ಬೆಂಗಳೂರಿನಲ್ಲಿ ಪೊಲೀಸರ ಬೃಹತ್ ಕಾರ್ಯಾಚರಣೆ: 1.50 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ; ಆರೋಪಿಗಳ ಬಂಧನ
ಹೊರ ರಾಜ್ಯಗಳಿಂದ ಮಾದಕ ವಸ್ತು ಖರೀದಿಸಿ ನಗರದಲ್ಲಿ ಐಟಿಬಿಟಿ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ವರದಿ- ಎಚ್.ಮಾರುತಿ)

ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹಲವು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಸುಮಾರು 1.50 ಕೋಟಿ ರೂ. ಮೌಲ್ಯದ ಡ್ರಗ್ಸ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ವಾಹನಗಳನ್ನುವಶಪಡಿಸಿಕೊಂಡಿದ್ದಾರೆ. ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನವನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ರೂ.60 ಲಕ್ಷ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯು ಹೆಚ್ಎಸ್ಆರ್ ಲೇಔಟ್ , 4ನೇ ಸೆಕ್ಟರ್, ಪ್ರೀಡಂ ಇಂಟರ್ ನ್ಯಾಷನಲ್ ಸ್ಕೂಲ್ ಹತ್ತಿರದ ರಸ್ತೆಯಲ್ಲಿ ಓರ್ವ ವ್ಯಕ್ತಿಯು ಗಾಂಜಾವನ್ನು ಐಷರ್ ಗೂಡ್ಸ್ ಕ್ಯಾರಿಯರ್ ವಾಹನದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿರುತ್ತದೆ. ಈ ಮಾಹಿತಿಯನ್ನಾಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಆರೋಪಿಯು ಒಡಿಶಾ ರಾಜ್ಯದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾಂಕರ ಜೋಡಿ ರಸ್ತೆಯಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMAಯನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತನಿಂದ 416 ಗ್ರಾಂ MDMA ಮತ್ತು ರೂ. 15,000 ನಗದು ಮತ್ತು , ಒಂದು ಹೋಂಡಾ ಸಿವಿಕ್ ಕಾರ್ನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 52 ಲಕ್ಷ ರೂ. ಎಂದು ಪೊಲೀಸರು ಹೇಳಿದ್ದಾರೆ.
ಗೋವಿಂದರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ 43 ಕೆ.ಜಿ 80 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 25 ಲಕ್ಷ ರೂ. ಎಂದು ತಿಳಿದು ಬಂದಿದೆ. ಈತನೂ ಒಡಿಶಾ ರಾಜ್ಯದಿಂದ ಕಡಿಮೆ ಬೆಲೆಗೆ ಖರೀದಿಸಿ ಬೆಂಗಳೂರಿನಲ್ಲಿರುವ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳವು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇವರಿಂದ 4.20 ಲಕ್ಷ, ರೂ ಮೌಲ್ಯದ 4 ಕೆ.ಜಿ 185 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ 1 ದ್ವಿ-ಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಎಂ.ಪಾಳ್ಯದ ವೀರಾಂಜನೇಯಸ್ವಾಮಿ ದೇವಸ್ಥಾನದ ಬಳಿ ದ್ವಿ-ಚಕ್ರ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು.
ವಶಕ್ಕೆ ಪಡೆದ ಇಬ್ಬರು ಆರೋಪಿಗಳು ಆಂದ್ರಪ್ರದೇಶದ ಅರಕ್ಕೂವ್ಯಾಲಿಯ ಪರಿಚಯಸ್ಥರಿಂದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ತಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಿಚಯಸ್ಥರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ/ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.