ಮೈಸೂರು, ತುಮಕೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ, ಬೆಂಗಳೂರಲ್ಲೂ ಸಾಧಾರಣ ಮಳೆ ಮುಂದುವರಿಕೆ
ದಕ್ಷಿಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗುವ ಸೂಚನೆಯಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯೇ ಆಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರು:ಕರ್ನಾಟಕದಲ್ಲಿ ಬಿಸಿಲು ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದರೆ, ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮಳೆಯ ಪ್ರಮಾಣವೂ ಅಧಿಕವಾಗಿದೆ.ಮೈಸೂರು, ಮಂಡ್ಯ, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮೇ 3 ರ ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಇದಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು ಸಹಿತ ಹದಿಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಂತೂ ಕೆಲ ದಿನಗಳಿಂದ ಸಂಜೆ ಎಡಬಿಡದೇ ಮಳೆಯಾಗುತ್ತಿದ್ದು, ಶನಿವಾರ ಸಂಜೆಯೂ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಬಹುದು ಎನ್ನುವ ಸೂಚನೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆ ಮುನ್ಸೂಚನೆ
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಶನಿವಾರದಂದು ಹಗುರದಿಂದ ಮಧ್ಯಮ ಮಳೆಯಾಗಲಿದೆ. ಗುಡುಗು ಕೂಡ ಇರಲಿದೆ. ಉಡುಪಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಗುರವಾದ ಮಳೆ ಗುಡುಗಿನೊಂದಿಗೆ ಆಗಮಬಹುದು.ಉತ್ತರ ಕನ್ನಡ ಜಿಲ್ಲೆಯ ಒಣಹವೆ ಮುಂದುವರಿಯಲಿದೆ.
ಉತ್ತರ ಕರ್ನಾಟಕ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ.
ದಕ್ಷಿಣ ಕರ್ನಾಟಕದ ಮಂಡ್ಯ, ಮೈಸೂರು, ತುಮಕೂರು, ರಾಮನಗರ ಹಾಗೂ ಹಾಸನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯೇ ಆಗಲಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆ ಗುಡುಗು ಸಹಿತ ಸುರಿಯಲಿದೆ,
ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಗಾಳಿಯೊಂದಿಗೆ ಲಘು ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಕರ್ನಾಟಕದಲ್ಲಿ ಗುರುವಾರ ಹಾಗೂ ಶುಕ್ರವಾರದಂದು ಹಲವು ಭಾಗಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ತುಮಕೂರು ಜಿಲ್ಲೆಯ ಸಿರಾ,ಬರಗೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ಚಿಕ್ಕಮಗಳೂರು ಜಿಲ್ಲೆಯ ಯಗಟಿ, ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಉಪ್ಪಿನಂಗಡಿ, ಬೆಳ್ತಂಗಡಿಯಲ್ಲಿ ಉತ್ತಮ ಮಳೆಯಾಗಿದೆ.
ಬಿಸಿಲಿನ ಪ್ರಮಾಣ
ಕರ್ನಾಟಕದಲ್ಲಿ ಶುಕ್ರವಾರದಂದು ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣವಿತ್ತು. ಕರಾವಳಿ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನವು 33-37 ಡಿಗ್ರಿ ಸೆಲ್ಸಿಯಸ್, ಬೆಳಗಾವಿ,ಬಾಗಲಕೋಟೆ, ಧಾರವಾಡ,ಗದಗ,ಕೊಪ್ಪಳ, ಹಾವೇರಿ ಜಿಲ್ಲೆಯಲ್ಲಿ 36 ರಿಂದ 39 ಡಿಗ್ರಿ ಸೆಲ್ಸಿಯಸ್, ಬೀದರ್, ವಿಜಯಪುರ, ರಾಯಚೂರಿನಲ್ಲಿ 40-41 ಡಿಗ್ರಿ ಸೆಲ್ಸಿಯಸ್, ಕಲಬುರಿಗಿಯಲ್ಲಿ 42 ಡಿಗ್ರಿ ಸೆಲ್ಸಿಯಸ್ ದಾಖಲಾಯಿತು. ದಕ್ಷಿಣ ಕರ್ನಾಟಕದ ಆಗುಂಬೆ, ಚಿಕ್ಕಮಗಳೂರು, ಹಾಸನ, ಮಡಿಕೇರಿಯಲ್ಲಿ 29 ರಿಂದ 32 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ಶಿವಮೊಗ್ಗ, ಮೈಸೂರುಗಳಲ್ಲಿ 29 ರಿಂ 32 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ, ದಾವಣಗೆಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು.
ಬೆಂಗಳೂರು ಹವಾಮಾನ
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವೇ ಇರಲಿದೆ. ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಲಿದೆ. ಗಾಳಿಯ ವೇಗವೂ ಅಲ್ಲಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ತಾಪಮಾನವು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ನಷ್ಟು ಇರಬಹುದು.