Siddaramaiah CM: ಸಿದ್ದರಾಮಯ್ಯ ಸಿಎಂ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ನಿಜವಾಗಬಹುದೇ ಬೆಂಬಲಿಗನ ಆಶಯ
Karnataka Next Chief Minister: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಂದು ಬಹುತೇಕರು ನಂಬಿದ್ದಾರೆ. ಮೈಸೂರಿನ ಅಭಿಮಾನಿಯೊಬ್ಬ ಸಿದ್ದರಾಮಯ್ಯ ಸಿಎಂ ಎಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ.
ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಹೆಸರು ಮುನ್ನೆಲೆಯಲ್ಲಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದು, ಮೈಸೂರಿನ ಸಿದ್ದರಾಮಯ್ಯ ಬೆಂಬಲಿಗನೋರ್ವ “ಸಿದ್ದರಾಮಯ್ಯ ಸಿಎಂ” ಎಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಇದೀಗ ಬಂದ ಕೆಲವು ವರದಿಗಳ ಪ್ರಕಾರ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಲಾಗುತ್ತಿದೆ. ಈ ಕುರಿತು ದಿ ಕ್ವಿಂಟ್ ಬಲ್ಲ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಗೆ ಸುಮಾರು 45 ಶಾಸಕರ ಬೆಂಬಲ ಮಾತ್ರ ದೊರಕಿದೆ. ಆದರೆ, ಸಿದ್ದರಾಮಯ್ಯ ಅವರಿಗೆ ಗರಿಷ್ಠ ಪ್ರಮಾಣದ ಶಾಸಕರ ಬೆಂಬಲ ದೊರಕಿದೆ. ಹೀಗಾಗಿ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಆದರೆ, ಈ ಕುರಿತು ಕಾಂಗ್ರೆಸ್ ಪಕ್ಷವು ಅಂತಿಮ ತೀರ್ಮಾನಕ್ಕೆ ಇನ್ನೂ ಬಂದಿಲ್ಲ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇರಲಿ ನಾವೀಗ ಹಚ್ಚೆ ಹಾಕಿಕೊಂಡ ಅಭಿಮಾನಿಯ ಸುದ್ದಿ ಓದೋಣ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿಯಾಗಿರುವ ಈತ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡು ಎಲ್ಲರ ಗಮನಸೆಳೆದಿದ್ದಾನೆ. ಅಲ್ಲದೆ ಇದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ. ಮತ್ತೊಂದೆಡೆ ಸಿದ್ದರಾಮಯ್ಯ ನಿವಾಸದ ಬಳಿ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೇ ಅವರ ನಿವಾಸದ ಸುತ್ತಮುತ್ತ “ಮುಂದಿನ ಸಿಎಂ ಸಿದ್ದರಾಮಯ್ಯ” ಎಂದು ಬ್ಯಾನರ್ ಹಾಕಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಪೋಸ್ಟರ್ ಹಾಕಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.
ಚುನಾವಣೆ ಸಂದರ್ಭದಿಂದಲೂ ಸಿದ್ದರಾಮಯ್ಯ ಅವರು ಯಾವುದೇ ಸಭೆ ಸಮಾರಂಭಗಳಿಗೆ ಹೋದರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಗಳು ಕೇಳಿ ಬರುತ್ತಿತ್ತು, ಇದೀಗ ಸಿಎಂ ಯಾರು ಎಂಬ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಅಭಿಮಾನಿಗಳ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬ್ಯಾನರ್ ಸಾಕಷ್ಟು ವೈರಲ್ ಆಗುತ್ತಿದೆ. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಂದಿನ ಸಿಎಂ ಯಾರು ಎಂದು ತೀರ್ಮಾನವಾಗಲಿದೆ.