ಕಾಶ್ಮೀರದಲ್ಲಿ ಹತರಾದ ಕನ್ನಡಿಗರ ಪಾರ್ಥಿವ ಶರೀರ ತರಲು ಕರ್ನಾಟಕ ತಂಡ ಕಳಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ಸಹಾಯವಾಣಿ ಆರಂಭ
ಕನ್ನಡ ಸುದ್ದಿ  /  ಕರ್ನಾಟಕ  /  ಕಾಶ್ಮೀರದಲ್ಲಿ ಹತರಾದ ಕನ್ನಡಿಗರ ಪಾರ್ಥಿವ ಶರೀರ ತರಲು ಕರ್ನಾಟಕ ತಂಡ ಕಳಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ಸಹಾಯವಾಣಿ ಆರಂಭ

ಕಾಶ್ಮೀರದಲ್ಲಿ ಹತರಾದ ಕನ್ನಡಿಗರ ಪಾರ್ಥಿವ ಶರೀರ ತರಲು ಕರ್ನಾಟಕ ತಂಡ ಕಳಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ಸಹಾಯವಾಣಿ ಆರಂಭ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯಿಂದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಚಿವ ಸಂತೋಷ್‌ ಲಾಡ್‌ ನೇತೃತ್ವದಲ್ಲಿ ತಂಡಗಳನ್ನು ಸಿಎಂ ಸಿದ್ದರಾಮಯ್ಯ ಕಳುಹಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಉಗ್ರರ ದಾಳಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಕ್ರಮ ವಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಉಗ್ರರ ದಾಳಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಕ್ರಮ ವಹಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕನ್ನಡಿಗರು ಹತರಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ತಿಳಿದು ಕರ್ನಾಟಕದ ಸಿಎ ಸಿದ್ದರಾಮಯ್ಯ ಸಚಿವರು ಹಾಗೂ ಅಧಿಕಾರಿಗಳ ತಂಡ ತೆರಳುವಂತೆ ಸೂಚಿಸಿದ್ದಾರೆ. ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳ ತಂಡ, ಕರ್ನಾಟಕದ ವಿವಿಧ ಇಲಾಖೆಗಳ ತಂಡಗಳು ತೆರಳಲಿವೆ. ಅಲ್ಲದೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಇದರ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಚಿವ ಸಂತೋಷ್‌ ಲಾಡ್‌ ಕೂಡ ಬುಧವಾರ ಬೆಳಿಗ್ಗೆಯಿಂದಲೇ ಕಾಶ್ಮೀರದಲ್ಲಿ ಕನ್ನಡಿಗರ ರಕ್ಷಣೆಗೆ ಕಾರ್ಯಾಚರಣೆ ನಡೆಸುವರು. ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಅವರು ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ.

ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ. ಕ್ರೀಡೆ ಹಾಗೂ ಯುವಜನ ಸೇವೆ ಇಲಾಖೆಯ ಆಯುಕ್ತರಾದ ಐಪಿಎಸ್‌ ಅಧಿಕಾರಿ ಆರ್.ಚೇತನ್‌ ಅವರ ನೇತೃತ್ವದಲ್ಲಿ ತಂಡವೂ ಕಾಶ್ಮೀರಕ್ಕೆ ತೆರಳಲಿದೆ. ಫಹಲಗಾಂವ್‌ನಂತ ದುರ್ಗಮ ಪ್ರದೇಶದಲ್ಲಿ ಸಿಲುಕಿದ್ದವರನ್ನು ರಕ್ಷಿಸಲಿದೆ ಎಂದು ತಿಳಿಸಿದ್ದಾರೆ.

ಸಹಾಯವಾಣಿ ಸ್ಥಾಪನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಿಲುಕಿರುವವರು ಹಾಗೂ ಅವರ ಕುಟುಂಬದ ಸದಸ್ಯರು ಸಂಪರ್ಕಿಸಲು ಮೈಸೂರು ಜಿಲ್ಲಾಡಳಿತವು ಸಹಾಯವಾಣಿಯನ್ನು ಆರಂಭಿಸಿದೆ. ಮೈಸೂರು ಜಿಲ್ಲೆಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಭಯೋತ್ಪಾದಕರ ದಾಳಿಯಲ್ಲಿ ಸಿಲುಕಿದವರು ಇದ್ದರೆ 0821 2423800, 1077 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದ್ದಾರೆ.

ಕಾಶ್ಮೀರ ಸಹಾಯವಾಣಿ

ಕಾಶ್ಮೀರದಲ್ಲಿ ಶ್ರೀನಗರ ಜಿಲ್ಲಾಧಿಕಾರಿ ಸಹಿತ ಹಲವು ಸಹಾಯವಾಣಿಗಳನ್ನು ಅಲ್ಲಿನ ಸರ್ಕಾರ ಆರಂಭಿಸಿದೆ

01932222337, 7780885759, 9697982527 ಅಥವಾ 6006365245, 01942457543, 01942483651 ಅಥವಾ 7006058623ಗೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.