Kannada News  /  Karnataka  /  I Have Not Insulted Brahmins. I Told About Peshwa Dna: Hd Kumaraswamy
HD Kumaraswamy: ನಾನು ಬ್ರಾಹ್ಮಣರನ್ನು ನಿಂದಿಸಿಲ್ಲ. ಪೇಶ್ವೆ ಡಿಎನ್‌ಎ ಬಗ್ಗೆ ಹೇಳಿದ್ದೆ: ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ
HD Kumaraswamy: ನಾನು ಬ್ರಾಹ್ಮಣರನ್ನು ನಿಂದಿಸಿಲ್ಲ. ಪೇಶ್ವೆ ಡಿಎನ್‌ಎ ಬಗ್ಗೆ ಹೇಳಿದ್ದೆ: ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

HD Kumaraswamy: ನಾನು ಬ್ರಾಹ್ಮಣರನ್ನು ನಿಂದಿಸಿಲ್ಲ. ಪೇಶ್ವೆ ಡಿಎನ್‌ಎ ಬಗ್ಗೆ ಹೇಳಿದ್ದೆ: ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

06 February 2023, 17:37 ISTHT Kannada Desk
06 February 2023, 17:37 IST

ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಬೆಂಗಳೂರು: ಮರಾಠಿ ಪೇಶ್ವೆಗಳ ಡಿ.ಎನ್ ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್ ಎಸ್ ಎಸ್ ಹೊರಟಿವೆ ಎಂದು ಹೇಳಿದ್ದೇನೆಯೇ ಹೊರತು, ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬ್ರಾಹ್ಮಣರ ಕುರಿತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಸಚಿವ ಆರ್‌. ಅಶೋಕ್‌, ಬ್ರಾಹ್ಮಣ ಮಹಾಸಭಾದ ಪ್ರಮುಖರು ಸೇರಿದಂತೆ ಹಲವರು ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು. ಪೇಜಾವರ ಶ್ರೀಗಳೂ ಪ್ರತಿಕ್ರಿಯೆ ನೀಡಿದ್ದರು. ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು? ಅವರು ಭಾರತದ ಪ್ರಜೆಗಳಲ್ಲವೇ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದರು.

ಹೆಚ್‌ಡಿಕೆ ಪ್ರತಿಕ್ರಿಯೆಯೇನು?

ಯಶವಂತಪುರ ವಿಧಾನಸಭೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಪೇಶ್ವೆಗಳ ಡಿಎನ್ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆ ಅಂತ ಹೇಳಿದ್ದೇನೆ. ಇದಕ್ಕೆ ಯಾಕೆ ಗಾಬರಿ ಯಾಕೆ? ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಾನು ಸಮಾಜದ ಬಗ್ಗೆ ಅಗೌರವ ತೋರಿದ್ದೇನೆ ಕೆಲವರು ನನ್ನ ಹೇಳಿಕೆಯನ್ನು ತಿರುಚಿ ಮಾತನಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಬಗ್ಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಕರ್ನಾಟಕದಲ್ಲಿ‌ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಆ ಬ್ರಾಹ್ಮಣ ಸಮಾಜದ ಬಗ್ಗೆ ನನಗೆ ಗೌರವ ಇದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಮಠದ ಬಗ್ಗೆ ಗೌರವ ಇಟ್ಟುಕೊಂಡು ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪ್ರಲ್ಹಾದ್ ಜೋಶಿ ಪಾರ್ಥೇನಿಯಂ: ಒಳ್ಳೆಯ ಬಿತ್ತನೆಯ ಬೆಲೆಯಲ್ಲಿ ಪಾರ್ಥೇನಿಯಂ ಬೆಳೆದಂತೆ ಆಗಿದೆ ಬಿಜೆಪಿಯ ಪರಿಸ್ಥಿತಿ. ಪ್ರಲ್ಹಾದ್ ಜೋಶಿ ಅಂತಹ ಪಾರ್ಥೇನಿಯಂ. ಹಿಂದೆ ನಿತೀಶ್ ಕುಮಾರ್ ಅವರ ಡಿಎನ್ ಎ ಬಗ್ಗೆ ಪ್ರಧಾನಿ ಮೋದಿ ಸೇರಿ ಬಿಜೆಪಿಯವರು ಟೀಕೆ ಮಾಡಿಲ್ಲವೇ? ನಾನು ಮಾತನಾಡಿದರೆ ಮಾತ್ರ ಇವರು ಅದಕ್ಕೆ ವಿವಾದದ ಸ್ವರೂಪ ಕೊಡುತ್ತಿದ್ದಾರೆ. ಇವರ ಉದ್ದೇಶ ಎಂಥದ್ದು ಎಂಬುದನ್ನು ಇದರಿಂದ ಅರಿಯಬಹುದು ಎಂದು ಬಿಜೆಪಿ ಮತ್ತು ಪ್ರಲ್ಹಾದ್ ಜೋಶಿ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಬ್ರಾಹ್ಮಣ ಮಹಾಸಭಾಕ್ಕೆ ನಾನು ಹೇಳುವುದಿಷ್ಟೆ, ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿದ್ದೇನೆ. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದೇನೆ. ಸತ್ಯ ಹೀಗಿರುವಾಗ ಕೆಲವರು ನನ್ನ ಹೇಳಿಕೆ ತಿರುಚಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದರು.

ಇನ್ನು ಸ್ಪಷ್ಟವಾಗಿ ಹೇಳುವುದಾದರೆ, ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಅಗಲಿ. ಬೇಡ ಎಂದವರು ಯಾರು? ನನ್ನ ಸಹಮತವೂ ಇದೆ. ನಾನು‌ ಸಹ ಬೆಂಬಲ ಕೊಡುವೆ. ಆದರೆ ಕರ್ನಾಟಕದ ಮೇಲೆ ದಾಳಿ ನಡೆಸಿ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಪೇಶ್ವೆಗಳ ಡಿಎನ್ಎ ಹೊಂದಿರುವ ವ್ಯಕ್ತಿ ಸಿಎಂ ಆಗಬೇಕಾ ಎನ್ನುವ ಪ್ರಶ್ನೆ ನನ್ನದು ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಆಚಾರ ವಿಚಾರಕ್ಕೆ ಕೊಳ್ಳಿ ಇಟ್ಟರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಜನರ ಮನಸ್ಸು ಕೆಡಿಸಿದರು. ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ ಎಂದ ಅವರು; ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು? ಗಾಂಧೀಜಿ ಅವರನ್ನು ಕೊಂದವರು ಯಾರು? ಅವರೆಲ್ಲ ಪೇಶ್ವೆ ವಂಶದವರು ಅಂತ ಹೇಳಿದ್ದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಅಂತ ಹೇಳಿದ್ದೆ ಎಂದರು.

ಪೇಶ್ವೆ ಬ್ರಾಹ್ಮಣರದು ಸರ್ವನಾಶೋ ಭವಂತು: ನಮ್ಮ ಬ್ರಾಹ್ಮಣ ಸರ್ವೇ ಜನ ಸುಖಿನೋ ಭವಂತು ಎಂದು ಹರಸುತ್ತಾರೆ. ಆದರೆ ಪೇಶ್ವೆ ಬ್ರಾಹ್ಮಣರು ಸರ್ವನಾಶೋ ಭವಂತು ಎಂದು ಶಪಿಸುತ್ತಾರೆ. ನಮ್ಮದು ಕುವೆಂಪು ಹೇಳಿದಂತಹ ಸರ್ವ ಜನಾಂಗದ ತೋಟ ಎಂದು ಕುಮಾರಸ್ವಾಮಿ ಅವರು ಹೇಳಿದರು.