ಕನ್ನಡ ಸುದ್ದಿ  /  ಕರ್ನಾಟಕ  /  Hoskote Crime: ಪ್ರೀತಿಸಿ ಮದುವೆಯಾದ ಪತ್ನಿಯನ್ನ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿರಾಯ.. ತಾನೂ ಆತ್ಮಹತ್ಯೆಗೆ ಯತ್ನ

Hoskote Crime: ಪ್ರೀತಿಸಿ ಮದುವೆಯಾದ ಪತ್ನಿಯನ್ನ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿರಾಯ.. ತಾನೂ ಆತ್ಮಹತ್ಯೆಗೆ ಯತ್ನ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿರಾಯ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿರಾಯ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

ಪತ್ನಿಯ ಕತ್ತು, ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಕೂಡ ಗಂಭೀರವಾಗಿದೆ. ಮೃತಳನ್ನು ಅರ್ಪಿತಾ ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ರಮೇಶ್​ ಎಂದು ಗುರುತಿಸಲಾಗಿದೆ.

ಏಳು ವರ್ಷಗಳ ಹಿಂದೆ ರಮೇಶ್ ಹಾಗೂ ಅರ್ಪಿತಾ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ 6 ವರ್ಷದ ಗಂಡು ಮಗು ಹಾಗೂ 4 ವರ್ಷದ ಹೆಣ್ಣು ಮಗು ಕೂಡ ಇದೆ. ಹೊಸಕೋಟೆ ಪಟ್ಟಣದಲ್ಲಿ ಈ ಕುಟುಂಬ ವಾಸವಾಗಿತ್ತು. ಆರಂಭದಿಂದ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಕಳೆದೊಂದು ವರ್ಷದಿಂದ ದಂಪತಿ ನಡುವೆ ಮನಸ್ತಾಪ ಉಂಟಾಗಿ ಜಗಳ ವಿಕೋಪಕ್ಕೆ ತಿರುಗಿ ಹೊಸಕೋಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಕೆಲ ದಿನಗಳ ಹಿಂದೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ದೂರವಾಗಲು ನಿರ್ಧರಿಸಿದ್ದರಂತೆ. ಹೀಗಾಗಿ ಬೇರೆ ಬೇರೆಯಾಗಿ ವಾಸವಿದ್ದರು.

ಆದರೆ ಕಳೆದ ಒಂದು ವಾರದಿಂದ ಅರ್ಪಿತಾ ಮೇಲೆ ಅನುಮಾನಪಟ್ಟ ರಮೇಶ್, ಇನ್ನುಮುಂದೆ ಇಬ್ಬರು ಒಟ್ಟಿಗೆ ಜೀವನ ನಡೆಸೋಣ ಎಂದು ಹೇಳಿದ್ದನಂತೆ. ಭಾನುವಾರ ಬೆಳಗ್ಗೆ ಪತ್ನಿಯನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶಕ್ಕೆ ಕರೆದುಕೊಂಡು ಬಂದು, ರಸ್ತೆ ಮೇಲೆಯೇ ಸುಮಾರು 15 ಬಾರಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಕಲ್ಲಿನಿಂದಲೂ ಹಲ್ಲೆ ನಡೆಸಿದ್ದಾನೆ. ನಂತರ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ದೃಶ್ಯವನ್ನು ಕಂಡು ಬೆಚ್ಚಿಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಬಂದ ಸೂಲಿಬೆಲೆ ಪೊಲೀಸರು ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅರ್ಪಿತಾ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ. ಇನ್ನು ರಮೇಶ್​ ಸ್ಥಿತಿ ಚಿಂತಾಜನವಾಗಿದೆ. ರಮೇಶ್​​ನ ಹುಚ್ಚುತನದಿಂದಾಗಿ ಪಾಪ ಏನೂ ಅರಿಯದ ಮಕ್ಕಳು ಅನಾಥರಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಡಿರುವ ಸೂಲಿಬೆಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ರಮೇಶ್​ ಸಾಮಾನ್ಯದವನಲ್ಲ. ಮೊದ ಮೊದಲು ಸಣ್ಣ ಪುಟ್ಟ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ರಮೇಶ್​ ಆನೇಕಲ್ ತಾಲ್ಲೂಕಿನಲ್ಲಿ ಎಟಿಎಂ ದೋಚಿ ಸುದ್ದಿಯಾಗಿದ್ದ. ಅಲ್ಲದೇ ಹೊಸಕೋಟೆ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ, ರಾಬರಿ ಪ್ರಕರಣಗಳಲ್ಲೂ ಭಾಗಿಯಾಗಿದ್ದನು. ಹೀಗಾಗಿ ಈತನ ಹೆಸರಲ್ಲಿ ಪೊಲೀಸರು ರೌಡಿ ಶೀಟ್ ತೆರೆದಿದ್ದರು.

IPL_Entry_Point