Contractor Suicide Case: ಈಶ್ವರಪ್ಪಗೆ ಕ್ಲೀನ್ಚಿಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಸಂತೋಷ್ ಕುಟುಂಬಸ್ಥರು
ಗುತ್ತಿಗೆ ಕಾಮಗಾರಿಯಲ್ಲಿ ಶೇ.40 ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು ಮಾಜಿ ಸಚಿವ ಕೆ. ಈಶ್ವರಪ್ಪ ಅವರಿಗೆ ಕ್ಲೀನ್ಚಿಟ್ ನೀಡಿರುವುದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಗುತ್ತಿಗೆ ಕಾಮಗಾರಿಯಲ್ಲಿ ಶೇ.40 ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು ಮಾಜಿ ಸಚಿವ ಕೆ. ಈಶ್ವರಪ್ಪ ಅವರಿಗೆ ಕ್ಲೀನ್ಚಿಟ್ ನೀಡಿರುವುದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈಶ್ವರಪ್ಪ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೀಡಿರುವ ಕ್ಲೀನ್ಚಿಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಅವರ ಸೋದರ ಸಂಬಂಧಿ ಪ್ರಶಾತ್ ಪಾಟೀಲ್ ಅವರು ಮಂಗಳವಾರ ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಜಕೀಯ ಪ್ರಭಾವಕ್ಕೆ ಒಳಗಾಗಿ ಎಸ್ಐಟಿ ಅಧಿಕಾರಿಗಳು ಬಿ-ರಿಪೋರ್ಟ್ (ಸಾಕ್ಷ್ಯದ ಕೊರತೆಯಿಂದ ಮುಚ್ಚುವ ವರದಿ) ಸಲ್ಲಿಸಿದ್ದಾರೆ ಎಂದು ಪ್ರಶಾತ್ ಪಾಟೀಲ್ ಆರೋಪಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಬೇರೆ ಏಜೆನ್ಸಿಗೆ ವಹಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಶಾಂತ್ ಪಾಟೀಲ್, ಸಂತೋಷ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುವೆ ಎಂದಿದ್ದಾರೆ.
ಕಳೆದ ಏಪ್ರಿಲ್ 11 ರಂದು ಉಡುಪಿಯ ಲಾಡ್ಜ್ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಈಶ್ವರಪ್ಪರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದಾಗಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ಅವರು ಸಂಪುಟಕ್ಕೆ ರಾಜೀನಾಮೆ ನೀಡಬೇಕಾಯಿತು.
ಕೆ.ಎಸ್.ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ್ ಆರೋಪಿಸಿದ್ದರು.
ಈ ಸಂಬಂಧ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ತನಿಖೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದರು.
ಸಿಸಿಕ್ಯಾಮರಾ ವಿಡಿಯೋ, ಆಡಿಯೋ, ಮೊಬೈಲ್ ಸಂದೇಶ ಪರಿಗಣಿಸಲಾಗಿದೆ. ಬ್ಯಾಂಕ್ ದಾಖಲೆ, ಗುತ್ತಿಗೆಯ ವಿವರ, ಕುಟುಂಬಸ್ಥರು, ಸ್ನೇಹಿತರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೊಲೆ ಅಥವಾ ಕೊಲೆ ಪ್ರಚೋದನೆ ಎಂಬುದಕ್ಕೆ ಸಾಕ್ಷ್ಯವಿಲ್ಲ ಎಂಬುದಾಗಿ ತಿಳಿದುಬಂದಿದೆ ಎಂದು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಪ್ರಕರಣದ ತನಿಖಾಧಿಕಾರಿ ಅಂತಿಮ ವರದಿ ಸಲ್ಲಿಸಿದ್ದರು. ಕೆ.ಎಸ್. ಈಶ್ವರಪ್ಪ ಅವರಿಂದಾಗಲಿ ಅಥವಾ ಈಶ್ವರಪ್ಪ ಕಡೆಯವರಿಂದ ಬೆದರಿಕೆ ಬಂದಿದ್ದಕ್ಕೆ ಯಾವುದೇ ದಾಖಲೆಗಳು ಲಭ್ಯವಾಗಿಲ್ಲವೆಂದು ಅಂತಿಮ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ವಿಭಾಗ