Rain Update: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮೇ 11ರವರೆಗೆ ಭಾರಿ ಮಳೆ ಸಾಧ್ಯತೆ; ಮತದಾನಕ್ಕೆ ಮಳೆ ಅಡ್ಡಿ ಸಂಭವ
Heavy Rain in Bengaluru: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ. ಅಲ್ಲದೆ ಇದರಿಂದ ಮೇ 11ವರೆಗೆ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ನಾಳೆಯಿಂದ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೇ 11ರವರೆಗೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಭಾರಿ ಬಿರುಗಾಳಿ ಕಾಣಿಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಮೇ 5 ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಗಾಳಿಯ ಪ್ರಮಾಣ ಜೋರಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ
ಮುಂದಿನ ಐದು ದಿನಗಳ ಕಾಲ ಅಂದರೆ ಮೇ 11ನೇ ತಾರೀಕಿನವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗಲಿನ ವೇಳೆ ಮಳೆಯ ಪ್ರಮಾಣ ಕಡಿಮೆ ಇದ್ದೂ, ರಾತ್ರಿಯಿಡೀ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗಲಿದೆ.
ಮತದಾನಕ್ಕೆ ಮಳೆ ಅಡ್ಡಿ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಎಲ್ಲಾ ಸಾಧ್ಯತೆಗಳೂ ಇದ್ದು, ನಾಳೆಯಿಂದ ದೇಶದಲ್ಲಿ ಹವಾಮಾನ ವೈಪರೀತ್ಯ ಕಾಣಿಸುವ ಸಾಧ್ಯತೆ ಇದೆ. ಮೇ 11ರವರೆಗೆ ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ದಿನ ಮೇ 10ಕ್ಕಿದೆ. ಈ ದಿನ ಕೂಡ ಮಳೆಯಾಗುವ ಸಾಧ್ಯತೆ ಇದ್ದು, ಮತದಾನಕ್ಕೆ ಮಳೆ ಅಡ್ಡಿಯಾಗಬಹುದು ಎನ್ನಲಾಗುತ್ತಿದೆ.
ಹಲವು ರಾಜ್ಯಗಳಲ್ಲಿ ಮಳೆ
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಹಿಮಾಲಯ, ಸಿಕ್ಕಿಂ, ಗೋವಾ, ಅಸ್ಸಾಂ, ಒಡಿಶಾ, ತೆಲಂಗಾಣ, ತಮಿಳುನಾಡು, ಕೇರಳ, ಮಣಿಪುರ, ನಾಗಾಲ್ಯಾಂಡ್ ಸೇರಿದಂತೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರಿ ಮಳೆಗೆ ಕಾರಣವಾಗಲಿದೆ.