ವಿಜಯಪುರ ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಲು ಸರ್ಕಾರ ಬದ್ಧ, ದೆಹಲಿ ಸಭೆಯಲ್ಲೂ ಪ್ರಸ್ತಾಪ: ಡಿಸಿಎಂ ಡಿಕೆಶಿ
ಕನ್ನಡ ಸುದ್ದಿ  /  ಕರ್ನಾಟಕ  /  ವಿಜಯಪುರ ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಲು ಸರ್ಕಾರ ಬದ್ಧ, ದೆಹಲಿ ಸಭೆಯಲ್ಲೂ ಪ್ರಸ್ತಾಪ: ಡಿಸಿಎಂ ಡಿಕೆಶಿ

ವಿಜಯಪುರ ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಲು ಸರ್ಕಾರ ಬದ್ಧ, ದೆಹಲಿ ಸಭೆಯಲ್ಲೂ ಪ್ರಸ್ತಾಪ: ಡಿಸಿಎಂ ಡಿಕೆಶಿ

ಉತ್ತರ ಕರ್ನಾಟಕದ ಅತಿ ದೊಡ್ಡ ಜಲಾಶಯಗಳಲ್ಲಿ ಒಂದಾದ ಆಲಮಟ್ಟಿ ಜಲಾಶಯದ ಮಟ್ಟವನ್ನು ಎತ್ತರಿಸಿ ನೀರಿನ ಸಂಗ್ರಹ ಹೆಚ್ಚಿಸಲು ಸರ್ಕಾರ ಬದ್ದವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ವಿಜಯಪುರದ ಆಲಮಟ್ಟಿ ಜಲಾಶಯ ಮಟ್ಟ ಏರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ.
ವಿಜಯಪುರದ ಆಲಮಟ್ಟಿ ಜಲಾಶಯ ಮಟ್ಟ ಏರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ.

ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ ವಿಚಾರವಾಗಿ ಸಂಬಂಧಪಟ್ಟ ಸಚಿವರನ್ನು ಕರೆಸಿ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಿದ್ದು, 2 ದಿನಗಳಲ್ಲಿ ಅವರು ತಮ್ಮ ಅಭಿಪ್ರಾಯ ನೀಡಲಿದ್ದಾರೆ. ಇವುಗಳ ಆಧಾರದ ಮೇಲೆ ಕೇಂದ್ರ ಸಚಿವಾಲಯದ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಪ್ರಸ್ತಾಪಿಸುತ್ತೇವೆ ಎನ್ನುವುದು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸದ ನುಡಿ.

ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಆಲಮಟ್ಟಿ ಆಣೆಕಟ್ಟೆ ಎತ್ತರಿಸುವ ಈ ಯೋಜನೆ ಜಾರಿಗೆ ಸರ್ಕಾರ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ಅಗತ್ಯ ಹಣ ಮೀಸಲಿಡಲಾಗುವುದು" ಎಂದರು.

ಆಂಧ್ರ ಹಾಗೂ ತೆಲಂಗಾಣಕ್ಕೆ 13 ಟಿಎಂಸಿ ನೀರು ಲಾಭವಾಗಲಿದೆ ಎಂದು ಕೇಳಿದಾಗ, "ಅವರಿಗೆ ಎಷ್ಟಾದರೂ ಲಾಭ ಆಗಲಿ, ನಷ್ಟ ಆಗಲಿ. ನಾವು ಅಣೆಕಟ್ಟಯನ್ನು 524 ಮೀಟರ್ ಗಳಿಗೆ ಎತ್ತರಿಸಬೇಕು. ಅದಕ್ಕೆ ಎಷ್ಟು ಬೇಕೋ ಅಷ್ಟು ಪ್ರಯತ್ನ ನಾವು ಮಾಡುತ್ತೇವೆ" ಎಂದು ತಿಳಿಸಿದರು.

ಟನಲ್ ರಸ್ತೆ, ಮೆಟ್ರೋಗೆ ಅಗತ್ಯವಿರುವ ಜಾಗ ಪಡೆಯುತ್ತೇವೆ

ಬೆಂಗಳೂರು ಟನಲ್ ರಸ್ತೆ ಹಾಗೂ ಮೆಟ್ರೋ ಕಾಮಗಾರಿಗೆ ಹೆಬ್ಬಾಳ ಬಳಿಯ ಜಾಗದ ವಿಚಾರವಾಗಿ ನಡೆದ ಸಭೆಯ ಬಗ್ಗೆ ಕೇಳಿದಾಗ, "ಹೆಬ್ಬಾಳ ಜಂಕ್ಷನ್ ಬಹಳ ಮುಖ್ಯವಾದ ಜಾಗ. ಇಲ್ಲಿ ಮೆಟ್ರೋ ಹಾಗೂ ಟನಲ್ ರಸ್ತೆ ಅವಶ್ಯವಿದೆ. ಹೀಗಾಗಿ ನಾವು ಅಗತ್ಯವಿರುವ ಜಾಗವನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ನಾವು ಯೋಜನೆ ಹಿಂಪಡೆಯಲು ಸಾಧ್ಯವಿಲ್ಲ. ಮೆಟ್ರೋ ಹಾಗೂ ಟನಲ್ ರಸ್ತೆ ಅಧಿಕಾರಿಗಳು ಸೇರಿ ಇದರ ವಿನ್ಯಾಸ ಸಿದ್ಧಪಡಿಸುವಂತೆ ಸೂಚಿಸಿದ್ದೇವೆ. ಇದಕ್ಕೆ ಅಗತ್ಯವಿರುವ ಮಿಲಿಟರಿ ಜಾಗ ಹಾಗೂ ಖಾಸಗಿ ಜಾಗ ಎಷ್ಟು ಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ಟಿಡಿಆರ್ ಅಥವಾ ಎಫ್ ಎ ಆರ್ ಮೂಲಕ ಪರಿಹಾರ ನೀಡಲು ನಾವು ಬದ್ಧವಾಗಿದ್ದೇವೆ. ನಾವು ಈ ಜಾಗ ಬಿಟ್ಟು ಕೊಡಲು ಸಿದ್ದವಿಲ್ಲ‌. ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಬೇಕಾಗಿದ್ದು, ಇದಕ್ಕೆ ಅಗತ್ಯವಿರುವ ಜಾಗದ ವಿಚಾರವಾಗಿ ನಾವು ಸಭೆ ಮಾಡಿದ್ದೇವೆ" ಎಂದರು.

ತಮ್ಮ ಸಮುದಾಯ ತಿಳಿಸಲು ಮುಕ್ತ ಅವಕಾಶ ನೀಡಿದ್ದೇವೆ

ಒಳ ಮೀಸಲಾತಿ ವಿಚಾರವಾಗಿ ಸಮೀಕ್ಷೆ ಆರಂಭವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ "ಒಳ ಮೀಸಲಾತಿಗೆ ಸಮೀಕ್ಷೆ ಮಾಡಲು ಸಚಿವ ಸಂಪುಟ ತೀರ್ಮಾನ ಮಾಡಿದೆ. ಇದಕ್ಕಾಗಿ ಸಮಿತಿ ಮಾಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಗೊಂದಲ ಇಲ್ಲದಂತೆ ಜನರು ತಮ್ಮ ಜಾತಿಗಳನ್ನು ಸ್ಪಷ್ಟವಾಗಿ ಮಾಹಿತಿ ನೀಡಬೇಕು ಎಂದು ಮುಕ್ತ ಅವಕಾಶ ಮಾಡಿಕೊಡಲಾಗಿದೆ" ಎಂದು ತಿಳಿಸಿದರು.

ಒಳ ಮೀಸಲಾತಿ ಬಗ್ಗೆ ಯಾವುದೇ ಗೊಂದಲ ಇಲ್ಲ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದೆ. ಈ ಸಮುದಾಯಗಳಲ್ಲಿ ಕೆಲವು ಪಂಗಡಗಳು ಸರಿಯಾಗಿ ಮಾಹಿತಿ ನೀಡಿಲ್ಲ, ನಮ್ಮ ಸಂಖ್ಯೆ ಹೆಚ್ಚಿದೆ, ನಗರ ಪ್ರದೇಶದಲ್ಲಿ ಇರುವವರು ತಮ್ಮ ಸಮುದಾಯವನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ" ಎಂದು ಹೇಳಿದರು.

ಧಾರ್ಮಿಕ ಆಚರಣೆಗೆ ಅಡ್ಡಿ ಮಾಡಬಾರದು

ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿರುವ ಬಗ್ಗೆ ಕೇಳಿದಾಗ, "ಧಾರ್ಮಿಕ ಆಚರಣೆ, ವಿಚಾರಗಳಿಗೆ ಸರ್ಕಾರ, ಅಧಿಕಾರಿಗಳು ಅಡ್ಡಿ ಮಾಡಬಾರದು. ಕೇಂದ್ರ ಸರ್ಕಾರದ ಈ ಕ್ರಮ ಸರಿಯಲ್ಲ" ಎಂದು ಹೇಳಿದರು ಡಿಕೆಶಿ.

ಮಳವಳ್ಳಿ ಪ್ರವಾಸ

ಬಳಿಕ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟಿನಿಂದ ರಾಮನಗರ ಜಿಲ್ಲೆಯ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ, ಸ್ಥಳ ಪರೀಶಿಲನೆ ನಡೆಸಿದರು. ಇದಕ್ಕೂ ಮೊದಲು ಹಿರೇನಾಗರದಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ನಿಕಟಪೂರ್ವ ಸಂಸದರಾದ ಡಿ.ಕೆ.ಸುರೇಶ್, ಶಾಸಕರಾದ ಸಿ.ಪಿ.ಯೋಗೇಶ್ವರ್, ಉದಯ್ ಕದಲೂರು, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಮಾಜಿ ಶಾಸಕ ಅಶ್ವಥ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.