Siddaramaiah: ಬಿಜೆಪಿ, ಜೆಡಿಎಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣ; ಹಾಲಿ ಶಾಸಕರು, ಎಂಎಲ್ ಸಿಗಳು ಕಾಂಗ್ರೆಸ್ ಸೇರುತ್ತಾರೆ: ಸಿದ್ದರಾಮಯ್ಯ
ಇತ್ತೀಚಿನ ಸಮೀಕ್ಷೆಗಳನ್ನು ನೀವು ನೋಡಿದ್ದೀರಿ. ಪ್ರಸ್ತುತ ರಾಜ್ಯದ ವಾತಾವರಣ ನೋಡಿದರೂ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳಲ್ಲಿ ತಂತ್ರ, ಪ್ರತಿತಂತ್ರದ ಜೊತೆ ಜೊತೆಗೆ ಆತೃಪ್ತರನ್ನು ತಮ್ಮ ಪಕ್ಷಗಳಿಗೆ ಸೆಳೆಯುವ ಮೂಲಕ ರಣತಂತ್ರಗಳನ್ನು ರೂಪಿಸುತ್ತಿವೆ.
ಜೆಡಿಎಸ್ ಮುಖಂಡ, ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್ ವಾಸು, ಬಿಜೆಪಿ ಮುಖಂಡರಾದ ಮೂಡಿಗೆರೆಯ ಹಾಲಪ್ಪ, ಸತ್ಯಾನಂದ ಮತ್ತಿತರರು ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ (ಮಾರ್ಚ್ 30, ಗುರುವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ವಿಧಾಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಖಂಡರನ್ನು ಪಕ್ಷಕ್ಜೆ ಸ್ವಾಗತಿಸಿ ಶುಭ ಹಾರೈಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಸರಿ ನಾಯಕ ಹಾಗೂ ದಳಪತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣವಿರುವ ಕಾರಣ ಪಕ್ಷ ಬಿಟ್ಟು ಬಂದಿದ್ದಾರೆ. ಅನೇಕ ಹಾಲಿ ಶಾಸಕರು, ಪರಿಷತ್ ಸದಸ್ಯರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯದ ವ್ಯವಸ್ಥೆ ಭ್ರಷ್ಟಗೊಳಿಸಿದೆ
ಕಾಂಗ್ರೆಸ್ ಪಕ್ಷ ಮಾತ್ರ ರಾಜ್ಯ ಉಳಿಸಲು ಸಾಧ್ಯ ಎಂದು ಜನ ಭಾವಿಸಿದ್ದಾರೆ. ಬಿಜೆಪಿ ರಾಜ್ಯದ ವ್ಯವಸ್ಥೆ ಭ್ರಷ್ಟಗೊಳಿಸಿದ್ದು, ಅದನ್ನು ಸರಿಪಡಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಜನ ತೀರ್ಮಾನಿಸಿದ್ದಾರೆ. ಜೆಡಿಎಸ್ ಎಂದಿಗೂ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ನಾಶವಾಗಲಿದೆ ಎಂದು ಜನರಿಗೆ ಅರ್ಥವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಮಾತ್ರ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಸಮೀಕ್ಷೆಗಳನ್ನು ನೀವು ನೋಡಿದ್ದೀರಿ. ಪ್ರಸ್ತುತ ರಾಜ್ಯದ ವಾತಾವರಣ ನೋಡಿದರೂ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ. ರಾಜ್ಯದ ಜನ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮೆಲಕು ಹಾಕಿ ಎಲ್ಲರ ಸರ್ಕಾರವನ್ನು ಹೋಲಿಕೆ ಮಾಡುತ್ತಿದ್ದಾರೆ. ಹೀಗಾಗಿ ಜನರಿಗೆ ಸ್ಪಷ್ಟವಾಗಿ ಅರಿವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಮಾತ್ರ ರಾಜ್ಯ ಉಳಿಸಲು ಸಾಧ್ಯ ಎಂದಿದ್ದಾರೆ.
100ಕ್ಕೆ 100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ
ಭ್ರಷ್ಟಾಚಾರ ತೊಲಗಿಸಲು, ಜನಪರ ಆಡಳಿತ ನೀಡಲು, ನುಡಿದಂತೆ ನಡೆಯಲು ಕಾಂಗ್ರೆಸ್ ಪಕ್ಷದಿಂದ ಸಾಧ್ಯ ಎಂದು ಜನರಿಗೆ ಅರಿವಾಗಿದ್ದು, ಜನ ಬದಲಾವಣೆ ಬಯಸಿದ್ದಾರೆ. ನನ್ನ ಪ್ರಕಾರ 100ಕ್ಕೆ 100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂಬ ನಂಬಿಕೆ ಇದೆ. ಕಾಂಗ್ರೆಸ್ ಪಕ್ಷ ಸೇರುತ್ತಿರುವ ಎಲ್ಲರಿಗೂ ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ ಎಂದು ಹೇಳಿದ್ದಾರೆ.
ವಾಸು ಅವರು ಸ್ವಾಭಿಮಾನಿ ರಾಜಕಾರಣಿ. ಅವರು ಯಾವುದೇ ಪಕ್ಷದಲ್ಲಿದ್ದರು ಬಹಳ ನಿಷ್ಠೆಯಿಂದ ಆ ಪಕ್ಷ ಕಟ್ಟುವ ಕೆಲಸ ಮಾಡುತ್ತಾರೆ. ನಾನು ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದಾಗ ಅವರು ನಮ್ಮ ಪಕ್ಷ ಸೇರಿದ್ದರು. ನಂತರ ಜೆಡಿಎಸ್ ನಲ್ಲಿ ನಿಷ್ಠಾವಂತರಾಗಿ ಮೂರು ಬಾರಿ ಶಾಸಕರಾಗಿ ಒಂದು ಬಾರಿ ಸ್ವತಂತ್ರ್ಯವಾಗಿ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಬಡವರ ಪರವಾಗಿ ಕೆಲಸ ಮಾಡುವ ಸರಳ ವ್ಯಕ್ತಿ. ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದೆ.
ಅಭಿಪ್ರಾಯ ವ್ಯಕ್ತಪಡಿಸಿದರೆ ಜೆಡಿಎಸ್ ಉಳಿಯಲು ಬಿಡಲ್ಲ
ಜೆಡಿಎಸ್ ಪಕ್ಷಕ್ಕೆ ದ್ರೋಹ ಮಾಡುವ ಯಾವುದೇ ಕೆಲಸ ಅವರು ಮಾಡಿಲ್ಲ. ಅವರನ್ನು ಬಲವಂತವಾಗಿ ಪಕ್ಷದಿಂದ ಆಚೆ ತಬ್ಬಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ದೇವೇಗೌಡರು, ಕುಮಾರಸ್ವಾಮಿ ಅವರು ಹೇಳಿದಂತೆ ಕೇಳಬೇಕು. ಅಲ್ಲಿ ಸ್ವತಂತ್ರಯವಾಗಿ ಯಾರಾದರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೆ, ಅವರು ಆ ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ಅವರ ಕುಟುಂಬದಲ್ಲಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಅದರ ವಿರುದ್ಧ ಮಾತನಾಡಿದರೆ ಅವರನ್ನು ಉಳಿಯಲು ಬಿಡುವುದಿಲ್ಲ. ನನಗೂ ಅದೇ ರೀತಿ ಆಗಿತ್ತು, ವಾಸುಗೂ ಅದೇ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.