ಬೆಂಗಳೂರು, ದಕ್ಷಿಣ ಕನ್ನಡ, ಬಳ್ಳಾರಿ, ಕಲಬುರಗಿ, ಧಾರವಾಡ ಸಹಿತ 20 ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ; ಮೇ 16 ರವರೆಗೂ ಉಂಟು ಮಳೆ
ಕರ್ನಾಟಕದಲ್ಲಿ ಮೇ ತಿಂಗಳಲ್ಲೂ ಮಳೆ ಮುಂದುವರೆದಿದ್ದು. ಭಾನುವಾರವೂ ಬೆಂಗಳೂರು ಸಹಿತ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು:ಬೆಂಗಳೂರು ಸೇರಿದಂತೆ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿಯೂ ಮಳೆಯಾಗುತ್ತಿದ್ದು, ಈ ತಿಂಗಳ ಮೂರನೇ ವಾರವೂ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಅದರಲ್ಲೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಬಿರು ಬಿಸಿಲಿನಿಂದ ಬಳಲಿರುವ ಉತ್ತರ ಕರ್ನಾಟಕದ ಕಲಬುರಗಿ ಸಹಿತ ಪ್ರಮುಖ ಜಿಲ್ಲೆಗಳು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೇ 11ರ ಭಾನುವಾರವು ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಕೆಲ ಭಾಗಗಳಲ್ಲಿ ಬಿಸಿಲು ಕೂಡ ಇರಲಿದೆ ಎಂದು ತಿಳಿಸಲಾಗಿದೆ.
ಹವಾಮಾನ ಹೇಗಿರಲಿದೆ
ಭಾನುವಾರದಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗಬಹುದು.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿನ ಒಂದು ಅಥವಾ ಎರಡು ಸ್ಥಳಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಗುಡುಗು ಕೂಡ ಇರಲಿದೆ ಎಂದು ತಿಳಿಸಲಾಗಿದೆ. ಅದೇ ರೀತಿ ಬೀದರ್ ಹಾಗೂ ಯಾದಗಿರಿ ಜಿಲ್ಲಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ಗಾಳಿಯ ವೇಗವು ಭಾನುವಾರ ಕೆಲವು ಭಾಗದಲ್ಲಿ ಹೆಚ್ಚಿರಲಿದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ.ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯೂ ಹಲವು ಭಾಗದಲ್ಲಿದೆ. ಜತೆಗೆ ಗಾಳಿಯೂ ಜೋರಾಗಿಯೇ ಬೀಸುವ ಮುನ್ಸೂಚನೆಯಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ದಿನವೂ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಅಂದಾಜಿದೆ.
ಮಳೆ ಎಲ್ಲೆಲ್ಲಿ ಆಗಿದೆ
ಕರ್ನಾಟಕದಲ್ಲಿ ಶುಕ್ರವಾರ ಹಾಗೂ ಶನಿವಾರವೂ ಕೆಲವು ಭಾಗದಲ್ಲಿ ಮಳೆಯಾಗಿದೆ.ಕೋಲಾರದಲ್ಲಿ ಅತ್ಯಧಿಕ ಐದು ಸೆ.ಮೀ, ಚಿಂತಾಮಣಿ, ಕೋಲಾರದ ರಾಯಲ್ಪಾಡುವಿನಲ್ಲೂ ಮಳೆಯಾಗಿದೆ.
ಶನಿವಾರದಂದು ಹಲವು ಭಾಗದಲ್ಲಿ ಬಿಸಿಲಿನ ವಾತಾವರಣವಿತ್ತು.ಕರಾವಳಿ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನವು 34 ರಿಂದ 37 ಡಿಗ್ರಿ ಸೆಲ್ಸಿಯಸ್ ನಷ್ಟಿತ್ತು. ಬೆಳಗಾವಿ, ಬಾಗಲಕೋಟೆ, ಧಾರವಾಡ,ಗದಗ, ಹಾವೇರಿ, ವಿಜಯಪುರ ಹಾಗೂ ಕೊಪ್ಪಳ ಭಾಗದಲ್ಲಿ 32 ರಿಂದ 35 ಡಿಗ್ರಿ ಸೆಲ್ಸಿಯಸ್, ಬೀದರ್, ಕಲಬುರಗಿ, ರಾಯಚೂರು ಭಾಗದಲ್ಲಿ ಅತ್ಯಧಿಕ 36 ರಿಂದ 39 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಆಗುಂಬೆ, ಚಿಕ್ಕಮಗಳೂರು, ಮಡಿಕೇರಿಯಲ್ಲಿ 30 ರಿಂದ 32 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ,ಚಿಂತಾಮಣಿ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ 33 ರಿಂದ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕೆಲವೆಡೆ ಏರಿಕೆ
ಶನಿವಾರದಂದು ಕಾರವಾರ ಹಾಗೂ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಅಧಿಕ ಇರುವುದು ಕಂಡು ಬಂದಿತು. ವಿಜಯಪುರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಮನಾರ್ಹವಾಗಿ ಕಡಿಮೆಯಾದರೆ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ಬೀದರ್ನಲ್ಲಿಯೇ ಅತ್ಯಧಿಕ 39 ಡಿಗ್ರಿ ಸೆಲ್ಸಿಯಸ್ ಇತ್ತು.