ಹಾವೇರಿ ಅಪಘಾತ; ಬ್ಯಾಡಗಿ ಸಮೀಪ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, 13 ಸಾವು
Haveri Accident (ಹಾವೇರಿ ಅಪಘಾತ): ಬ್ಯಾಡಗಿ ಸಮೀಪ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 13 ಸಾವು ಸಂಭವಿಸಿದೆ. ಕೆಲವರು ಗಾಯಗೊಂಡಿದ್ದಾರೆ. ಮೃತರು ಶಿವಮೊಗ್ಗ ಮೂಲದವರು ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.
ಹಾವೇರಿ: ಬ್ಯಾಡಗಿ (Byadagi) ಸಮೀಪ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ (ಜೂನ್ 28) ನಸುಕಿನಲ್ಲಿ ಭೀಕರ ರಸ್ತೆ ಅಪಘಾತ (ಹಾವೇರಿ ಅಪಘಾತ - Haveri Accident) ಸಂಭವಿಸಿದ್ದು, 13 ಸಾವು ಸಂಭವಿಸಿದೆ. ಶಿವಮೊಗ್ಗ ಮೂಲದ 17 ಜನ ಟಿಟಿ ವಾಹನದಲ್ಲಿ ನಿನ್ನೆ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಮರಳಿ ಊರಿಗೆ ಹೋಗುವ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. 13 ಜನರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಸಮೀಪ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪರಿಣಾಮ, ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ.
ಮೃತರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಜೂನ್ 28) ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಾವೇರಿ ಅಪಘಾತದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು
ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿದ್ದ 17 ಜನರಿದ್ದ ಟಿಟಿ ವಾಹನವು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ 4 ಗಂಟೆ ಸುಮಾರಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಸೇರಿ 13 ಜನ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವನಿಸಲಾಗಿದೆ. ಶವಮಹಜರು ನಡೆಸಿದ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶಿಕುಮಾರ್ ಮಾಹಿತಿ ನೀಡಿದರು.
ಹೊಸ ಟಿಟಿ ತಗೊಂಡು ಪೂಜೆ ಮಾಡಿಸಲು ಹೋಗಿದ್ದ ಒಂದೇ ಕುಟುಂಬದವರು
ಟಿಟಿಯಲ್ಲಿದ್ದವರು ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು. ನಾಗೇಶ್, ವಿಶಾಲಾಕ್ಷಿ ದಂಪತಿ ತಮ್ಮ ಪುತ್ರ ಆದರ್ಶ ಖರೀದಿಸಿದ ಹೊಸ ಟಿಟಿ ವಾಹನ ಪೂಜೆ ಮಾಡಿಸಲು ಮತ್ತು ದೇವರ ದರ್ಶನಕ್ಕೆ ಹೋಗಿದ್ದರು. ನಾಗೇಶ್ ಕೃಷಿಕರು. ಅವರ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆ. ನಾಗೇಶ್ ಅವರ ಪುತ್ರ ಆದರ್ಶ ಸ್ವಂತ ಟ್ರಾವೆಲ್ಸ್ಗಾಗಿ ಹೊಸ ಟಿಟಿ ಖರೀದಿಸಿದ್ದ. ಈ ಹೊಸ ವಾಹನಕ್ಕೆ ಪೂಜೆ ಮಾಡಿಸುವುದಕ್ಕೆ ಎಂದು ಸೋಮವಾರ (ಜೂನ್ 24) ಮಧ್ಯಾಹ್ನ 12ಕ್ಕೆ ಶಿವಮೊಗ್ಗದಿಂದ ಹೊರಟು ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ಹೋಗಿದ್ದಾರೆ. ಅಲ್ಲಿ ದೇವರ ದರ್ಶನ ಮಾಡಿ, ವಾಹನ ಪೂಜೆ ಮಾಡಿಸಿ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ದೇವರ ದರ್ಶನ ಪಡೆದು, ಪೂಜೆ ಮಾಡಿಸಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿಗೆ ಆಗಮಿಸಿ, ಇಲ್ಲಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
