Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಇಂದು ಗುಡುಗು ಸಹಿತ ಭಾರಿ ಮಳೆಯ ಸಂಭವ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ವಿಜಯನಗರ ಸೇರಿ ಹಲವು ಜಿಲ್ಲೆಗಳಲ್ಲಿ ಜೂನ್ 7ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರು (Bangalore Rain) ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Bangalore Meteorological Centre) ಮುನ್ಸೂಚನೆ ನೀಡಿದೆ.
ನಿನ್ನೆ ಕೊಡಗು ಜಿಲ್ಲೆಯ ನಾಪ್ಲೋಕ್ಲುನಲ್ಲಿ 5 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರ ತಲಾ 3, ಅರಕಲಗೂಡು, ಮೂರ್ನಾಡು ತಲಾ 2, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ ಹಾಗೂ ಮೈಸೂರಿನಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ, ಮಂಡ್ಯ ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇದೆ.
ನಾಳೆ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಇಂದು (ಜೂನ್ 5, ಸೋಮವಾರ) ಮತ್ತು ನಾಳೆ (ಜೂನ್ 6, ಮಂಗಳವಾರ) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಜೂನ್ 7ರ ವರೆಗೆ ಮಳೆಯಾಗಲಿದೆ.
ರಾಜ್ಯದ ಹಲವು ಕಡೆಗಳಲ್ಲಿ ಬಿಸಿಲ ಬೇಗೆಯಿಂದ ಜನರು ತತ್ತರಗೊಂಡಿದ್ದರು. ಸತತ ಮಳೆಯಿಂದಾಗಿ ವಾತಾವರಣ ಕೂಲ್ ಆಗಿದೆ. ಉಷ್ಣಾಂಶ ಕೂಡ ಕಡಿಮೆಯಾಗುತ್ತಿದ್ದು, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವರ್ಷ ಮೇ 29 ರಂದು ಮುಂಗಾರು ಆರಂಭವಾಗಿತ್ತು. ಆದರೆ ಈ ಬಾರಿ ಮುಂಗಾರು ಜೂನ್ 1ಕ್ಕೆ ಕೇರಳ ಪ್ರವೇಶಿಸಿದೆ. 2022ಕ್ಕೆ ಹೋಲಿಸಿಕೂಂಡರೆ ನಾಲ್ಕು ದಿನ ತಡವಾಗಿ ಮುಂಗಾರು ಕೇರಳ ಪ್ರವೇಶಿಸಿದೆ.