ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಸಾಧ್ಯತೆ, ಚಳಿ ಮುಂದುವರಿಕೆ; ಡಿಸೆಂಬರ್ 12ರ ಹವಾಮಾನ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಸಾಧ್ಯತೆ, ಚಳಿ ಮುಂದುವರಿಕೆ; ಡಿಸೆಂಬರ್ 12ರ ಹವಾಮಾನ

ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಸಾಧ್ಯತೆ, ಚಳಿ ಮುಂದುವರಿಕೆ; ಡಿಸೆಂಬರ್ 12ರ ಹವಾಮಾನ

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಕುಸಿದಿದೆ. ಈ ನಡುವೆ ಮತ್ತೆ ಮಳೆರಾಯ ಅ‌ಬ್ಬರಿಸುವ ಮುನ್ಸೂಚನೆ ನೀಡಿದ್ದಾನೆ. ಇಂದು (ಡಿಸೆಂಬರ್ 12) ಹಾಗೂ ನಾಳೆ (ಡಿಸೆಂಬರ್ 13) ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಟ್ಟು 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ಹವಾಮಾನ ಡಿಸೆಂಬರ್ 12
ಕರ್ನಾಟಕ ಹವಾಮಾನ ಡಿಸೆಂಬರ್ 12

Karnataka Weather: ಫೆಂಗಲ್ ಚಂಡಮಾರುತದ ಪರಿಣಾಮದಿಂದಾಗಿ ಕಳೆದ ಕೆಲವು ದಿನಗಳ ಹಿಂದೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಒಂದೆಡೆ ಚಳಿ, ಇನ್ನೊಂದೆಡೆ ಮಳೆ ಸೇರಿ ಜನರು ತತ್ತರಿಸಿದ್ದರು. ಬೆಳೆ ಕಟಾವಿಗೆ ಬಂದಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದೇ ಹೋಯಿತು ಎಂಬಂತಹ ಸ್ಥಿತಿ ಎದುರಾಗಿತ್ತು.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮೂರ್ನ್ಕಾಲು ದಿನಗಳಿಂದ ಮಳೆ ಕೊಂಚ ಬಿಡುಗಡೆ ನೀಡಿದ್ದು, ಇದೀಗ ಇಂದಿನಿಂದ (ಡಿಸೆಂಬರ್ 12) ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಇಂದು, ನಾಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಜೋರಿರಲಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಎಲ್ಲೆಲ್ಲಿ ಮಳೆ ಇಲ್ಲ ಎಂಬ ವಿವರ ಇಲ್ಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಪ್ರತಾಪ ಜೋರಿದೆ. ಕೆಲವು ಕಡೆ ಕೊಂಚ ಚಳಿಯ ವಾತಾ‌ವರಣವಿದೆ. ಇಂದಿನಿಂದ 3 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಡಿಸೆಂಬರ್ 13) ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಧಾರವಾಡ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಡಿಸೆಂಬರ್ 17ರವರೆಗೆ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ದಟ್ಟ ಮಂಜಿನಿಂದ ಕೂಡಿರಲಿದೆ.

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್

ಇಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಗುಡುಗು, ಮಿಂಚು ಕೂಡ ಇರಲಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಮಳೆ ಜೋರಿರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಬೆಳಗಿನಿಂದಲೇ ಅಲ್ಲಲ್ಲಿ ಮಳೆ

ಬೆಂಗಳೂರಿನಲ್ಲಿ ಚಳಿ ಜೋರಿದೆ. ಇಂದು ಬೆಳಗಿನಿಂದಲೇ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಬೆಳಗಿನಿಂದಲೇ ಮಳೆ ಶುರುವಾಗಿದೆ.  ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ಮನೆಯಿಂದ ಹೊರ ಹೋಗುವ ಮುನ್ನ ಛತ್ರಿ, ರೈನ್‌ಕೋಟ್ ತೆಗೆದುಕೊಂಡು ಹೋಗಲು ಮರೆಯದಿರಿ. ನಾಳೆಯೂ ಬೆಂಗಳೂರಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Whats_app_banner