CM Basavaraj Bommai: ಕರಗಾಂವ್ ಏತ ನೀರಾವರಿ ಯೋಜನೆಗೆ ಮಂಜೂರಾತಿ, ಖಾನಾಪುರದ 100 ಗ್ರಾಮಗಳ ಪ್ರತಿ ಮನೆಗೆ ಕುಡಿಯುವ ನೀರು ಯೋಜನೆ: ಬೊಮ್ಮಾಯಿ
ಮರಾಠ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡಿ, ಗೌಳಿ ಜನಾಂಗಕ್ಕೆ ಶೆಡ್ಗಳು, ದನಕರುಗಳು ಸೇರಿದಂತೆ ಹೈನುಗಾರಿಕೆಗೆ ಬೇಕಾದ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರದಿಂದ ನಿರ್ಧಾರ
ರಾಯಬಾಗ/ ಖಾನಾಪುರ: ಬಹುದಿನದ ಬೇಡಿಕೆಯಾದ ಕರಗಾಂವ್ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬುಧವಾರ ಬೆಳಗಾವಿ ಜಿಲ್ಲೆಯ ರಾಯಬಾಗನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಭಾಗದ ಇನ್ನೆರಡು ಏತ ನೀರಾವರಿ ಯೋಜನೆಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು. ಬೆಳಗಾವಿಯಲ್ಲಿ ನೀರಾವರಿ ಯೋಜನೆ , ಕೈಗಾರಿಕೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಈ ಎರಡು ನಿರಾವರಿ ಯೊಜನೆಗಳನ್ನು ಜಾರಿಗೆ ತರಲಾಗುವುದು ಎಂದರು.
ಮುಂಬೈ ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆಯಿಂದ ಚಿಕ್ಕೋಡಿ ಭಾಗದಲ್ಲಿ ಔದ್ಯೋಗಿಕ ಕ್ರಾಂತಿ ಆಗಲಿದೆ. ಮಹಾರಾಷ್ಟ್ರ, ಗೋವಾ ಸೇರಿಸುವ ರಸ್ತೆಗಳ ಅಭಿವೃದ್ದಿಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೊಳೆ, ಪಿ. ರಾಜೀವ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದರಾದ ರಮೇಶ್ ಕತ್ತಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರರು ಹಾಜರಿದ್ದರು.
ಖಾನಾಪುರದ 100 ಗ್ರಾಮಗಳ ಪ್ರತಿ ಮನೆಗೆ ಕುಡಿಯುವ ನೀರು ಯೋಜನೆ
ಜಲಜೀವನ್ ಮಿಷನ್ನ ಹರ್ ಘರ್ ಜಲ್ ಯೋಜನೆಯಡಿ ಖಾನಾಪುರದ 100 ಗ್ರಾಮಗಳ ಪ್ರತಿಯೊಂದು ಮನೆಗೆ ಕುಡಿಯುವ ನೀರಿನ ಪೂರೈಕೆಗಾಗಿ 434 ಕೋಟಿ ರೂ. ಮೊತ್ತದ ಯೋಜನೆ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ
ಖಾನಾಪುರ ತಾಲ್ಲೂಕಿನಲ್ಲಿ ಹೈನುಗಾರಿಕೆ ಮಾಡುವ ಗೌಳಿ ಜನಾಂಗ ಸಾಕಷ್ಟಿದ್ದಾರೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡಿ, ಗೌಳಿ ಜನಾಂಗಕ್ಕೆ ಶೆಡ್ ಗಳು , ದನಕರುಗಳು ಸೇರಿದಂತೆ , ಹೈನುಗಾರಿಕೆಗೆ ಬೇಕಾದ ವ್ಯವಸ್ಥೆಗಳನ್ನು ಪೂರೈಸಲು ತಿಳಿಸಲಾಗಿದ್ದು, ಈ ವಿಶೇಷ ಕಾರ್ಯಕ್ರಮಕ್ಕೆ ಆದೇಶ ಮಾಡುವ ಮೂಲಕ ಗೌಳಿ ಜನಾಂಗದವರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.
ಖಾನಾಪುರದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ನಿರ್ಮಾಣ
ಖಾನಾಪುರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಿಂದುಳಿದ ವರ್ಗದವರಿಗೆ ಹಾಗೂ ಎಸ್ ಸಿ ಎಸ್ ಟಿ ವರ್ಗಕ್ಕೆ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುವುದು. ಈ ಭಾಗದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಅನುದಾನವನ್ನು ಶೀಘ್ರದಲ್ಲಿ ಒದಗಿಸಲಾಗುವುದು. ಮಹದಾಯಿ ನೀರಾವರಿ ಯೋಜನೆಯಡಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಹಾಗೂ ನೀರಾವರಿ ವ್ಯವಸ್ಥೆಗೆ ಖಾನಾಪುರವನ್ನು ಜೋಡಿಸಲಾಗುವುದು. ಜಾಂಬೂಟಿ ಜೇನಿನ ಅಭಿವೃದ್ಧಿಗೆ 5 ಕೋಟಿ ರೂ.ನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಖಾನಾಪುರದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಮಾಡುವ ಮೂಲಕ ಯುವಕರಿಗೆ ಉದ್ಯೋಗ ಒದಗಿಸಲಾಗುವುದು ಎಂದರು.