KRS Reservoir: ಕೆಆರ್ಎಸ್ನಿಂದ ದಾಖಲೆಯ 1.70 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಶ್ರೀರಂಗಪಟ್ಟಣ ಪ್ರವಾಸಿ ತಾಣಗಳು ಬಂದ್
cauvery flooding ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೆಆರ್ಎಸ್ ಜಲಾಶಯದಿಂದ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪ್ರವಾಹದ ಸನ್ನಿವೇಶ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಕಂಡು ಬಂದಿದೆ.

ಮಂಡ್ಯ: ಕೊಡಗು,ಮೈಸೂರು, ಹಾಸನ ಮಂಡ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಒಳ ಹರಿವಿನ ಪ್ರಮಾಣವೇ ಒಂದೂವರೆ ಲಕ್ಷಕ್ಕೂ ಅಧಿಕ ತಲುಪಿದೆ. ಇದರಿಂದ ಕಾವೇರಿ ನದಿಯ ಹೊರಹರಿವು ತೀವ್ರವಾಗಿದ್ದು, ಜಲಾಶಯದಿಂದ ಜುಲೈ 31ರ ಬುಧವಾರ ಸಂಜೆಯಿಂದಲೇ ಸುಮಾರು 1,70,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿರುತ್ತದೆ. ಇದು ಇತ್ತೀಚಿನ ವರ್ಷಗಳಲ್ಲಿ ದಾಖಲೆ ಪ್ರಮಾಣದ ನೀರು. ಈ ಹಿಂದೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿತ್ತು. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಹೊರ ಹರಿವನ್ನು ಏರಿಕೆ ಮಾಡಲಾಗಿದೆ ಎಂದು ಮಂಡ್ಯ ಡಿಸಿ ಡಾ.ಕುಮಾರ ಖಚಿತಪಡಿಸಿದ್ದಾರೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ಸ್ಥಳಗಳ ವೀಕ್ಷಣೆಯನ್ನು ಆಗಸ್ಟ್ 1 ಹಾಗೂ 2 ರಂದು ನಿರ್ಭಂದಿಸುವ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಕೆಆರ್ಎಸ್ ಜಲಾಶಯಕ್ಕೆ ಬುಧವಾರ ರಾತ್ರಿಯ ಹೊತ್ತಿಗೆ 154460 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 172161 ಕ್ಯೂಸೆಕ್ ಇದೆ. ಜಲಾಶಯದ ನೀರಿನ ಮಟ್ಟವು 123.40 ಅಡಿಯಷ್ಟಿದೆ. ಜಲಾಶಯದಲ್ಲಿ 47.516 ಟಿಎಂಸಿ ನೀರು ಸಂಗ್ರಹವಾಗಿದೆ.
ಭಾರೀ ಮಳೆಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ಸ್ಥಳಗಳನ್ನು ಪ್ರವಾಸಿಗರಿಗೆ ನಿಷೇಧಿಸಲಾಗಿದೆ. ಕೆ.ಆರ್.ಎಸ್ ಜಲಾಶಯ, ಬೃಂದಾವನ ಉದ್ಯಾನವನ, ಪಶ್ಚಿಮವಾಹಿನಿ, ಗೋಸಾಯ್ ಘಾಟ್, ಬಲಮುರಿ ಎಡಮುರಿ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಭ ದೇವಸ್ಥಾನದ ಪಕ್ಕದಲ್ಲಿರುವ ಸ್ನಾನ ಘಟ್ಟ, ರಂಗನತಿಟ್ಟು ಹಾಗೂ ಕೆ.ಆರ್.ಎಸ್ ಜಲಾಶಯದಿಂದ ಕಾವೇರಿ ನದಿಯ ಹೊರಹರಿವಿನ ಆಜು-ಬಾಜಿ ಸ್ಥಳಗಳ ವೀಕ್ಷಣೆಯನ್ನು ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಆಗಸ್ಟ್ 01 ಮತ್ತು 02 ರಂದು ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಿ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತಿದೆ. ಜುಲೈ 31 ರಂದು ಸಂಜೆ 5 ಗಂಟೆಗೆ ಕೆ.ಆರ್.ಎಸ್ ಜಲಾಶಯದಿಂದ 1,70,000 ಕ್ಯೂಸೆಕ್ಸ್ ಹೊರಹರಿವು (Out flow) ನೀರನ್ನು ಬಿಡಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇದಿಸುವುದು. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಸೂಚನೆಯನ್ನು ನೀಡಲಾಗಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಗಸ್ತಿಗೆ ತಂಡಗಳನ್ನೂ ನಿಯೋಜಿಸಲಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರಗಳನ್ನು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.