದಲ್ಲಿ 52 ಸಮುದಾಯಗಳಿದ್ದು, ಈ ಎಲ್ಲ ಸಮುದಾಯಗಳನ್ನು ಒಂದು ವೇದಿಕೆ ಮೇಲೆ ತರಬೇಕು. ಎಲ್ಲರಿಗೂ ಸಮಸ್ಯೆ ಒಂದೇ ಆಗಿದ್ದು, ನಮ್ಮಲ್ಲಿ ವ್ಯತ್ಯಾಸ ಇರಬಾರದು. ನಮ್ಮನ್ನು ಒಡೆದು ಆಳುವ ಪ್ರಯತ್ನ ನಡೆಯುತ್ತಿವೆ. ನಮ್ಮ ರಾಜ್ಯದಲ್ಲಿ ಎರಡೂ ಸಮುದಾಯ ಸೇರಿ 24.1% ಜನರಿದ್ದು, ಸುಮಾರು 1.5 ಕೋಟಿ ಜನ ಇದ್ದಾರೆ ಎಂದು ತಿಳಿಸಿದರು.

ಕೋಟೆನಾಡಿನಲ್ಲಿ ಸಮಾವೇಶ

ಸಮಾವೇಶವನ್ನು ಚಿತ್ರದುರ್ಗದಲ್ಲಿ ಜ.8ರಂದು ಮಾಡಲು ತೀರ್ಮಾನಿಸಲಾಗುವುದು. ಬೆಂಗಳೂರಿನಲ್ಲಿ ಮಾಡಿದರೆ ಉತ್ತರ ಕರ್ನಾಟಕದ ಜನರಿಗೆ ದೂರವಾಗುತ್ತದೆ. ಹೀಗಾಗಿ ಎಲ್ಲರಿಗೂ ಅನುಕೂಲವಾಗುವಂತೆ ಮಧ್ಯ ಕರ್ನಾಟಕ ಭಾಗದಲ್ಲಿರುವ ಚಿತ್ರದುರ್ಗದಲ್ಲಿ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಲಿದ್ದು, ಅವರ ಜತೆಗೆ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮೇಲ್ಮನೆ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್ ಅವರು ಭಾಗವಹಿಸಲಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ಎಂಬುದು ಭಿಕ್ಷೆಯಲ್ಲ. ಅದು ಈ ಸಮುದಾಯದ ಹಕ್ಕು. ಮೀಸಲಾತಿ ವಿಚಾರವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗದವರು, ಶೋಷಿತರನ್ನು ಸಮಾಜದಲ್ಲಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅಂಬೇಡ್ಕರ್ ಅವರು 10 ವರ್ಷಗಳ ಮೀಸಲಾತಿ ನೀಡಿದ್ದರು. ಅವರು 10 ವರ್ಷಗಳಲ್ಲಿ ಈ ಮೀಸಲಾತಿಯಿಂದ ಈ ಸಮುದಾಯದವರು ಬದಲಾವಣೆ ಕಂಡು ಬೇರೆಯವರಂತೆ ಸಮಾಜದಲ್ಲಿ ಮೇಲೆ ಬರಬಹುದು ಎಂದು ಭಾವಿಸಿದ್ದರು. ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಗಳು ಮೀಸಲಾತಿ ಮುಂದುವರಿಸಿಕೊಂಡು ಹೋಗುತ್ತಿವೆ. ಇತ್ತೀಚೆಗೆ ಅನೇಕ ಟೀಕೆ ಟಿಪ್ಪಣಿ ಬರುತ್ತಿವೆ. ಎಲ್ಲಿಯವರೆಗೆ ಅಸ್ಪೃಷ್ಯತೆ ಇರುತ್ತದೆಯೋ, ಈ ಸಮುದಾಯದ ಏಳಿಗೆ ಸಾಧ್ಯವಾಗುವುದಿಲ್ಲವೋ, ಅಲ್ಲಿಯವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ನಾವು ಆಗ್ರಹಿಸುತ್ತೇವೆ.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಜನಸಂಖ್ಯೆ ಅನುಗುಣವಾಗಿ ಬಜೆಟ್‌ನಲ್ಲಿ 24.1% ಅನುದಾನ ಮೀಸಲಿಡಲು ನಿರ್ಧರಿಸಲಾಯಿತು. ಇದು ಕೇವಲ ಮಾತಾಗಿ ಉಳಿಯದೆ ಕಾನೂನು ತರಲಾಯಿತು.

ಸಿದ್ದರಾಮಯ್ಯ ಅವರ ಸರ್ಕಾರದ ಕೊನೆಯ ಬಜೆಟ್‌ನಲ್ಲಿ 30 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಎಸ್‌ಸಿಎಸ್‌ಪಿ- ಟಿಎಸ್‌ಪಿ ಮೂಲಕ ನೀಡಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಬಿಜೆಪಿ ಸರ್ಕಾರ ಕಾನೂನು ಗಾಳಿಗೆ ತೂರಿದೆ. ಕಳೆದ ಬಜೆಟ್ ಮೊತ್ತ 2.63 ಲಕ್ಷ ಕೋಟಿ ಆಗಿದ್ದು, 24% ಎಂದರೆ 42 ಸಾವಿರ ಕೋಟಿ ಅನುದಾನವನ್ನು ಬಿಜೆಪಿ ಸರ್ಕಾರ ನೀಡಬೇಕಿತ್ತು. ಆದರೆ ಕೇವಲ 29 ಸಾವಿರ ಕೋಟಿ ಮಾತ್ರ ನೀಡಿದೆ. ನೀಡಿರುವ ಕಡಿಮೆ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಂಡಿಲ್ಲ ಎಂದು ದೂರಿದರು.

ಈಗ ಬಿಜೆಪಿ ಸರ್ಕಾರ, ಪರಿಶಿಷ್ಟ ಜಾತಿಯವರಿಗೆ 15% ರಿಂದ 17% ಹಾಗೂ ಪರಿಶಿಷ್ಟ ಪಂಗಡದವರಿಗೆ 3%ರಿಂದ 7% ಮೀಸಲಾತಿ ಹೆಚ್ಚಳ ನಾವು ಮಾಡಿದ್ದೇವೆ ಎಂದು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಮೂಲತಃ ಇದಕ್ಕೆ ಅಡಿಗಲ್ಲು ಹಾಕಿದ್ದು ಕಾಂಗ್ರೆಸ್ ಪಕ್ಷ. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಎಸ್ ಟಿ ಸಮುದಾಯದ ಸ್ವಾಮೀಜಿ ಹಾಗೂ ಶಾಸಕರು ಹೋರಾಟ ಆರಂಭಿಸಿದಾಗ, ನಮ್ಮ ಸರ್ಕಾರ ಭರವಸೆ ನೀಡಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತು. ಈ ಸಮಿತಿ ವರದಿ ಅಷ್ಠಾನ ಮಾಡುವ ಸಮಯಕ್ಕೆ ಸರ್ಕಾರ ಬಿದ್ದು ಹೋಯಿತು. ಅಂದು ನಮ್ಮ ಸರ್ಕಾರ ಮುಂದುವರಿದಿದ್ದರೆ ನಾವೇ ಇದನ್ನು ಜಾರಿ ಮಾಡುತ್ತಿದ್ದೆವು ಎಂದರು.

ಈಗ ನಮ್ಮ ಒತ್ತಾಯ ಈ ಮೀಸಲಾತಿಯನ್ನು ಕಾನೂನೂ ಚೌಕಟ್ಟಿನಲ್ಲಿ ತರಬೇಕು. ಸಂವಿಧಾನದ 9ನೇ ಷೆಡ್ಯೂಲ್‌ನಲ್ಲಿ ಸೇರಿಸಬೇಕು ಎಂಬುದು. ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡದಿದ್ದರೆ, ಇದು ಅನುಷ್ಠಾನ ಆಗುವುದಿಲ್ಲ. ಕೇವಲ ಹೇಳಿಕೆಗೆ ಇದು ಸೀಮಿತವಾಗುತ್ತದೆ.

ಇನ್ನು ವಸತಿ ನಿರ್ಮಾಣ, ವಿದ್ಯಾರ್ಥಿ ವೇತನ ವಿಚಾರ ಚರ್ಚೆ ಆಗಬೇಕಿದೆ. ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಇದರಿಂದ ಹಾಸ್ಟೆಲ್‌ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮೀಸಲಾತಿ ಹೆಚ್ಚಳದಲ್ಲಿ ಪ್ರಚಾರ ಪಡೆಯುತ್ತಿರುವ ಸರ್ಕಾರ, ಈ ಸಮಸ್ಯೆಗಳನ್ನು ಯಾಕೆ ಬಗೆಹರಿಸುತ್ತಿಲ್ಲ? ಕೆಐಡಿಬಿಯಲ್ಲಿ ಮೀಸಲಾತಿ, ಗುತ್ತಿಗೆಯಲ್ಲಿ ಮೀಸಲಾತಿ ನೀಡಬೇಕು ಎಂದು ನಾವು ಕಾನೂನು ಮಾಡಿದ್ದೆವು. ಈಗ ಅದನ್ನು ಪಾಲಿಸುತ್ತಿಲ್ಲ. ಈ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ನಮ್ಮ ಎಲ್ಲ ಸಮುದಾಯ ಐಕ್ಯತೆಯಿಂದ ಒಂದು ವೇದಿಕೆಗೆ ಬಂದು ಸಮಸ್ಯೆ ಬಗೆಹರಿಸಬೇಕು. ಕಾಂಗ್ರೆಸ್ ಪಕ್ಷ ನಿಮ್ಮ ಜತೆ ಇದ್ದೇವೆ ಎಂದು ಭರವಸೆ ನೀಡಬೇಕು. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ದಲಿತರ ಮನೆಯಲ್ಲಿ ಮಲಗುವ ನಾಟಕ ಮಾಡುತ್ತಿದ್ದಾರೆ. ಈ ನಾಟಕ ನಂಬಬಾರದು ಎಂದು ನಾವು ಕರೆ ನೀಡಬೇಕಿದೆ ಎಂದು ತಿಳಿಸಿದರು.

IPL_Entry_Point