ಕರ್ನಾಟಕ ಪರೀಕ್ಷಾ ಪ್ರಾಧಿಕಾರವೀಗ ಸಂಪೂರ್ಣ ಹೈಟೆಕ್‌: ಕಾಲೇಜು ಪೋರ್ಟಲ್‌, ಮೊಬೈಲ್‌ ಆ್ಯಪ್, ಕೆಇಎ ಚಾಟ್‌ಬಾಟ್‌ಗೆ ಚಾಲನೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಪರೀಕ್ಷಾ ಪ್ರಾಧಿಕಾರವೀಗ ಸಂಪೂರ್ಣ ಹೈಟೆಕ್‌: ಕಾಲೇಜು ಪೋರ್ಟಲ್‌, ಮೊಬೈಲ್‌ ಆ್ಯಪ್, ಕೆಇಎ ಚಾಟ್‌ಬಾಟ್‌ಗೆ ಚಾಲನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವೀಗ ಸಂಪೂರ್ಣ ಹೈಟೆಕ್‌: ಕಾಲೇಜು ಪೋರ್ಟಲ್‌, ಮೊಬೈಲ್‌ ಆ್ಯಪ್, ಕೆಇಎ ಚಾಟ್‌ಬಾಟ್‌ಗೆ ಚಾಲನೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಲವಾರು ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆ ಮೂಲಕ ಇನ್ನಷ್ಟು ಹತ್ತಿರವಾಗುವ ಹಾಗೂ ಗೊಂದಲ ರಹಿತ ಆಡಳಿತಕ್ಕೆ ಒತ್ತು ನೀಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆ್ಯಪ್ ಸಹಿತ ಹಲವು ಸೇವೆಗೆ ಸಚಿವ ಡಾ.ಎಂ.ಸಿ.ಸುಧಾಕರ,  ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಚಾಲನೆ ನೀಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆ್ಯಪ್ ಸಹಿತ ಹಲವು ಸೇವೆಗೆ ಸಚಿವ ಡಾ.ಎಂ.ಸಿ.ಸುಧಾಕರ, ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಚಾಲನೆ ನೀಡಿದರು.

ಬೆಂಗಳೂರು: ವಿವಿಧ ಪರೀಕ್ಷೆಗಳನ್ನು ಆಯೋಜಿಸು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗ ಇನ್ನಷ್ಟು ಹೈಟೆಕ್‌ ಆಗಿದೆ.ವಿದ್ಯಾರ್ಥಿಗಳು ಬೆರಳ ತುದಿಯಲ್ಲೇ ಮಾಹಿತಿ ಪಡೆಯುವ ನಿಟ್ಟಿಯಲ್ಲಿ ಕಾಲೇಜು ಪೋರ್ಟಲ್‌, ಮೊಬೈಲ್‌ ಆ್ಯಪ್, ಕೆಇಎ ಚಾಟ್‌ಬಾಟ್‌ ಆರಂಭಿಸಲಾಗಿದೆ. ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್‌ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಸೋಮವಾರ ಚಾಲನೆ ನೀಡಿದರು.ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮೂರೂ ಉಪಕ್ರಮಗಳನ್ನು ನಾಡಿಗೆ ಸಮರ್ಪಿಸಿದ ನಂತರ ಮಾತನಾಡಿದ ಸಚಿವರು, ʼಪರೀಕ್ಷಾ ಪ್ರಕ್ರಿಯೆಯನ್ನು ಸುಗಮಗೊಳಿಸಲು ಹಾಗೂ ಅಭ್ಯರ್ಥಿಸ್ನೇಹಿ ಆಗಿಸಲು ಕಾಲಕಾಲಕ್ಕೆ ಆಧುನಿಕ ತಂತ್ರಜ್ಞಾನ ಅಳವಡಿಕೆಯಲ್ಲಿ ಪರೀಕ್ಷಾ ಪ್ರಾಧಿಕಾರ ಸದಾ ಮುಂದಿದೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಧಿಕಾರದ ಹೊಸ ಸೇವೆಗಳ ಪರಿಣಾಮವಾಗಿ ನಿಖರವಾದ ಸಮಯದಲ್ಲಿ ಖಚಿತವಾದ ಮಾಹಿತಿ ಲಭ್ಯವಾಗುತ್ತದೆ. ಅನಗತ್ಯ ಗೊಂದಲಕ್ಕೆ ತೆರೆ ಬೀಳುತ್ತದೆ. ಮಧ್ಯವರ್ತಿಗಳ ಹಾವಳಿ ಕೂಡ ತಪ್ಪುತ್ತದೆ ಎನ್ನುವುದು ಸಚಿವರ ವಿವರಣೆ.

ಕಾಲೇಜು ಪೋರ್ಟಲ್ (College Portal)

ಅಭ್ಯರ್ಥಿಗಳು ಆಪ್ಷನ್ ದಾಖಲಿಸುವುದಕ್ಕೂ ಮುನ್ನ ಕಾಲೇಜು ಆಯ್ಕೆ ಪ್ರಮುಖ ಘಟ್ಟ. ಅಂತಹ ಸಂದರ್ಭದಲ್ಲಿ ಅಲ್ಲಿ- ಇಲ್ಲಿ ಕೇಳಿ ಪಡೆಯುವುದರ ಬದಲು ಕಾಲೇಜು ಪೋರ್ಟಲ್‌ನಲ್ಲೇ ಸಂಬಂಧಪಟ್ಟ ಕಾಲೇಜಿನ ಮಾಹಿತಿ ಲಭ್ಯವಾಗುವ ಹಾಗೆ ಮಾಡಲಾಗಿದೆ. ಇದನ್ನು ಕಾಲೇಜಿನವರೇ ಅಪ್‌ ಲೋಡ್ ಮಾಡಲು ಅವಕಾಶ ನೀಡಲಾಗಿದೆ

ಕಾಲೇಜುಗಳಲ್ಲಿನ ಮೂಲಸೌಲಭ್ಯ, ಶೈಕ್ಷಣಿಕ ವಾತಾವರಣ, ಪ್ರಯೋಗಾಲಯ, ಗ್ರಂಥಾಲಯ, ಕೊಠಡಿ, ಹಾಸ್ಟೆಲ್, ಕೋರ್ಸ್‌ವಾರು ಶುಲ್ಕದ ವಿವರ, ಅತಿಥಿ ಉಪನ್ಯಾಸಕರು ಸೇರಿದಂತೆ ಕಾಯಂ ಸಿಬ್ಬಂದಿಯ ಮಾಹಿತಿ ಇತ್ಯಾದಿ ಪೂರ್ಣ ವಿವರಗಳು ಪೋರ್ಟಲ್‌ನಲ್ಲಿ ಲಭ್ಯ ಇರುತ್ತವೆ. ಎಷ್ಟೋ ಮಂದಿ ಕಾಲೇಜಿನ ಮಾಹಿತಿ ಇಲ್ಲದೆ, ಆಪ್ಫನ್‌ ದಾಖಲಿಸಿ, ನಂತರ ಸೀಟು ಸಿಕ್ಕಿದ ಮೇಲೆ, ಅಯ್ಯೊ ಅದು ಸರಿ ಇಲ್ಲ; ಮತ್ತೊಂದು ಕಡೆ ಸೀಟು ಕೊಡಿ ಎನ್ನುವುದು ಮಾಮೂಲು. ಹೀಗಾಗಿ ಈ ರೀತಿಯ ಹೊಸ ಉಪಕ್ರಮ ಸೂಕ್ತ ಕಾಲೇಜುಗಳ ಆಯ್ಕೆಗೆ ನೆರವಾಗಲಿದೆ.

ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ದೂರು ದಾಖಲಿಸುವುದಕ್ಕೂ ಇದೇ ಪೋರ್ಟಲ್‌ನಲ್ಲಿ ಲಿಂಕ್‌ ನೀಡುವ ಉದ್ದೇಶವೂ ಇದೆ. ನೇರವಾಗಿ ಶುಲ್ಕ ನಿಯಂತ್ರಣ ಸಮಿತಿಗೆ ದೂರು ಹೋಗುವ ಹಾಗೆ ಮಾಡಲಾಗುವುದು.

ಕೆಇಎ ಮೊಬೈಲ್ ಆ್ಯಪ್ (KEA Mobile App)

ಇದೇ ಮೊದಲ ಬಾರಿಗೆ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗುವ ಉಪಕ್ರಮದ ಭಾಗವಾಗಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾಮಾನ್ಯವಾಗಿ ಯುವಕರು ಆ್ಯಪ್ ಬಳಕೆ ಸ್ನೇಹಿಯಾಗಿರುತ್ತಾರೆ. ಹೀಗಾಗಿ ಈ ಇದನ್ನು ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದರು.

ವೆಬ್ ಸೈಟ್ ನಲ್ಲಿ ಲಭ್ಯವಾಗುವ ಎಲ್ಲ ಮಾಹಿತಿ ಈ ಆ್ಯಪ್ ನಲ್ಲಿ ಲಭ್ಯ ಇರುತ್ತದೆ. ಆ್ಯಪ್ ಮೂಲಕವೇ ಅರ್ಜಿ ಹಾಕುವುದು, ಆಪ್ಷನ್ ದಾಖಲಿಸುವುದು, ಛಾಯ್ಸ್ ಆಯ್ಕೆ, ಶುಲ್ಕ ಪಾವತಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮಾಡಬಹುದು. ಆ್ಯಪ್ ಡೌನ್‌ಲೋಡ್ ಮಾಡಿಕೊಂಡವರಿಗೆ ಕಾಲಕಾಲಕ್ಕೆ ಅಲರ್ಟ್ ಸಂದೇಶ ಕಳುಹಿಸುವ ವ್ಯವಸ್ಥೆ ಕೂಡ ಇರುತ್ತದೆ. ಗ್ರಾಮೀಣ ಭಾಗದ ಬಹುತೇಕ ಮಕ್ಕಳು ಸಿಇಟಿ ಅರ್ಜಿ ಭರ್ತಿ ಹಾಗೂ ಅನ್ ಲೈನ್ ಸೀಟು ಹಂಚಿಕೆ ಸಂಬಂಧದ ಪ್ರಕ್ರಿಯೆಗೆ ಸೈಬರ್ ಸೆಂಟರ್ ಗಳ ಮೇಲೆ ಹೆಚ್ವು ಅವಲಂಬನೆಯಾಗಿ ಅನೇಕ ತಪ್ಪುಗಳನ್ನು ಮಾಡಿಕೊಂಡು ಪರದಾಡುವ ಪರಿಸ್ಥಿತಿ ಇತ್ತು. ಹೀಗಾಗಿಯೇ ಇದಕ್ಕೊಂದು ಪರಿಹಾರವಾಗಿ ಮೊಬೈಲ್ ಆ್ಯಪ್ ರೂಪಿಸಿದ್ದು, ಬಹುತೇಕ ಎಲ್ಲ ಪ್ರಕ್ರಿಯೆಗಳನ್ನೂ ಅಭ್ಯರ್ಥಿಗಳೇ ಮಾಡಿಕೊಳ್ಳಬಹುದು.

ಕೆಇಎ ಚಾಟ್ ಬಾಟ್ (KEA Chat BOT)

ಬುದ್ಧಿಮತ್ತೆ ತಂತ್ರಜ್ಞಾನದ ನೆರವಿನ ಚಾಟ್ ಬಾಟ್ ವ್ಯವಸ್ಥೆ ಬಳಸಿ ಅಭ್ಯರ್ಥಿಗಳು ತಮ್ಮ ಪ್ರಶ್ನೆ/ಅನುಮಾನಗಳಿಗೆ ನೇರವಾಗಿ ಉತ್ತರ ಪಡೆಯಲು ಸಾಧ್ಯವಾಗುತ್ತದೆ. ಪ್ರಾಯೋಗಿಕವಾಗಿ ಆರಂಭಿಸಿದ ನಂತರ ಇದುವರೆಗೂ 1.35 ಲಕ್ಷ ಅಭ್ಯರ್ಥಿಗಳು ಇದರ ಮೂಲಕ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದಿರುವುದು ಇದು ಎಷ್ಟು ಉಪಯುಕ್ತ ಎನ್ನುವುದನ್ನು ತೋರಿಸುತ್ತದೆ ಎನ್ನುವುಸು ಸಚಿವರ ವಿವರಣೆ.

ಕೆಇಎ ಪ್ರಕಟಿಸುವ ಎಲ್ಲ ಮಾಹಿತಿಯನ್ನು ಚಾಟ್ ಬಾಟ್ ವ್ಯವಸ್ಥೆಗೆ ಅಪ್ ಲೋಡ್ ಮಾಡಲಾಗುತ್ತದೆ. ಅಭ್ಯರ್ಥಿಗಳು ತಾವು ಏನನ್ನು ಕೇಳಬೇಕೋ ಅದನ್ನು ಟೈಪ್ ಮಾಡಿದರೆ, ಅಪ್ ಲೋಡ್ ಮಾಡಲಾಗಿರುವ ಮಾಹಿತಿ ಆಧರಿಸಿ ಚಾಟ್ ಬಾಟ್ ಉತ್ತರ ಒದಗಿಸುತ್ತದೆ. ಇದರಿಂದ ಮಾಹಿತಿಗಾಗಿ ಕೆಇಎ ಕಚೇರಿಗೆ ಖುದ್ದು ಬರುವುದಾಗಲಿ ಅಥವಾ ಇತರ ಕಚೇರಿಗಳಿಗೆ ಅಲೆಯುವುದಾಗಲಿ ತಪ್ಪುತ್ತದೆ. ಕುಳಿತಲ್ಲೇ‌ ಮಾಹಿತಿ ಪಡೆಯಲು ನೆರವಾಗುತ್ತದೆ

ಸದ್ಯ ಈ ಹೊಸ ವ್ಯವಸ್ಥೆ ಕೇವಲ ಇಂಗ್ಲಿಷ್ ನಲ್ಲಿ ಉತ್ತರ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಮಾಹಿತಿ ಸಿಗುವ ಹಾಗೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ. ತಿಂಗಳೊಳಗೆ ಕನ್ನಡದ ಅವತರಣಿಕೆ ಕೂಡ ಆರಂಭಿಸಲಾಗುತ್ತದೆ. ಬಿಎಸ್‌ಎನ್‌ಎಲ್‌ ಇದರ ನಿರ್ವಹಣೆ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.