ಮಳೆ ಮುನ್ಸೂಚನೆ 2024; ಕರಾವಳಿಯಲ್ಲಿ ಜುಲೈ 26ರ ತನಕ ಭಾರಿ ಮಳೆ, ಉಳಿದೆಡೆ ಮಳೆಯ ತೀವ್ರತೆ ಇಳಿಕೆ
ಮಳೆ ಮುನ್ಸೂಚನೆ 2024; ಕರಾವಳಿಯಲ್ಲಿ ಜುಲೈ 26ರ ತನಕ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆ (ಜುಲೈ 20) ರೆಡ್ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ ಉಳಿದೆಡೆ ಮಳೆಯ ತೀವ್ರತೆ ಇಳಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಹೇಳಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ವ್ಯಾಪಕವಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಜುಲೈ 26ರ ತನಕ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವರದಿ ಪ್ರಕಾರ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆ (ಜುಲೈ 20) ರೆಡ್ ಅಲರ್ಟ್ ಘೋಷಣೆಯಾಗಿದೆ. ಬಳಿಕ ಧಾರಾಕಾರ ಮಳೆ ಮುನ್ಸೂಚನೆ ಇದ್ದು, ಯಾವುದೇ ಅಲರ್ಟ್ ಘೋಷಣೆಯಾಗಿಲ್ಲ.
ಇನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ, ಜುಲೈ 19 ರಿಂದ ಜುಲೈ 27 ರವರೆಗೆ ಕಾವೇರಿ ಜಲಾನಯನ ಪ್ರದೇಶದ ಮಳೆ ಮುನ್ಸೂಚನೆಯಂತೆ ಜುಲೈ 19 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಚದುರಿದಂತೆ ಸಾಧಾರಣ ಮಳೆ ನಂತರ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 20 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ನಂತರ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 19 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಸ್ಎಚ್ಎಆರ್ - ಇಸ್ರೋ ದತ್ತಾಂಶ ಆಧರಿಸಿ ಮಳೆ ಮುನ್ಸೂಚನೆ ವರದಿ ನೀಡಿದೆ.
ಜುಲೈ 20 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್
ಮುಂದಿನ 2 ದಿನಗಳ ಜಿಲ್ಲಾವಾರು ಮಳೆ ಎಚ್ಚರಿಕೆ ಪ್ರಕಾರ, ಜುಲೈ 19 ರಂದು ಅಂದರೆ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ
ಜುಲೈ 20 ರಂದು- ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ರೆಡ್ಅಲರ್ಟ್ ಘೋಷಿಸಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಮುಂದಿನ 5 ದಿನಗಳ ಉಪ ವಿಭಾಗವಾರು ಮಳೆ ಎಚ್ಚರಿಕೆ
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 21 ರಂದು ಕರಾವಳಿ ಜಿಲ್ಲೆಗಳಿಗೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನುಳಿದ ದಿನಗಳಲ್ಲಿ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಟ್ವೀಟ್ ಮಾಡಿದೆ.
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
